ಇತ್ತೀಚಿನ ಸುದ್ದಿ
ಅಂತರ್ ರಾಜ್ಯ ವಾಹನ ಕಳ್ಳತನ ಪ್ರಕರಣ: 4 ಮಂದಿ ಆರೋಪಿಗಳ ಬಂಧನ
27/08/2026, 14:06
ಪುತ್ತೂರು(reporterkarnataka.com): ಅಂತರ್ ರಾಜ್ಯ ಕಳ್ಳತನ ಪ್ರಕರಣದಲ್ಲಿ 4 ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19 ಮತ್ತು 20ರ ಅವಧಿಯಲ್ಲಿ ನಡೆದ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ: 94/2026, 303(2)BNS ರಂತೆ ಪ್ರಕರಣ ದಾಖಲಿಸಿಕೊಂಡು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ ಗುಣಪಾಲ ಜೆ. ಮತ್ತು ಸುಷ್ಮಾ.ಜಿ ಭಂಡಾರಿ ಪಿಎಸ್ಐ ರವರ ನೇತೃತ್ವದ ತನಿಖಾ ತಂಡವು ಪ್ರಕರಣದ ಪತ್ತೆಗಾಗಿ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ತನಿಖೆ ನಡೆಸಿ, ಅಂತರ್ ರಾಜ್ಯಗಳಲ್ಲಿ ಕಳ್ಳತನ ಮಾಡುತ್ತಿದ್ದ
ಕೇರಳ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (25), ಮೊಹಮ್ಮದ್ ಆಸೀಕ್ (25) ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡು ಕರೂರು ನಿವಾಸಿ ಶಕ್ತಿವೇಲು ಜಿ (24) ಎಂಬವರುಗಳನ್ನು ದಸ್ತಗಿರಿ ಮಾಡಿದ್ದಾರೆ.


ಆರೋಪಿಗಳಿಂದ ಕಳ್ಳತನ ಮಾಡಿದ ಓಮ್ನಿ ಕಾರ್ (2.5 ಲಕ್ಷ ರೂ ಅಂದಾಜು ಮೌಲ್ಯ) ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ ಕೆಟಿಎಂ ಬೈಕ್ ನ್ನು (1 ಲಕ್ಷ ಅಂದಾಜು ಮೌಲ್ಯ) ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ವಿಚಾರಣೆಯ ವೇಳೆ ಆರೋಪಿಗಳು ಓಮ್ನಿ ಕಾರನ್ನು ಕದ್ದು, ಕೇರಳ ರಾಜ್ಯಕ್ಕೆ ತೆಗೆದುಕೊಂಡು ಹೋಗಿ, ಕೇರಳದಿಂದ ತಮಿಳುನಾಡು ರಾಜ್ಯಕ್ಕೆ ಮಾರಾಟ ಮಾಡಿ, ತಮಿಳುನಾಡಿನಲ್ಲಿ ವಾಹನವನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿರುವುದು ಕಂಡುಬಂದಿರುತ್ತದೆ.
ಆರೋಪಿಗಳು ಮೇಲೆ ಕೇರಳದ ಬದಿಯಡ್ಕ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಗಳಲ್ಲಿ ಈಗಾಗಲೇ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ, ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.












