2:04 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮಲೆನಾಡು, ಕರಾವಳಿಯ ಭೂಕುಸಿತ ಪ್ರದೇಶಗಳಿಗೆ ಹೆಚ್ಚಿನ ಗಮನಹರಿಸಿ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/08/2022, 00:11

ಮಡಿಕೇರಿ(reporterkarnataka.com):
ಮುಂದಿನ 10 ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.      

ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಜತೆ ಮಂಗಳವಾರ ನಡೆದ ವಿಡಿಯೋ ಸಂವಾದದಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.   

ಮುಂದಿನ 10 ದಿನಗಳಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಈ ಸಂಬಂಧ ಸೂಕ್ಷ್ಮ ಪ್ರದೇಶದಲ್ಲಿನ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಅವರು ಹೇಳಿದರು. 

ಮನೆ ಹಾನಿಗೆ ಸಂಬಂಧಿಸಿದಂತೆ ಕೂಡಲೇ ಪರಿಹಾರ ವಿತರಿಸಬೇಕು. ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಗಮನಹರಿಸುವಂತೆ ಮುಖ್ಯಮಂತ್ರಿ ಅವರು ಸೂಚಿಸಿದರು. 

ಈಗಾಗಲೇ ಕೈಗೊಂಡಿರುವ ವಿಶೇಷ ಕಾರ್ಯಪಡೆ, ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ತಂಡಗಳ ಕಾರ್ಯನಿರ್ವಹಣೆ, ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವುದು ಮತ್ತಿತರವನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದರು.  

ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಸಂಬಂಧಿಸಿದಂತೆ ಮಾಹಿತಿ ಪಡೆದ ಮುಖ್ಯಮಂತ್ರಿ ಅವರು, ತಡೆಗೋಡೆಗೆ ಸದ್ಯ ಮರಳು ಮೂಟೆಗಳನ್ನು ಅಳವಡಿಸಲಾಗಿದ್ದು, ಲಘು ವಾಹನ ಸಂಚಾರಕ್ಕೆ ಅವಕಾಶ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದರು. 

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿ ಕಳೆದ 24 ಗಂಟೆ ಅವಧಿಯಲ್ಲಿ ಸಂಪಾಜೆ ಮತ್ತು ಕರಿಕೆ ಭಾಗದಲ್ಲಿ ಹೆಚ್ಚಿನ ಮಳೆಯಾಗಿತ್ತು, ಕೊಯನಾಡು ಬಳಿ 5 ಮನೆ ಮತ್ತು ಸಂಪಾಜೆ ಬಳಿ 2 ಮನೆಗಳಿಗೆ ಹಾನಿಯಾಗಿದ್ದು, 12 ಕಡೆ ಮಣ್ಣು ಕುಸಿತ ಉಂಟಾಗಿದೆ. ಸದ್ಯ ಮನೆ ಹಾನಿಯಾಗಿರುವುದಕ್ಕೆ ತಲಾ 10 ಸಾವಿರ ರೂ. ಪರಿಹಾರ ವಿತರಿಸಲಾಗಿದೆ ಎಂದರು.  

ಸದ್ಯ ಕಾಳಜಿ ಕೇಂದ್ರದಲ್ಲಿ 5 ಕುಟುಂಬದ 21 ಜನರು ಇದ್ದಾರೆ. ಸಂಬಂಧಿಕರ ಮನೆಯಲ್ಲಿರುವವರಿಗೂ ಸಹ ಆಹಾರ ಕಿಟ್ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿದರು. 

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಆಯೋಗದ ಆಯುಕ್ತರಾದ ಡಾ.ಮನೋಜ್ ರಾಜನ್ ಅವರು ಮಾಹಿತಿ ನೀಡಿ ಮುಂದಿನ ಒಂದು ವಾರಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಭೂಕುಸಿತ ಪ್ರದೇಶಗಳಲ್ಲಿನ ಜನರಿಗೆ ಮಾಹಿತಿ ನೀಡಿ, ಸ್ಥಳಾಂತರಿಸಬೇಕು. ಸಹಾಯವಾಣಿ ಕೇಂದ್ರಗಳು ಸಂಪರ್ಕದಲ್ಲಿರಬೇಕು. ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್ ಹಾಗೂ ಅಧಿಕಾರಿಗಳ ತಂಡಗಳು ಎಚ್ಚರ ಇರಬೇಕು ಎಂದು ಅವರು ತಿಳಿಸಿದರು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ತುಮಕೂರು, ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯಲ್ಲಿ ಮಳೆಯಿಂದ ಮನೆ ಹಾನಿ ಪರಿಹಾರ ಮತ್ತಿತರ ಬಗ್ಗೆ ಮಾಹಿತಿ ನೀಡಿದರು. 

ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ತಹಶೀಲ್ದಾರ್ ಪಿ.ಎಸ್.ಮಹೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಾರಾಯಣ ರೆಡ್ಡಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವು ಇತರರು ಇದ್ದರು.

ಅಧಿಕಾರಿಗಳ ಜತೆ ಚರ್ಚೆ: ವಿಡಿಯೋ ಸಂವಾದ ಬಳಿಕ ಅಧಿಕಾರಿಗಳ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮುಂದಿನ ಹತ್ತು-ಹದಿನೈದು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಈಗಾಗಲೇ ಗುರುತಿಸಲಾಗಿರುವ 43 ಗ್ರಾಮಗಳ ಸೂಕ್ಷ್ಮ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಬೇಕಿದೆ ಎಂದರು. 

ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಹಾಗೂ ಸೆಸ್ಕ್ ವಿಭಾಗಗಳು ಅಗತ್ಯ ಮೂಲಸೌಲಭ್ಯ ಸಂಬಂಧ ಹೆಚ್ಚಿನ ಗಮನಹರಿಸುವಂತೆ ಸೂಚಿಸಿದರು. 

ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಎರಡನೇ ಮೊಣ್ಣಂಗೇರಿ ಮತ್ತು ತೋರ ಗ್ರಾಮಗಳಲ್ಲಿನ ಜನರನ್ನು ಹೆಚ್ಚಿನ ಮಳೆಯಾದಲ್ಲಿ ಸ್ಥಳಾಂತರಿಸಬೇಕಿದೆ ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವು ಅವರು ಈ ಬಾರಿ ಗಾಳಿಬೀಡು, ಮದೆ, ಕರ್ಣಂಗೇರಿ ಮತ್ತಿತರ ಗ್ರಾ.ಪಂ.ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗಿದ್ದು, ಇಂತಹ ಕಡೆಗಳಲ್ಲಿ ಹೆಚ್ಚಿನ ಗಮನಹರಿಸಬೇಕಿದೆ. ಜೊತೆಗೆ ಆಗಸ್ಟ್15 ರ ವರೆಗೆ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು