ಇತ್ತೀಚಿನ ಸುದ್ದಿ
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಹೇಳಿಕೆ
13/03/2026, 19:13
ಬೆಂಗಳೂರು(reporterkarnataka.com): ಕಲಬುರಗಿ ನಗರದಲ್ಲಿ ಕುಡಿಯುವ ನೀರು ಸಮಸ್ಯೆ ನೀಗಿಸಲು ಅಗತ್ಯವಿರುವ ಕಡೆಗಳಲ್ಲಿ ಬೋರ್ ವೆಲ್ ಮತ್ತು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಂದಿಕೂರು ಗ್ರಾಮದ ಬಳಿ ರೊಚ್ಚು ನೀರಿನ ಸಂಸ್ಕರಣ ಘಟಕದ ಕೆಲವು ಕಡೆ ದುರಸ್ತಿ ಕಾರ್ಯ ನಡೆಯುತ್ತಿರುವುದು, ಭೀಮಾ ನದಿಯ ಮೂಲಸ್ಥಾವರದ ಮೇಲ್ಭಾಗದಲ್ಲಿ ಗ್ರಾಮಗಳಿಂದ ನೈಸರ್ಗಿಕ ನಾಲಾದಿಂದ ಹರಿದು ಬರುತ್ತಿರುವ ತ್ಯಾಜ್ಯ ನೀರಿನಿಂದಾಗಿ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದರು.
ಕೂಡಲೇ ಇದನ್ನು ತಪ್ಪಿಸಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಕಲುಷಿತ ನೀರಿಗೆ ಕಾರಣವಾಗಿದ್ದ ಎಸ್ ಟಿಪಿ ಘಟಕವನ್ನು 3 ಕೋಟಿ ರೂಪಾಯಿ ವೆಚ್ಚದಲ್ಲಿ ದುರಸ್ತಿ, ನೈಸರ್ಗಿಕ ನಾಲದಲ್ಲಿ ಹರಿದು ಬರುತ್ತಿರುವ ತ್ಯಾಜ್ಯ ನೀರನ್ನು ಬ್ಯಾರೇಜಿನ ತಳ ಭಾಗಕ್ಕೆ ಹರಿದುಹೋಗುವಂತೆ ಮಾಡುವುದಕ್ಕಾಗಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ನುಡಿದರು.
ಬೋರ್ ವೆಲ್, ಟ್ಯಾಂಕರ್ ನಿಂದ ನೀರು ಈ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಸರ್ಕಾರ ಬದ್ಧವಾಗಿದ್ದು, ಬೋರ್ ವೆಲ್ ಗಳು ಮತ್ತು ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನಿರಂತರ ನೀರು ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಿಗೆ ನಿರಂತರ ಕುಡಿಯುವ ನೀರು ಪೂರೈಸಲು ವಿಶ್ವಬ್ಯಾಂಕ್ ನೆರವಿನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಭೌಗೋಳಿಕವಾಗಿ 47 ವಲಯಗಳನ್ನಾಗಿ ವಿಂಗಡಿಸಲಾಗಿದ್ದು, ಪ್ರಸ್ತುತ ಹಣಕಾಸಿನ ಲಭ್ಯತೆ ಅನುಸಾರವಾಗಿ 32 ವಲಯಗಳಿಗೆ ವಿಶ್ವಬ್ಯಾಂಕ್ ನೆರವಿನ ಯೋಜನೆಯಡಿ ಹಾಲಿ ಇರುವ ಎಲ್ಲಾ ವಿತರಣಾ ಜಾಲವನ್ನು ವಿನ್ಯಾಸಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುತ್ತದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು.
ನಗರದ ಮನೆಗಳಿಗೆ ಕುಡಿಯುವ ನೀರು ಪೂರೈಕೆಗಾಗಿ 800 ಕೋಟಿ ರೂಪಾಯಿಗಳ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ನಾನಾ ಕಾರಣಗಳಿಂದ ಕಾಮಗಾರಿಯನ್ನು ವಿಳಂಬ ಮಾಡಿದ ಗುತ್ತಿಗೆದಾರ ಸಂಸ್ಥೆಯಾದ ಎಲ್ & ಟಿ ಗೆ 60 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ ಎಂದರು.
ಈಗಾಗಲೇ 8 ಸಾವಿರ ಮನೆಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದು, ಇನ್ನುಳಿದ ಮನೆಗಳಿಗೆ ನೀರು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
1800 ಕೋಟಿ ಯೋಜನೆಕಲಬುರಗಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆಗೆ ನಾರಾಯಣಪುರ ಬ್ಯಾರೇಜ್ ನಿಂದ ನೀರು ತರುವ 1800 ಕೋಟಿ ರೂಪಾಯಿಗಳ ಯೋಜನೆಯನ್ನು ಈ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ ಎಂದು ಸಚಿವರು ಸದನದ ಗಮನಕ್ಕೆ ತಂದರು.












