ಇತ್ತೀಚಿನ ಸುದ್ದಿ
ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್ ಹಕ್ಕು ಚಲಾವಣೆ
23/04/2026, 16:15
ಚೆನ್ನೈ(reporterkarnataka.com): ತಮಿಳುನಾಡಿನ ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ರಾಜ್ಯದಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ಪ್ರಮುಖ ನಾಯಕರು ಹಾಗೂ ಗಣ್ಯರು ಮತಗಟ್ಟೆಗಳಿಗೆ ತೆರಳಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ತಮಿಳುನಾಡು ಮುಖ್ಯಮಂತ್ರಿ ಹಾಗೂ ಕೊಳತ್ತೂರು ಕ್ಷೇತ್ರದ ಡಿಎಂಕೆ ಅಭ್ಯರ್ಥಿ ಎಂ.ಕೆ. ಸ್ಟಾಲಿನ್ ಅವರು ಚೆನ್ನೈನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಸೂಪರ್ ಸ್ಟಾರ್ ರಜನಿಕಾಂತ್ ಅವರು ಚೆನ್ನೈನ ಸ್ಟೆಲ್ಲಾ ಮೇರಿಸ್ ಶಾಲೆಯಲ್ಲಿ ಮತ ಚಲಾಯಿಸಿ ಬಳಿಕ ಶಾಯಿ ಗುರುತನ್ನು ಪ್ರದರ್ಶಿಸಿದರು.




ಟಿವಿಕೆ ಮುಖ್ಯಸ್ಥ ಹಾಗೂ ತಿರುಚಿರಾಪಳ್ಳಿ ಪೂರ್ವ ಮತ್ತು ಪೆರಂಬೂರು ಕ್ಷೇತ್ರಗಳ ಅಭ್ಯರ್ಥಿ ವಿಜಯ್ ಅವರು ಚೆನ್ನೈನ ವೇಲ್ಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಮತ ಚಲಾಯಿಸಿದರು.
ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ, ಎಡಪ್ಪಾಡಿ ಕ್ಷೇತ್ರದ ಅಭ್ಯರ್ಥಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಸಿಲುವಲ್ಪಾಳ್ಯಂನ ಪಂಚಾಯತ್ ಯೂನಿಯನ್ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಮತದಾನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಎಲ್ಲ ಮತದಾರರು ಮತಗಟ್ಟೆಗಳಿಗೆ ತೆರಳಿ ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಬೇಕು” ಎಂದು ಮನವಿ ಮಾಡಿದರು. ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟದ ಗೆಲುವಿನ ಬಗ್ಗೆ ಶೇ.100ರ ವಿಶ್ವಾಸ ವ್ಯಕ್ತಪಡಿಸಿದರು.
“ಇಂದು ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದೆ. ರಾಜ್ಯದಾದ್ಯಂತ ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುತ್ತಿದ್ದಾರೆ. ನಾವು ಅದನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ,” ಎಂದು ಇಪಿಎಸ್ ಹೇಳಿದರು.
ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಶಿವಗಂಗೆಯ ಕಾರೈಕುಡಿಯಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿ ಶಾಯಿ ಗುರುತು ಮಾಡಿದ ಬೆರಳನ್ನು ತೋರಿಸಿದರು.













