ಇತ್ತೀಚಿನ ಸುದ್ದಿ
ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿಸಿಆರ್ಇ ಎಸ್ಪಿ ದೂರು
21/04/2026, 14:14
ಮಂಗಳೂರು (reporterkarnataka.com): ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ಕೆಲ ಐಪಿಎಸ್ ಅಧಿಕಾರಿಗಳು ತಮ್ಮ ಕೆಳ ಹಂತದ ಅಧಿಕಾರಿ-ಸಿಬ್ಬಂದಿ ವಿರುದ್ಧ ದೌರ್ಜನ್ಯ ಎಸಗುತ್ತಿದ್ದು, ಇದನ್ನು ಬಹಿರಂಗಪಡಿಸಲು ಅನುಮತಿ ನೀಡುವಂತೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್ಇ) ಬೆಂಗಳೂರು ನಗರ ವಲಯದ ಎಸ್ಪಿ ಎಸ್.ಎಸ್.ಕಾಶಿ ರಾಜ್ಯ ಪೊಲೀಸ್ ಮಹಾನಿರ್ದೇರ್ಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೆಲವು ಐಪಿಎಸ್ ಅಧಿಕಾರಿಗಳು ಕೆಳಹಂತದ ಅಧಿಕಾರಿಗಳು, ಸಿಬ್ಬಂದಿ ಮೇಲೆ ದರ್ಪ, ತಾರತಮ್ಯ ತೋರುತ್ತಿದ್ದಾರೆ. ಬೇರೆ ರಾಜ್ಯಗಳಿಂದ ಬಂದವರು ಕನ್ನಡಿಗ ಅಧಿಕಾರಿಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.
ಸುಧೀರ್ ಕುಮಾರ್ ರೆಡ್ಡಿ ಅವರ ಕರ್ಮಕಾಂಡ, ದೌರ್ಜನ್ಯ, ಇತರೆ ಕೆಲ ಐಪಿಎಸ್ ಅಧಿಕಾರಿಗಳ ಕರ್ಮಕಾಂಡ ತೆರೆದಿಡುತ್ತೇನೆ. ಹೀಗಾಗಿ ಮುಖ್ಯಮಂತ್ರಿ, ಗೃಹ ಸಚಿವರು, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ತಮ್ಮ ಸಮಕ್ಷಮದಲ್ಲಿ ನನಗೆ ಏ.18ರಿಂದ ಏ.29ರೊಳಗೆ ದಿನಾಂಕ ನಿಗದಿ ಮಾಡಿ, 30 ನಿಮಿಷ ಕಾಲಾವಕಾಶ ಕೊಡಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದೇ ತಿಂಗಳ ಅಂತ್ಯದಲ್ಲಿ ಕಾಶಿ ಅವರು ನಿವೃತ್ತಿ ಹೊಂದುತ್ತಿದ್ದಾರೆ.












