ಇತ್ತೀಚಿನ ಸುದ್ದಿ
ಕರಿ ಪಿಲಿ, ಮರಿ ಪಿಲಿಗಳ ಘರ್ಜನೆಗೆ ಸಾಕ್ಷಿಯಾಗಲಿದೆ ಕಡಲನಗರಿ: 21ರಂದು ಮಂಗಳೂರಿನಲ್ಲಿ ‘ಕುಡ್ಲದ ಪಿಲಿಪರ್ಬ-2023’
17/10/2023, 20:27
ಮಂಗಳೂರು(reporterkarnataka.com): ತುಳುನಾಡಿನ ನೆಲದ ಪರಂಪರೆಯ ಹುಲಿವೇಷ ಕುಣಿತಕ್ಕೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ದೊರಕಿಸುವ ಮತ್ತು ಈ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಕುಡ್ಲದ ಪಿಲಿಪರ್ಬವನ್ನು ಕಳೆದ ವರ್ಷ ಯಶಸ್ವಿಯಾಗಿ ಆಯೋಜಿಸಿದ್ದು, ಅದರ ಮುಂದುವರಿದ ಭಾಗವಾಗಿ ದ್ವಿತೀಯ ವರ್ಷದ “ಕುಡ್ಲದ ಪಿಲಿಪರ್ಬ-2023” ದ ಹುಲಿವೇಷ ಸ್ಪರ್ಧಾಕೂಟ ಅಕ್ಟೋಬರ್ 21ರಂದು ನಗರದ ಕೇಂದ್ರ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದೆ.
ಪ್ರಖ್ಯಾತ ಯುವ ನಿರೂಪಕರು ಈ ಸ್ಪರ್ಧಾಕೂಟಕ್ಕೆ ಆಗಮಿಸಲಿದ್ದು ಕಾರ್ಯಕ್ರಮದ ಮೆರುಗು ಹೆಚ್ಚಿಸಲಿದ್ದಾರೆ. ಕೇಂದ್ರ ಮೈದಾನದ ಭವ್ಯ ಹಾಗೂ ವಿಶಾಲ ವೇದಿಕೆಯಲ್ಲಿ, ಜಿಲ್ಲೆಯ ಅತ್ಯಂತ ಪರಿಣಿತ ತೀರ್ಪುಗಾರರ ಸಮ್ಮುಖದಲ್ಲಿ, ಕರಾವಳಿಯ ಜನಪ್ರಿಯ 15 ಹುಲಿವೇಷ ತಂಡಗಳು ಸ್ಪರ್ಧಾಕೂಟದಲ್ಲಿ ಪಾಲ್ಗೊಳ್ಳಲಿದ್ದು, ಇಡೀ ದಿನ ಕಡಲನಗರಿ ಹುಲಿಗಳ ಭರ್ಜರಿ ಘರ್ಜನೆಗೆ ಸಾಕ್ಷಿಯಾಗಲಿದೆ. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮಕ್ಕಳಿಂದ ಹಿಡಿದು ಹಿರಿಯರ ತನಕ ಪ್ರತಿಯೊಬ್ಬ ಕಲಾಪ್ರೇಮಿಗೂ ಮುಕ್ತ ಅವಕಾಶವಿದ್ದು, ಸ್ಪರ್ಧಾಕೂಟದಲ್ಲಿ ಒಂದಕ್ಕಿಂತ ಒಂದು ವಿಭಿನ್ನತೆಯಿಂದ ಕೂಡಿರುವ ಹುಲಿವೇಷ ತಂಡಗಳಿಂದ ಇಡೀ ದಿನ ಸ್ಪರ್ಧಾಕೂಟದ ಮನರಂಜನೆಯಲ್ಲಿ ಮಿಂದೇಳುವ ಅವಕಾಶವಿದೆ. ಜನಸಾಮಾನ್ಯರ ಮನರಂಜನೆಯೇ ಈ ಸ್ಪರ್ಧಾಕೂಟದ ಪ್ರಮುಖ ಉದ್ದೇಶವೂ ಆಗಿದೆ.
ಪಿಲಿಪರ್ಬದಲ್ಲಿ ಭಾಗವಹಿಸುವ ಹುಲಿವೇಷ ತಂಡಗಳು ಮೆರವಣಿಗೆಯ ಮೂಲಕ ವೇದಿಕೆಗೆ ಪ್ರವೇಶ ಮಾಡಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಪ್ರತಿ ತಂಡವೂ 38 ಕೆಜಿ ಭಾರದ ಅಕ್ಕಿಮುಡಿ ಹಾರಿಸುವುದು ಕಡ್ಡಾಯವಾಗಿದ್ದು, ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿದೆ.
