ಇತ್ತೀಚಿನ ಸುದ್ದಿ
ಜನಸ್ನೇಹಿ ಆಡಳಿತಕ್ಕೆ ಜನತಾ ದರ್ಶನ ಪೂರಕ: ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
25/09/2023, 19:04
ಮಂಗಳೂರು(reporterkarnataka.com):ರಾಜ್ಯದಲ್ಲಿ ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಪೂರಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಸೋಮವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಖ್ಯಮಂತ್ರಿಗಳು ಜನತಾ ದರ್ಶನ ಕಾರ್ಯಕ್ರಮ ಮಾಡುವುದನ್ನು ನಾವು ನೋಡಿದ್ದೇವೆ. ಈ ಹಿಂದೆಯೂ ಹಲವು ಮುಖ್ಯಮಂತ್ರಿಗಳು ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಜನತಾ ದರ್ಶನ ಮಾಡುತ್ತಿದ್ದಾರೆ. ಜತೆಗೆ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜನತಾ ದರ್ಶನ ಕಾರ್ಯಕ್ರಮ ಮಾಡಲು ಸೂಚಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆ ಯಾಗಿದೆ ಎಂದು ದಿನೇಶ್ ಗುಂಡೂರಾವ್ ನುಡಿದರು.
ಹೆಚ್ಚಿನ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ಚುರುಕಾಗಬೇಕು. ಒಳ್ಳೆಯ ಆಡಳಿತ ಕೊಡಬೇಕು ಎನ್ನುವ ಕಾರಣಕ್ಕೆ ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ. ಸರಕಾರದ ಕಾರ್ಯಕ್ರಮಗಳು ಅನುಷ್ಠಾನವಾಗಬೇಕು. ಜನರಿಗೆ ತಲುಪುವ ತರಹ ಆಗಬೇಕು ಎಂದು ಅವರು ಹೇಳಿದರು.
ಜನಪ್ರತಿನಿಧಿಗಳು ಹಾಗೂ ಸಚಿವರು ನೇರವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದರೆ ಸ್ಥಳದಲ್ಲೇ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ನೀಡಲು ಸಾಧ್ಯ. ಜನತಾ ದರ್ಶನದಲ್ಲಿ ಬಂದ ಪ್ರತಿ ಅರ್ಜಿಗಳಿಗೆ ನಂಬರ್ ಕೊಟ್ಟು ಫಾಲೋಪ್ ಆಗಲಿದೆ. ಕೆಲಸ ಆಗುತ್ತಾ, ಇಲ್ಲ ಯಾವುದಾದರೂ ಕಾನೂನು ತೊಡಕಿದೆಯೇ ಎನ್ನುವುದನ್ನು ನಿಗದಿತ ಸಮಯದಲ್ಲಿ ಜನರಿಗೆ ತಿಳಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಸಚಿವರು ನುಡಿದರು.
ಜನತಾ ದರ್ಶನ ಇಲ್ಲಿಗೆ ಮುಗಿಯುವುದಿಲ್ಲ. ಆಯಾಯ ಸಮಯಕ್ಕೆ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ಮುಂದಿನ ಜನತಾ ದರ್ಶನ ಕಾರ್ಯಕ್ರಮವನ್ನು ಬೇರೆ ಬೇರೆ ತಾಲೂಕುಗಳಲ್ಲಿ ನಡೆಸಲಾಗುವುದು. ಜನರು ಸಮಸ್ಯೆಗಳನ್ನು ಹೊತ್ತುಕೊಂಡು ನಮ್ಮ ಹತ್ತಿರ ಬರುವ ಹಾಗೆ ಆಗಬಾರದು. ನಾವೇ ಅವರ ಬಳಿ ಹೋಗುವ ಕಾರ್ಯ ನಡೆಯಬೇಕು ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಕೆಪಿಸಿಸಿ ವಕ್ತಾರ ವಿನಯರಾಜ್,
ಮಾಜಿ ಮೇಯರ್ ಶಶಿಧರ ಹೆಗ್ಡೆ, ಪಾಲಿಕೆ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ, ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ , ಜಿಪಂ ಸಿಇಒ,
ಎಸ್ಪಿ ಸೇರಿದಂತೆ ಅಧಿಕಾರಿಗಳು ವೇದಿಕೆಯಲ್ಲಿದ್ದರು.