ಇತ್ತೀಚಿನ ಸುದ್ದಿ
ಅಂಬೇಡ್ಕರ್ ಭಾವಚಿತ್ರವಿರುವ ಮತದಾನ ಬಹಿಷ್ಕಾರದ ಫ್ಲೆಕ್ಸ್ ತೆರವುಗೊಳಿಸಿ ಪಿಎಸ್ಐನಿಂದ ಅಪಮಾನ ಅರೋಪ: ಗ್ರಾಮಸ್ಥರಿಂದ ಪ್ರತಿಭಟನೆ
18/04/2024, 19:16
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಮತದಾನ ಬಹಿಷ್ಕಾರದ ಪ್ಲೆಕ್ಸನ್ನು ತೆರವುಗೊಳಿಸಿ ಪೊಲೀಸ್ ಅಧಿಕಾರಿಯೊಬ್ಬರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಹಲ್ಲರೆ ಗ್ರಾಮದಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ರಘು ವಿರುದ್ಧ ಗ್ರಾಮಸ್ಥರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ
ಕೂಡಲೇ ಅಮಾನತು ಪಡಿಸುವಂತೆ ಆಗ್ರಹಿಸಿದ್ದಾರೆ.
ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಫ್ಲೆಕ್ಸ್ ಅಳವಡಿಕೆ ಮಾಡಿದ್ದರು.
ಏಕಾಏಕಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ರಘು ಸ್ಥಳಕ್ಕೆ ಧಾವಿಸಿ, ನಾವು ಹಾಕಿದ ಅಂಬೇಡ್ಕರ್ ಅವರ ಭಾವಚಿತ್ರವಿರುವ ಪ್ಲೆಕ್ಸನ್ನು ತೆರವುಗೊಳಿಸಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಕೂಡಲೆ ಪಿಎಸ್ಐ ರಘು ಎಂಬಾತನನ್ನು ಅಮಾನತು ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.