ಇತ್ತೀಚಿನ ಸುದ್ದಿ
ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
27/05/2026, 20:38
ಮಂಗಳೂರು(reporterkarnataka.com): ನಗರದ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳಕ್ಕೆ ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಸಚಿನ್ ಕೆ. ಆರ್. (24) ಹಾಗೂ ಪುತ್ತೂರು ತಾಲೂಕಿನ ನೆಲ್ಯಾಡಿ ಮಣ್ಣಗುಂಡಿ ಹೌಸ್ನ ಚಂದನ್ (24) ಬಂಧಿತ ಆರೋಪಿಗಳು.
ಮೇ 24ರಂದು ಬೆಳಗಿನ ಜಾವ ಸುಮಾರು 2:10 ಗಂಟೆಯ ವೇಳೆಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರ್ ನಲ್ಲಿ ಬಂದ ಇಬ್ಬರು ಯುವಕರಲ್ಲಿ, ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಸಿಮೆಂಟ್ ಶೀಟ್ ನ ತುಂಡಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದು ಹಲ್ಲೆ ನಡೆಸಿದ್ದ ಪರಿಣಾಮವಾಗಿ ಪೊಲೀಸ್ ಸಿಬ್ಬಂದಿಯ ತಲೆಗೆ ಗಾಯ ಉಂಟಾಗಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿರುವ ಬಗ್ಗೆ, ಮಂಗಳೂರು ಉರ್ವ ಪೊಲೀಸ್ ಠಾಣೆ ಅ.ಕ್ರ 57/2026 ಕಲಂ 121(1),109,132,3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣವನ್ನು ಬೇಧಿಸಿ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಿ ತನಿಖೆಯಲ್ಲಿ ದೊರಕಿತ ಸಾಕ್ಷ್ಯಾಧಾರ ಮತ್ತು ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಕೇರಳ ರಾಜ್ಯದ ಕಾಂಞಿಗಾಡ್ ಪ್ರದೇಶದಲ್ಲಿ ಮೇ 26ರಂದು ಸಿಸಿಬಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಅವರುಗಳನ್ನು ವಿಚಾರಣೆಗೆ ಒಳಪಡಿಸಿರತ್ತೆ. ಕೃತ್ಯಕ್ಕೆ ಉಪಯೋಗಿಸಿರುವ ಬೈಕ್ ನ್ನು ಅಮಾನತ್ತು ಮಾಡಿದ್ದು, ತನಿಖೆ ನಡೆಯುತ್ತಿದೆ.
ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿಗಳ ಪೈಕಿ ಸಚಿನ್ ಕೆ.ಆರ್ ಎಂಬಾತನು ಕುಂಟಿಕಾನದ PON PON Sweets ಪ್ಯಾಕ್ಟರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಮತ್ತೊಬ್ಬ ಆರೋಪಿ ಚಂದನ್ ಕೂಳೂರಿನ ಅದ್ವೈತ್ ಕಿಯಾ ಶೋ ರೂಮ್ ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದನು. ಮದ್ಯರಾತ್ರಿ 2-00 ಗಂಟೆಯ ವೇಳೆಗೆ ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳನ್ನು ಬೀಟ್ ಪೊಲೀಸರು ತಡೆದು ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡು ಪೊಲೀಸರ ಮೇಲೆ ಸಿಮೆಂಟ್ ಸೀಟಿನ ತುಂಡಿನಿಂದ ಹಲ್ಲೆ ನಡೆಸಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ.