ತುಳುನಾಡಿನ ಸಮಸ್ತ ದೈವ, ದೇವರುಗಳ ಆರ್ಶೀವಾದದಿಂದ ಕಳೆದ ಬಾರಿಯ ಪ್ರಥಮ ವರ್ಷದ ಪಿಲಿಪರ್ಬವು ಅತ್ಯಂತ ಯಶಸ್ವಿಯಾಗಿದ್ದು ಕಳೆದ ಬಾರಿಗಿಂತ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದ್ದು ಎಲ್ಲಾ ವಿಭಾಗಗಳಲ್ಲಿಯೂ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸ್ಪರ್ಧಾಕೂಟ ನಡೆಯುವ ಮೈದಾನದಲ್ಲಿ 5 ಸಾವಿರ ಮಂದಿ ಕುಳಿತು ವೀಕ್ಷಿಸಬಹುದಾದ ಸುಸಜ್ಜಿತ ಪ್ರೇಕ್ಷಕ ಗ್ಯಾಲರಿ ನಿರ್ಮಿಸಲಾಗಿದ್ದು, ಅಲ್ಲಿಯೇ ದೊಡ್ಡ ಪರದೆಯ ವ್ಯವಸ್ಥೆಯನ್ನೂ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರಲು ಉತ್ಸುಕರಾಗಿದ್ದು ಜನಜಂಗುಳಿಯಿಂದಾಗಿ ಬರಲು ಸಾಧ್ಯವಾಗದೇ ಇರುವ ಹಿರಿಯರು ಹಾಗೂ ಮಕ್ಕಳಿಗಾಗಿ ಮನೆಯಲ್ಲಿಯೇ ಕುಳಿತು ಕಾರ್ಯಕ್ರಮ ವೀಕ್ಷಿಸಲು ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ತಮ್ಮ ವಾಹನಗಳಲ್ಲಿ ಬರುವವರಿಗೆ ಮೈದಾನದಲ್ಲಿ ಅಚ್ಚುಕಟ್ಟಾದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಲಿರುವ ಗಣ್ಯರು, ಹಾಗೂ ದಾನಿಗಳಿಗೆ ವಿಶೇಷ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಸ್ಪರ್ಧಾಕೂಟದಲ್ಲಿ ಪಾಲ್ಗೊಳ್ಳಲಿರುವ 15 ಹುಲಿವೇಷ ತಂಡಗಳು:
1.ಶಿವಶಕ್ತಿ ಟೈಗರ್ ಕುಂಜತ್ತೂರು ಮಂಜೇಶ್ವರ
2.ವಿಶಾಲ್ ಕ್ರಿಕೆಟರ್ಸ್ ಕೋಡಿಕಲ್
3.ಪಾಂಡೇಶ್ವರ ಶಾರದಾ ಹುಲಿ, ಪಾಂಡೇಶ್ವರ
4.ಜೈ ಹಿಂದ್ ಫ್ರೆಂಡ್ಸ್, ಮಂಕಿ ಸ್ಟ್ಯಾಂಡ್
5.ವಿಸಿಎಸ್, ಮೂಡುಶೆಡ್ಡೆ (ವಿಷ್ಣು ಪಿಲಿಕುಲು)
6.ನಂದಿಗುಡ್ಡ ಫ್ರೆಂಡ್ಸ್ ಬಾಬು ಗುಡ್ಡ
7.ಮುಳುಹಿತ್ಲು ಫ್ರೆಂಡ್ಸ್ ಸರ್ಕಲ್ ಜಗದಂಬಾ ಹುಲಿ
8.ಅಶೋಕ್ ರಾಜ್ ಟೀಮ್ ಕಾಡಬೆಟ್ಟು ಉಡುಪಿ
9.ಎಸ್ ಎಫ್ ಸಿ ಸೋಮೇಶ್ವರ
10.ಎಸ್ ಕೆ ಬಿ ಟೈಗರ್ಸ್ ಕುಂಪಲ
11.ಪುರಲ್ದಪ್ಪೆನ ಮೋಕೆದ ಬೊಲ್ಲಿಲು ಪೊಳಲಿ ಟೈಗರ್ಸ್
12.ಮಂಗಳೂರ್ ಫ್ರೆಂಡ್ಸ್ ಟೈಗರ್ಸ್ ಮುಳುಹಿತ್ಲು
13.ಯಂಗ್ ಬಾಯ್ಸ್ ಮುಳುಹಿತ್ಲು ಮಂಗಳಾದೇವಿ ಹುಲಿ
14.ಶ್ರೀ ಭದ್ರಕಾಳಿ ಟೈಗರ್ಸ್ ಕುಡ್ಲ
15.ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು.
ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಈ ವಿವರವನ್ನು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕುಡ್ಲ ಪ್ರತಿಷ್ಠಾನ ಅಧ್ಯಕ್ಷ ಗಿರಿಧರ್ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಚೇತನ್ ಕುಮಾರ್ ಜಗದೀಶ್,ಅಶ್ವಿತ್ ಉಪಸ್ಥಿತರಿದ್ದರು.