ಇತ್ತೀಚಿನ ಸುದ್ದಿ
ದೆಹಲಿ ಹೋಟೆಲ್ನಲ್ಲಿ ಭೀಕರ ಅಗ್ನಿ ದುರಂತ: ವಿದೇಶಿಯರು ಸಹಿತ 21 ಮಂದಿ ಸಜೀವ ದಹನ
03/06/2026, 18:10
ನವದೆಹಲಿ(reporterkarnataka.com): ಇಲ್ಲಿನ ಹೋಟೆಲ್ವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ ಪರಿಣಾಮ 21 ಮಂದಿ ಸಜೀವ ದಹನಗೊಂಡಿದ್ದಾರೆ. ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದಾರೆ.
ದೆಹಲಿಯ ದಕ್ಷಿಣ ಭಾಗದಲ್ಲಿರುವ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದ ಹೋಟೆಲ್ ಒಂದರಲ್ಲಿ ಇಂದು ಬೆಳಿಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘೋರ ದುರಂತದಲ್ಲಿ ಕನಿಷ್ಠ 21 ಮಂದಿ ಪ್ರಾಣ ಕಳೆದುಕೊಂಡಿದ್ದು, 35ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಮೃತಪಟ್ಟವರಲ್ಲಿ ಬಹುತೇಕರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ವಿದೇಶಿ ಪ್ರಜೆಗಳು ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಬೆಳಗ್ಗೆ 8:50ಕ್ಕೆ ಕಾಣಿಸಿಕೊಂಡ ಬೆಂಕಿ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಮಾಹಿತಿ ಪ್ರಕಾರ, ಇಂದು ಬೆಳಿಗ್ಗೆ ಸುಮಾರು 8:50ರ ಸುಮಾರಿಗೆ ಐದು ಅಂತಸ್ತಿನ ಕಟ್ಟಡದ ಬೇಸ್ಮೆಂಟ್ನಲ್ಲಿರುವ ಮಿಕಾಸಾ ಇನ್ ಹಾಗೂ ಫ್ಲರಿಶ್ ಸ್ಟೇ ಹೋಟೆಲ್ಗಳಿರುವ ಕಟ್ಟಡದ ರೆಸ್ಟೋರೆಂಟ್ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ನ ಶೆಫ್ ಕೇಶರ್ ಸಿಂಗ್ ಎಂಬುವವರು ಬೆಳಿಗ್ಗೆ ಎಲೆಕ್ಟ್ರಿಕ್ ಸ್ಟವ್ ಆನ್ ಮಾಡಲು ಮುಂದಾದಾಗ ದಿಢೀರನೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.
ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿದೆ. ಈ ವೇಳೆ ಹೋಟೆಲ್ನಲ್ಲಿ ಸುಮಾರು 40ಕ್ಕೂ ಹೆಚ್ಚು ಅತಿಥಿಗಳಿದ್ದರು. ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಬಹುತೇಕರು ಗಾಢ ನಿದ್ರೆಯಲ್ಲಿದ್ದ ಕಾರಣ ಯಾರಿಗೂ ತಕ್ಷಣವೇ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ಪ್ರಾಣ ಉಳಿಸಿಕೊಳ್ಳಲು ಕೆಲವರು ಹೋಟೆಲ್ನ ಕಿಟಕಿಗಳಿಂದ ಕೆಳಗೆ ಜಿಗಿದಿದ್ದಾರೆ. ಈ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಗ್ನಿಶಾಮಕ ದಳಕ್ಕೆ ಮಾಹಿತಿ ಸಿಕ್ಕ ತಕ್ಷಣ ಎರಡು ವಾಟರ್ ಇಂಜಿನ್ಗಳು, ಎರಡು ವಾಟರ್ ಬೌಸರ್ಗಳು, ತ್ವರಿತ ಸ್ಪಂದನಾ ವಾಹನ ಸೇರಿದಂತೆ ಹಲವು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಕಷ್ಟಪಟ್ಟು ಕಾರ್ಯಾಚರಣೆ ನಡೆಸಿ 35ಕ್ಕೂ ಹೆಚ್ಚು ಜನರನ್ನು ರಕ್ಷಿಸಿ, ದೆಹಲಿಯ ಮೂರು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
*ಅಕ್ರಮ ಕಟ್ಟಡ ನಿರ್ಮಾಣವೇ ದುರಂತಕ್ಕೆ ಕಾರಣ?:*
ಈ ಕಟ್ಟಡವು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗಿತ್ತು ಎಂಬ ಸ್ಫೋಟಕ ಮಾಹಿತಿ ಈಗ ಹೊರಬಿದ್ದಿದೆ. ಈ ಐದು ಅಂತಸ್ತಿನ ಕಟ್ಟಡದಲ್ಲಿ ಕೇವಲ ಆರು ಕೊಠಡಿಗಳಿಗೆ ಮಾತ್ರ ಅನುಮತಿ ಇತ್ತು. ಆದರೆ, ನಿಯಮ ಮೀರಿ ಇಲ್ಲಿ ಅಕ್ರಮವಾಗಿ ಸುಮಾರು 25 ಕೊಠಡಿಗಳನ್ನು ನಿರ್ಮಿಸಲಾಗಿತ್ತು. ಜೊತೆಗೆ ತುರ್ತು ನಿರ್ಗಮನದ ಯಾವುದೇ ವ್ಯವಸ್ಥೆ ಇರಲಿಲ್ಲ. ಬೆಂಕಿ ಹೊತ್ತಿಕೊಂಡಾಗ ಮೆಟ್ಟಿಲುಗಳ ಮೂಲಕವೇ ಓಡಬೇಕಾದ ಅನಿವಾರ್ಯತೆ ಇತ್ತು. ಇದೇ ಕಾರಣಕ್ಕೆ ಸಾವು-ನೋವಿನ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.












