ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಮತ್ತೆ ಕಾನೂನುಬದ್ಧ ಲಾಟರಿ ಜಾರಿ: ಸುಪ್ರೀಂಕೋರ್ಟ್ ಮೊರೆ ಹೋಗಲು ಸಿದ್ಧತೆ
05/01/2023, 20:15

ಬೆಂಗಳೂರು(reporter Karnataka.com): ಆನ್ಲೈನ್ ಜೂಜು ಸೇರಿದಂತೆ ಅನ್ಯ ರಾಜ್ಯಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಲಾಟರಿ ಅಕ್ರಮ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾನೂನು ಬದ್ಧವಾಗಿ ಮತ್ತೆ ಲಾಟರಿ ಜಾರಿಗೊಳಿಸುವ ಬಗ್ಗೆ ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿರುವ ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸಿ. ರಾಮಕೃಷ್ಣ, ರಾಜ್ಯದಲ್ಲಿ ಮಾರಾಟ ಆರಂಭಿಸುವ ಬಗ್ಗೆ ಮುಂದಿನ 30 ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಲಾಟರಿ ಮರು ಜಾರಿ ಬಗ್ಗೆ ಸಮಿತಿ ರಚಿಸಬೇಕು. ಇಲ್ಲದಿದ್ದರೆ ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ 2007 ರಿಂದ ಲಾಟರಿ ನಿಷೇಧಿಸಲಾಗಿದ್ದರೂ ಅಕ್ರಮ, ಆನ್ಲೈನ್ ಲಾಟರಿ ಎಗ್ಗಿಲ್ಲದೇ ನಡೆಯುತ್ತಿದೆ. ಕೇರಳ ಲಾಟರಿ ಶೇಕಡ 60ರಷ್ಟು ಅಕ್ರಮವಾಗಿ ಚಲಾವಣೆಯಾಗುತ್ತಿದ್ದು, ಸಿಕ್ಕಿಂ ಸೇರಿದಂತೆ ಆಗ್ನೇಯ ರಾಜ್ಯಗಳ ಲಾಟರಿ ಕೂಡ ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಬದ್ಧವಾಗಿ ಪುನಃ ಲಾಟರಿ ಜಾರಿಗೊಳಿಸುವ ಬಗ್ಗೆ ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಬೇಕೆಂದು ಒತ್ತಾಯಿಸಲಾಗಿದೆ.