ಇತ್ತೀಚಿನ ಸುದ್ದಿ
ಅಸೈಗೋಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಿಕ್ಷಕರೊಂದಿಗೆ ಶೈಕ್ಷಣಿಕ ಸಮಾಲೋಚನ ಸಭೆ, ಪೋಷಕರ ಸಭೆ
29/06/2022, 20:46

ಮಂಗಳೂರು(reporterkarnataka.com): ರಾಜ್ಯ ಅಲ್ಪಸಂಖ್ಯಾತ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನ ಸಹಯೋಗದಲ್ಲಿ ಉಳ್ಳಾಲ ತಾಲೂಕಿನ ಕೊಣಾಜೆ ಗ್ರಾಮದ ಅಸೈಗೋಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಂಗಳವಾರ ಶಿಕ್ಷಕರೊಂದಿಗೆ ಶೈಕ್ಷಣಿಕ ಸಮಾಲೋಚನ ಸಭೆ ಹಾಗೂ ಪೋಷಕರ ಸಭೆ ಜರುಗಿತು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಯು.ಟಿ. ಖಾದರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವನ್ನು ವಿತರಿಸಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳನ್ನು ಒಂದುಗೂಡಿಸಿ , 2022-23ನೇ ಸಾಲಿಗೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಎಂದು ಮರುನಾಮಕರಣಗೊಳಿಸಲಾಯಿತು. 6ರಿಂದ 12 ನೇ ತರಗತಿವರೆಗೆ ಕೇಂದ್ರಿಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(CBSE)ಯಿಂದ ಮಾನ್ಯತೆ ಪಡೆದಿದ್ದು, ಈ ವಸತಿ ಶಾಲೆಯು ಗರಿಷ್ಠ 530 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೊಂದಿದೆ.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 6ಯಿಂದ 12 ನೇ ತರಗತಿವರೆಗೆ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ವಸತಿ ಶಾಲೆಯಲ್ಲಿ ಪಠ್ಯ ಪುಸ್ತಕ, ಸ್ಟೇಷನರಿ ವಸ್ತುಗಳು, ಸಮವಸ್ತ್ರ, ಶೂ, ಸಾಕ್ಸ್, ಸೋಪ್ ಕಿಟ್ ಹಾಗೂ ಇತರ ಎಲ್ಲಾ ಅವಶ್ಯಕ ಸಾಮ್ರಗಳನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡಲಾಗುತ್ತಿದೆ.
ಪ್ರವೇಶಾತಿಯಲ್ಲಿ 75 % ಅಲ್ಪಸಂಖ್ಯಾತರು ಮತ್ತು 25% ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾಗಿರುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿಗೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಮಧ್ಯೆ 15 ರವರೆಗೂ ಪ್ರವೇಶಾತಿ ಪಡೆಯಬಹುದಾಗಿದೆಎಂದು ಅವರು ಹೇಳಿದರು
ಕಾರ್ಯಕ್ರಮದಲ್ಲಿ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯಾದ ದರ್ಶಿನಿ ಕೆ.ಡಿ 573 (91.68%), ಸರಕಾರಿ ಮುಸ್ಲಿಂ ವಸತಿ ಶಾಲೆಯ ವಿದ್ಯಾರ್ಥಿಯಾದ ಇಬ್ರಾಹಿಂ 577 (92.32%) ಹಾಗೂ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅಶ್ವಿನಿ. ಕೆ. 561 (93.5%), ಬಿಸ್ಮಯ 561 (93.5%) ಇವರನ್ನು ಶಾಸಕರ ಯು.ಟಿ.ಖಾದರ್ ಸನ್ಮಾನಿಸಿದರು.
ಮುಖ್ಯ ಅತಿಥಿಗಳಾದಂತಹ ರಾಮಕೃಷ್ಣ ಪ್ರೌಢ ಶಾಲೆ ಪರೇಕಳ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಜೀವನವನ್ನು ರೂಪಿಸಿಕೊಳ್ಳುವುದರ ಕುರಿತು ಹಾಗೂ ಪೋಷಕರಿಗೆ ತಮ್ಮ ಮಕ್ಕಳ ವಿದ್ಯಾಭ್ಯಾಸದ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಅಧಿಕಾರಿ ಅಂಜನಪ್ಪ ಎಸ್., ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂಚಲಾಕ್ಷಿ, ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯ ನಝೀರ್, ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗಪ್ರಸಾದ್ ರೆಡ್ಡಿ, ಸರಕಾರಿ ಮುಸ್ಲಿಂ ವಸತಿ ಶಾಲೆಯ ಪ್ರಾಂಶುಪಾಲ ಮಂಜುನಾಥ ಭಟ್, ಅಲ್ಪಸಂಖ್ಯಾತ ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲದ ಮಹಾಬಲೇಶ್ವರ ನಾಯ್ಕ ಸ್ವಾಗತಿಸಿದರು. ಉಪನ್ಯಾಸಕ ಹರೀಶ್ ವಂದಿಸಿದರು. ಉಪನ್ಯಾಸಕ ಡಾ. ವಿರೂಪಾಕ್ಷಪ್ಪ ಕಾರ್ಯಕ್ರಮ ನಿರೂಪಿಸಿದರು.