ಇತ್ತೀಚಿನ ಸುದ್ದಿ
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಆರೋಪಿ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಎನ್ ಐಎ ಕೋರ್ಟ್
27/04/2026, 19:51
ಬೆಂಗಳೂರು(reporterkarnataka.com): ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ಶಾರಿಕ್ ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ ಐಎ ವಿಶೇಷ ನ್ಯಾಯಾಲಯ ಇಂದು ಅಪರಾಧಿ ಮೊಹಮ್ಮದ್ ಶಾರಿಕ್ ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. 2024ರ ಏಪ್ರಿಲ್ ನಲ್ಲಿ ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಶಾರಿಕ್ ಹೇಳಿದ್ದ. ಬಳಿಕ ಕಳೆದ ಡಿಸೆಂಬರ್ ನಲ್ಲಿ ಶಾರಿಕ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ. ಆರೋಪಿ ತಪ್ಪೊಪ್ಪೊಕೊಂಡಿದ್ದಾಗಿ ಎನ್ ಐಎ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಈಗಾಗಲೇ ಅನುಭವಿಸಿರುವ ಜೈಲು ಶಿಕ್ಷೆಯನ್ನು ಕಡಿತಗೊಳಿಸುವುದರೊಂದಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ 16 ಆರೋಪಿಗಳಲ್ಲಿ ಮೊಹಮ್ಮದ್ ಶಾರಿಕ್ ಅಪರಾಧಿಯಾಗಿದ್ದು, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಎನ್ ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ವೇಳೆ ಶಾರಿಕ್ ತಾನು ತಪ್ಪು ಒಪ್ಪಿಕೊಂಡಿದ್ದಾಗಿ ಹಾಗೂ ತನಗೆ ಮದುವೆಯಾಗಿ ಮನೆಯಲ್ಲಿ ಚಿಕ್ಕ ಮಗಳಿದ್ದಾಳೆ. ಮಗಳ ಪೋಷಣೆಯ ಜವಾಬ್ದಾರಿ ನನ್ನ ಮೇಲಿರುವುದರಿಂದ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದ.
ಅಪರಾದಿ ಮನವಿ ಆಲಿಸಿದ ನ್ಯಾಯಾಲಯ ಮಾನವೀಯ ನೆಲೆಯಲ್ಲಿ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದು, ಈಗಾಗಲೇ ಅಪರಾಧಿ ಅನುಭವಿಸಿರುವ 4 ವರ್ಷ ಜೈಲುವಾಸವನ್ನು ಪರಿಗಣಿಸಲಾಗಿದ್ದು, ಉಳಿದ 6 ವರ್ಷ ಜೈಲು ಶಿಕ್ಷೆ ನೀಡಲಾಗುವುದು ಎಂದು ಆದೇಶ ನೀಡಿದೆ.













