ಇತ್ತೀಚಿನ ಸುದ್ದಿ
ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ
10/04/2026, 00:16
ಬೆಂಗಳೂರು(reporterkarnataka.com): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆಯಾಗಿದೆ. ಮುಖ್ಯವಾಗಿ ಈ ಬಾರಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಯಾವುದೇ ಬೇಸರ ಮಾಡಿಕೊಳ್ಳದೆ ಧೈರ್ಯವಾಗಿ ಫೇಲ್ ಆದ ವಿಷಯಗಳ ಪರೀಕ್ಷೆಯನ್ನು ಮತ್ತೊಮ್ಮೆ ಬರೆಯಲು ಅವಕಾಶ ಇದ್ದು, ದಿನಾಂಕವನ್ನೂ ಸಹ ಪ್ರಕಟಿಸಲಾಗಿದೆ.
2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಫಸ್ಟ್ ಟೈಂ ಶೇ.86.48 ಫಲಿತಾಂಶ ಬಂದಿದೆ. ಇದು ಐತಿಹಾಸಿಕ ದಿನ ಎಂದು ಸಚಿವ ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
*ಏ.30ರಿಂದ ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆ*
ಪರೀಕ್ಷೆ 1ರಲ್ಲಿ ಅನುತ್ತೀರ್ಣರಾದವರು ಯಾವುದೇ ಬೇಸರ ಮಾಡಿಕೊಳ್ಳದೆ ಧೈರ್ಯವಾಗಿ ಫೇಲ್ ಆದ ವಿಷಯಗಳ ಪರೀಕ್ಷೆಯನ್ನು ಮತ್ತೊಮ್ಮೆ ಬರೆಯಲು ಅವಕಾಶ ಇದೆ. ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆ (Exam-2) ಏಪ್ರಿಲ್ 30ರಿಂದ ಆರಂಭವಾಗಿ ಮೇ 13ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ತಮ್ಮ ಫಲಿತಾಂಶವನ್ನು ಸುಧಾರಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಬಾರಿ ಮೂರನೇ ಪರೀಕ್ಷೆ (Exam-3) ನಡೆಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
*ಮರುಮೌಲ್ಯಮಾಪನ-ಮರು*
*ಎಣಿಕೆಗೆ ಅರ್ಜಿ*
ಫಲಿತಾಂಶದ ಬಗ್ಗೆ ಅನುಮಾನ ಇರುವ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರಿಗಾಗಿ ಏಪ್ರಿಲ್ 13ರಿಂದ ಏಪ್ರಿಲ್ 19ರವರೆಗೆ ಸಮಯ ನಿಗದಿಪಡಿಸಲಾಗಿದೆ. ಮರುಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1670 ರೂ. ಶುಲ್ಕ ವಿಧಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಬಹುದು.












