9:46 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

300 ಕೋಟಿ ವೆಚ್ಚದ ಕುಕ್ಕೆ ಸುಬ್ರಹ್ಮಣ್ಯ 3ನೇ ಹಂತದ ಮಾಸ್ಟರ್ ಪ್ಲಾನ್ ಶೀಘ್ರ ಸಚಿವ ಸಂಪುಟದ ಮುಂದೆ ಪ್ರಸ್ತಾಪ

08/02/2022, 21:33

ಕಡಬ(reporterkarnataka.com): ದೈವಸಂಕಲ್ಪ ಯೋಜನೆಯಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್‍ನ ಪ್ರಾಸ್ತಾವಿತ ಯೋಜನೆಯನ್ನು ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲಿ ಸಚಿವ ಸಂಪುಟ ಸಭೆಯ ಮುಂದಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.


ಅವರು ಮಂಗಳವಾರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.


ಕುಕ್ಕೇ ಸುಬ್ರಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ 300 ಕೋಟಿ ರೂ.ಗಳ ಮೂರನೇ ಹಂತದ ಮಾಸ್ಟರ್ ಪ್ಲಾನ್‍ನ್ನು ಪ್ರಸ್ತಾವಿಸಲಾಗಿದೆ. ಈ ಪ್ರಾಸ್ತಾವಿತ ಮಾಸ್ಟರ್ ಪ್ಲಾನ್‍ನ ಬಗ್ಗೆ ಬೆಂಗಳೂರಿನಲ್ಲಿ ಹಾಗೂ ಕುಕ್ಕೆಯಲ್ಲಿಂದು ನಡೆದ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಈ ಯೋಜನೆ ಅಂತಿಮಗೊಳಿಸಿದ್ದು ಶೀಘ್ರದಲ್ಲೇ ಸಚಿವ ಸಂಪುಟ ಸಭೆಯ ಮುಂದಿರಿಸಿ ಒಪ್ಪಿಗೆ ಪಡೆದು ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 100 ಎಕರೆ ಪ್ರದೇಶದಲ್ಲಿ ಗೋಶಾಲೆಯನ್ನು ನಿರ್ಮಿಸುವ ಯೋಜನೆಗೆ ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿದ್ದು. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟದ ಬಳಿ ಅರಣ್ಯಕ್ಕೆ ಸೇರಿದ ಪ್ರದೇಶದಲ್ಲಿ ಯಾವುದೇ ಮರಗಳನ್ನು ಕಡಿಯದೆ ಈ ಗೋಶಾಲೆಯನ್ನು ನಿರ್ಮಿಸಲಾಗುವುದು. ಈ ಬಗ್ಗೆ ವಿಸ್ತೃತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಗೆ ಪ್ರತಿವರ್ಷ ಆಡಿಟ್ ವರದಿ ಸಲ್ಲಿಸುವುದು ಕಡ್ಡಾಯ. ಆದರೆ ಹಲವಾರು ವರ್ಷಗಳಿಂದ ಕೇವಲ ನಾಲ್ಕು ದೇವಸ್ಥಾನಗಳು ಆಡಿಟ್ ವರದಿಯನ್ನು ಸಲ್ಲಿಸುತ್ತಿದ್ದವು. ಬೇರೆ ದೇವಸ್ಥಾನಗಳು ಆಡಿಟ್ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವಂತೆ ಈ ಬಗ್ಗೆ ಕಳೆದ ನವೆಂಬರ್‍ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೋಟೀಸ್ ನೀಡಲಾಗಿತ್ತು ಎಂದು ತಿಳಿಸಿದರು.

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ಆಡಿಟ್ ವರದಿ 2012-13ನೇ ಸಾಲಿನಿಂದ ನಿಯಮಿತವಾಗಿ ಸರ್ಕಾರಕ್ಕೆ ಸಲ್ಲಿಸಲಾಗಿಲ್ಲ. ನೋಟೀಸ್ ನೀಡಿದ ನಂತರ 3 ವರ್ಷಗಳ ಆಡಿಟ್ ವರದಿಯನ್ನು ಸಲ್ಲಿಸಲಾಗಿದೆ. ಇನ್ನು ಬಾಕಿ ಉಳಿದಿರುವ ವರ್ಷಗಳ ಆಡಿಟ್ ವರದಿಯನ್ನು ಮಾರ್ಚ್ 31 ರ ಒಳಗಾಗಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದರು.

ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿರುವ ಪ್ರಕರಣಗಳನ್ನು ಶೀಘ್ರ ವಿಲೇವಾರಿಗೊಳಿಸಬೇಕು. ಈ ಮೂಲಕ ಅಭಿವೃದ್ದಿಗೆ ಅಡ್ಡಿಯಾಗಿರುವ ಆತಂಕಗಳನ್ನು ನಿವಾರಿಸಿಕೊಳ್ಳಬೇಕು. ಆಶ್ಲೇಷ ಬಲಿ ಹಾಗೂ ಸರ್ಪಸಂಸ್ಕಾರದ ಸ್ಲಾಟ್‍ಗಳನ್ನು ಹೆಚ್ಚಿಸುವ ದೃಷ್ಟಿಯಿಂದ ಚಿಂತನೆ ನಡೆಸಬೇಕು ಎಂದರು.

ದೇವಸ್ಥಾನದ ಸುರಕ್ಷತೆಗಾಗಿ 60 ಹೋಮ್ ಗಾರ್ಡ್‍ಗಳನ್ನು ನಿಯಮಿತವಾಗಿ ನೇಮಕ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಬಗ್ಗೆ ಸಂಬಂಧಪಟ್ಟ ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಮತಿ ದೊರಕಿಸಿಕೊಡಲಾಗುವುದು ಎಂದು ಹೇಳಿದರು.

ಇಂದಿನ ಅವಶ್ಯಕತೆಗೆ ತಕ್ಕಂತೆ ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳುವುದು ಸರಿಯಲ್ಲ. ಮುಂದಿನ 35 ವರ್ಷಗಳ ನಂತರವೂ ಈ ಅಭಿವೃದ್ದಿ ಕಾರ್ಯ ಪ್ರಸ್ತುತವಾಗಿರಬೇಕು. ದೇವಸ್ಥಾನದ ಸುತ್ತಮುತ್ತಲಿರುವ ಹಸಿರನ್ನು ಕಾಪಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಎಂದು ತಿಳಿಸಿದರು.

ದೈವ ಸಂಕಲ್ಪ ಯೋಜನೆಯ ಅಡಿಯಲ್ಲಿ ಮೊದಲ ಹಂತವಾಗಿ ರಾಜ್ಯದ 25 ದೇವಸ್ಥಾನಗಳನ್ನು ಸಮಗ್ರ ಅಭಿವೃದ್ದಿಗೊಳಿಸುವ ಯೋಜನೆಯನ್ನು ಪ್ರಾರಂಭಿಸಿದ್ದು, ರಾಜ್ಯದ ದೇವಸ್ಥಾನಗಳನ್ನು ಸಮಗ್ರ ಅಭಿವೃದ್ದಿಗೊಳಿಸುವುದು ಹಾಗೂ ಭಕ್ತರಿಗೆ ಎಲ್ಲಾ ರೀತಿಯ ಅನುಕೂಲ ಮಾಡಿಕೊಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕುಕ್ಕೇ ಸುಬ್ರಮಣ್ಯ ದೇವಸ್ಥಾನದ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ದೇವಸ್ಥಾನದ ಕಾರ್ಯನಿರ್ವಹಕ ಅಧಿಕಾರಿ ಡಾ. ನಿಂಗಯ್ಯ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಸಚಿವರು ಕುಕ್ಕೇ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ತಮ್ಮ ಭೇಟಿಯ ನೆನೆಪಿಗಾಗಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ನಡೆಸಲಾಗುತ್ತಿರುವ ವನಸಂವರ್ಧನಾ ಕಾರ್ಯಕ್ರಮದ ಅಂಗವಾಗಿ ನಾಗಸಂಪಿಗೆ ಗಿಡವನ್ನು ನೆಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು