9:36 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಯಾವುದೇ ತನಿಖೆಗೂ ಹಿಂಜರಿಯುವುದಿಲ್ಲ; ಷಡ್ಯಂತ್ರ ಫಲಿಸದು: ಮುಖ್ಯಮಂತ್ರಿ ಸಿದ್ದರಾಮಯ್ಯ

24/09/2024, 17:59


ಬೆಂಗಳೂರು(reporterkarnataka.com):
ಯಾವುದೇ ತನಿಖೆಗೆ ನಾನು ಹಿಂಜರಿಯುವುದಿಲ್ಲ. ಕಾನೂನಿನಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಮಾತನಾಡುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹೈಕೋರ್ಟ್ ತೀರ್ಪು ಬಂದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಸಿಕ್ಕಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ನನಗೆ ಜನರ ಬೆಂಬಲ‌ ಇರುವ ವರೆಗೆ ಯಾವುದೇ ಷಡ್ಯಂತ್ರ ಫಲಿಸದು. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಸತ್ಯ ಶೀಘ್ರದಲ್ಲಿ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸವಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ಮುಖ್ಯಮಂತ್ರಿ ನುಡಿದರು.
ಇದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರ ನಡೆಸುತ್ತಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯ ಎದುರಿಸಿದ್ದೇನೆ. ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು