ಇತ್ತೀಚಿನ ಸುದ್ದಿ
ಸೋಮವಾರಪೇಟೆ | ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ: ಏಕಾಏಕಿ ಹೆಚ್ಚಿದ ನೀರು; ಬೆಂಗಳೂರಿನ ವಿದ್ಯಾರ್ಥಿಗಳ ರಕ್ಷಣೆ
07/07/2026, 16:38
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಕೆಲ ನಿರ್ಲಕ್ಷ್ಯ ಹಾಗೂ ಹುಚ್ಚಾಟಗಳು ಪ್ರಾಣಕ್ಕೆ ಕುತ್ತು ತರುತ್ತಿವೆ. ಇಂತಹದ್ದೇ ಒಂದು ಘಟನೆ ನಡೆದಿದೆ.ಬಂಡೆಯ ಮೇಲೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ, ಜಲಪಾತದ ಮೇಲ್ಭಾಗದಲ್ಲಿರುವ ವಿದ್ಯುತ್ ಉತ್ಪಾದನಾ ಘಟಕದಿಂದ ಏಕಾಏಕಿ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಯಿತು.

ಪರಿಣಾಮ ಕಣ್ಮುಚ್ಚಿ ಕಣ್ಬಿಡುವಷ್ಟರಲ್ಲಿ ನದಿಯ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹೆಚ್ಚಾಯಿತು. ನೀರಿನ ರಭಸಕ್ಕೆ ಹೆದರಿದ ವಿದ್ಯಾರ್ಥಿಗಳಿಗೆ ದಡ ಸೇರಲು ಸಾಧ್ಯವಾಗದೆ, ನಡು ನದಿಯ ಬಂಡೆಯ ಮೇಲೆಯೇ ಸಿಲುಕಿಕೊಂಡರು. ನೀರಿನ ಆರ್ಭಟ ಹೆಚ್ಚುತ್ತಿದ್ದಂತೆ ಇಬ್ಬರು ಆತಂಕದಿಂದ ಕಿರುಚಾಡಲು ಆರಂಭಿಸಿದ್ದಾರೆ.ನಡುನೀರನಲ್ಲಿ ಸಿಲುಕಿ ಆಕ್ರಂದನ ಮಾಡುತ್ತಿದ್ದ ಯುವಕರನ್ನು ಕಂಡು ತಕ್ಷಣವೇ ಸ್ಥಳೀಯರು ಹಾಗೂ ಇತರ ಪ್ರವಾಸಿಗರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ, ಉಕ್ಕಿ ಹರಿಯುತ್ತಿದ್ದ ನೀರಿನ ರಭಸವನ್ನೂ ಲೆಕ್ಕಿಸದೆ ಹಗ್ಗ ಹಾಗೂ ಲೈಫ್ ಜಾಕೆಟ್ಗಳ ಸಹಾಯದಿಂದ ಸಾಹಸಮಯ ಕಾರ್ಯಾಚರಣೆ ನಡೆಸಿದ್ದಾರೆ. ಕೊನೆಗೂ ಇಬ್ಬರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ದಡಕ್ಕೆ ಕರೆತರುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.ಅದೃಷ್ಟವಶಾತ್ ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯಾಚರಣೆಯಿಂದ ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆಗಾಲದಲ್ಲಿ ಜಲಪಾತಗಳ ನೀರಿನ ಹರಿವು ಯಾವ ಕ್ಷಣದಲ್ಲಿ ಬೇಕಾದರೂ ಬದಲಾಗಬಹುದು. ಪ್ರವಾಸಿಗರು ನಿಷೇಧಿತ ಪ್ರದೇಶಗಳಿಗೆ ಇಳಿಯದೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ.













