ಇತ್ತೀಚಿನ ಸುದ್ದಿ
ಚಿತ್ರ ನಟ ಯಶ್ ಹುಟ್ಟುಹಬ್ಬದ ಕಟೌಟ್ ಅಳವಡಿಸುವ ವೇಳೆ ವಿದ್ಯುತ್ ಅವಘಢ: 3 ಮಂದಿ ಯುವಕರು ದಾರುಣ ಸಾವು
08/01/2024, 16:03

ಗದಗ(reporterkarnataka.com): ಕೆಜಿಎಫ್ ಖ್ಯಾತಿಯ ನಟ ಯಶ್ ಅವರ ಬರ್ತಡೇಗೆ ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವ ಸಂದರ್ಭದಲ್ಲಿ ಕರೆಂಟ್ ಶಾಕ್ ಹೊಡೆದು ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಹನುಮಂತ, ಮುರಳಿ ನಡುವಿನಮನಿ ಮತ್ತು ನವೀನ ಗಾಜಿ ಎಂದು ಗುರುತಿಸಲಾಗಿದೆ. ಇವರೆಲ್ಲ 19ರಿಂದ 21 ವರ್ಷದೊಳಗಿನ ತರುಣರು ಆಗಿದ್ದಾರೆ. ಇದೇ ವೇಳೆ ಇನ್ನೂ ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದೆ.
ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಅಂಬೇಡ್ಕರ್ ನಗರದ ಯಶ್ ಅಭಿಮಾನಿಗಳು ಭಾನುವಾರ ರಾತ್ರಿ ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವುದಕ್ಕೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಕಟೌಟ್ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ವಿದ್ಯುತ್ ಪ್ರವಹಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಯುವಕರ ಹಠಾತ್ ಸಾವಿನಿಂದಾಗಿ ಸೂರಣಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಡಾ. ಚಂದ್ರು ಲಮಾಣಿ ಆಸ್ಪತ್ರೆಗೆ ಭೇಟಿ ನೀಡಿದ್ದರು.