ಇತ್ತೀಚಿನ ಸುದ್ದಿ
ಉಪ್ಪಿನಂಗಡಿ: ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವತಿಯಿಂದ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ, ದಂತ ಚಿಕಿತ್ಸಾ ಶಿಬಿರ
05/07/2026, 21:42
ಮಂಗಳೂರು(reporterkarnataka.com): ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೇತೃತ್ವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕ, ರೋಟರಿ ಕ್ಲಬ್ ಉಪ್ಪಿನಂಗಡಿ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಹಾಗೂ ಜೆಸಿಐ ಉಪ್ಪಿನಂಗಡಿ ಇದರ ಒಟ್ಟು ಸಹಯೋಗದೊಂದಿಗೆ ಕೆಎಂಸಿ ಆಸ್ಪತ್ರೆ, ಅತ್ತಾವರ ಹಾಗೂ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್, ಮಂಗಳೂರು ಇದರ ನುರಿತ ವೈದ್ಯ ತಂಡದಿಂದ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ ಉಪ್ಪಿನಂಗಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ಯೂನಿಯನ್ ಬ್ಯಾಂಕ್ ಸಮೀಪ) ಯಲ್ಲಿ ನಡೆಯಿತು.
ಶಿಬಿರವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಉದ್ಘಾಟಿಸಿ ಮಾತನಾಡಿ, 2012ರಲ್ಲಿ ಕೇವಲ ಮೂವರು ಸಿಬ್ಬಂದಿಗಳೊಂದಿಗೆ 22 ಲಕ್ಷ ರೂ. ಠೇವಣಿಯಿಂದ ಆರಂಭಗೊಂಡ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇಂದು 320 ಕೋಟಿ ರೂಪಾಯಿಗೂ ಮಿಕ್ಕಿ ಠೇವಣಿಯೊಂದಿಗೆ, 3000ಕ್ಕೂ ಮಿಕ್ಕಿ ವಾರ್ಷಿಕ ವಹಿವಾಟು ನಡೆಸಿ, ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವುದು ಶ್ಲಾಘನೀಯವಾಗಿದೆ. ಸಂಘವು ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡುತ್ತಿದ್ದು, ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನರ ವಿಶ್ವಾಸ ಗಳಿಸಿರುವುದು ಸಂತಸದ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ರಾಜ್ಯದಲ್ಲಿಯೇ ಮಾದರಿ ಸಹಕಾರಿ ಸಂಸ್ಥೆಯಾಗಿ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು.
ರೋಟರಿ ಕ್ಲಬ್ ಝೋನ್–4ರ ಅಸಿಸ್ಟೆಂಟ್ ಗವರ್ನರ್ ಡಾ. ರಾಜಾರಾಂ ಕೆ. ಬಿ. ಅವರು ಮಾತನಾಡಿ, “ಅತಿ ಕಡಿಮೆ ಅವಧಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 35 ಶಾಖೆಗಳನ್ನು ಸ್ಥಾಪಿಸಿ, 112ಕ್ಕೂ ಹೆಚ್ಚು ವೈದ್ಯಕೀಯ ಹಾಗೂ ಸಮಾಜಮುಖಿ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಕಳೆದ ವರ್ಷ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ರೋಟರಿ ಕ್ಲಬ್ನ ಸಮಾಜಮುಖಿ ಸೇವೆಯನ್ನು ಗುರುತಿಸಿ ‘ಅಭಿನಂದನ’ ಪ್ರಶಸ್ತಿ ನೀಡಿ ಗೌರವಿಸಿರುವುದು ಅಭಿನಂದನಾರ್ಹ ಕಾರ್ಯವಾಗಿದೆ ಎಂದರು. ಮುಂದಿನ ದಿನಗಳಲ್ಲಿಯೂ ರೋಟರಿ ಕ್ಲಬ್ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಕೆಎಂಸಿ ಆಸ್ಪತ್ರೆ, ಅತ್ತಾವರದ ಮುಖ್ಯಸ್ಥರಾದ ಡಾ. ಆಶಿತ್ ಎಂ. ವಿ.ಅವರು ಮಾತನಾಡಿ, ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರದ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದರು ಇಂತಹ ಆರೋಗ್ಯ ಶಿಬಿರಗಳು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ, “ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಂಘವು ನಿರಂತರವಾಗಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದ್ದು, ಶಿಬಿರಾರ್ಥಿಗಳು ಇಂತಹ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಆಶಯ ವ್ಯಕ್ತಪಡಿಸಿದ ಅವರು, ಸಂಘದ ಬೆಳವಣಿಗೆಗೆ ಸಹಕರಿಸಿದ ಸದಸ್ಯರು, ಗ್ರಾಹಕರು, ಸಮಾಜ ಬಂಧುಗಳು ಹಾಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಈ ಆರೋಗ್ಯ ಶಿಬಿರವು ಯಶಸ್ವಿಯಾಗಿ ನಡೆಯಲು ಯುವವಾಹಿನಿ ಉಪ್ಪಿನಂಗಡಿ, ರೋಟರಿ ಕ್ಲಬ್ ಉಪ್ಪಿನಂಗಡಿ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು, ಜೆಸಿಐ ಉಪ್ಪಿನಂಗಡಿ ಹಾಗೂ ಎಲ್ಲಾ ಪದಾಧಿಕಾರಿಗಳು ಮತ್ತು ಸ್ವಯಂಸೇವಕರು ಪ್ರಮುಖ ಪಾತ್ರವಹಿಸಿ, ಅಮೂಲ್ಯ ಸಹಕಾರ ನೀಡಿದ್ದು, ಅವರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು, ಮೂರ್ತೆದಾರರ ಸೇವಾ ಸಹಕಾರಿ ಸಂಘ ಉಪ್ಪಿನಂಗಡಿ ಅಧ್ಯಕ್ಷ ಅಜಿತ್ ಕುಮಾರ್ ಪಾಲೇರಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಹಿರಿಯ ಮಾರ್ಗದರ್ಶಕರಾದ ವರದರಾಜ್ ಎಂ., ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಯವಿಕ್ರಮ್, ರೋಟರಿ ಕ್ಲಬ್ ಉಪ್ಪಿನಂಗಡಿ ಅಧ್ಯಕ್ಷ ಕೇಶವ ಪಿ. ಎಂ., ಜೆಸಿಐ ಉಪ್ಪಿನಂಗಡಿ ಅಧ್ಯಕ್ಷ ಅವನೀಶ್ ಭಟ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಉಪ್ಪಿನಂಗಡಿ ಮುಖ್ಯೋಪಾಧ್ಯಾಯರಾದ ಹನುಮಂತಯ್ಯ, ಎಚ್ಡಿಎಂಸಿ ಅಧ್ಯಕ್ಷ ಅಬ್ದುಲ್ ಮಜೀದ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಚಂದ್ರಾವತಿ, ಕೆಎಂಸಿ ಆಸ್ಪತ್ರೆ, ಅತ್ತಾವರ ಹಾಗೂ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್, ಮಂಗಳೂರು ಇದರ ವೈದ್ಯರಾದ ಡಾ. ಸೌಮ್ಯ ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸೆಯ ಪ್ರಯೋಜನವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಕಾರ್ಯದರ್ಶಿ ರಮೇಶ್ ರವರು ಸ್ವಾಗತಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್ ರವರು ವಂದಿಸಿದರು. ಸಂಘದ ಶಾಖಾಧಿಕಾರಿಯಾದ ಧನಲಕ್ಷ್ಮಿ ರವರು ಕಾರ್ಯಕ್ರಮವನ್ನು ನಿರೂಪಿಸಿದರು.












