5:47 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ: ಎಚ್ಡಿಕೆಗೆ ಈಶ್ವರ ಖಂಡ್ರೆ ಪ್ರಶ್ನೆ

03/02/2025, 18:58

•ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕೆ - ಎಚ್ಡಿಕೆಗೆ ಈಶ್ವರ ಖಂಡ್ರೆ ಪ್ರಶ್ನೆ
ಅಭಿವೃದ್ಧಿಗೆ ಅಡ್ಡಿಯಲ್ಲ, ರಾಜ್ಯ ಹಿತದ ರಕ್ಷಣೆ: ಎಚ್.ಡಿಕೆಗೆ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರು(reporterkarnataka.com): ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಿಥ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಬೆರಸುವುದಿಲ್ಲ, ಆದರೆ ಕೆ.ಐ.ಓ.ಸಿ.ಎಲ್. ಈ ಹಿಂದೆ ಗಣಿಗಾರಿಕೆ ನಡೆಸುವಾಗ ಸರಿಪಡಿಸಲು ಸಾಧ್ಯವೇ ಆಗದಷ್ಟು ಪರಿಸರ ಹಾನಿ ಮಾಡಿದೆ, ಪರಿಸರ ಹಾನಿಯ ಮೊತ್ತ ಸೇರಿದಂತೆ 1400 ಕೋಟಿ ರೂ. ಬಾಕಿ ಕಟ್ಟಿಲ್ಲ. ತನ್ನ ತಪ್ಪು ಸರಿಪಡಿಸಿಕೊಳ್ಳಲು ತಯಾರಿಲ್ಲದ ಕಂಪನಿಗೆ ಮತ್ತಷ್ಟು ಪರಿಸರ ಹಾನಿ ಮಾಡಲು ಬಿಡಬೇಕೆ ಎಂದು ಪ್ರಶ್ನಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಕೆಐಓಸಿಎಲ್ ಅಕ್ರಮವಾಗಿ ಲಕ್ಯಾ ಜಲಾಶಯದ ಎತ್ತರ ಹೆಚ್ಚಿಸಿ, ಅರಣ್ಯ ಮುಳುಗಡೆ ಮಾಡಿತ್ತು. ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಎನ್.ಪಿ.ವಿ. ಮೊತ್ತ, ಬಡ್ಡಿ ಸೇರಿ ಸುಮಾರು 1349.52948 ಕೋಟಿ ರೂ.ಗಳನ್ನು ಅರಣ್ಯ ಇಲಾಖೆಗೆ ಪಾವತಿಸಬೇಕಿದೆ, ಇದರ ಜೊತೆಗೆ 1334.33 ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕಿದೆ. ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಅವರು, ಅರಣ್ಯ ಇಲಾಖೆಗೆ ಕಟ್ಟಬೇಕಾದ ಬಾಕಿ ಮತ್ತು ಹಿಂತಿರುಗಿಸಬೇಕಾದ ಭೂಮಿಯ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದ್ದಾರೆ.
ಕೇಂದ್ರ ಉನ್ನತಾಧಿಕಾರ ಸಮಿತಿ (ಸಿ.ಇ.ಸಿ.) ವರದಿಯಲ್ಲಿ ಹಾಗೂ 13ನೇ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ನೀಡಿರುವ 3ನೇ ವರದಿಯಲ್ಲೂ ಕೆಐಓಸಿಎಲ್ ಪರಿಸರಕ್ಕೆ ಮಾಡಿರುವ ಹಾನಿಯ ಬಗ್ಗೆ ಸ್ಪಷ್ಟವಾಗಿ ಉಲ್ಲೇಖವಿದೆ. ಕಂಪನಿ ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಸಲು ಸೂಕ್ತ ಅನುಮತಿ ಪಡೆಯದೇ ನಿಯಮ ಉಲ್ಲಂಘಿಸಿದೆ. ಮಾಡಿರುವ ತಪ್ಪು ಸರಿಪಡಿಸಿಕೊಂಡು, ದಂಡ ಪಾವತಿಸಿ ಎಂದು ಹೇಳಿದರೆ ಅದು ಅಭಿವೃದ್ಧಿಗೆ ಅಡ್ಡಿ ಮಾಡುವ ರಾಜಕೀಯ ಆಗುತ್ತದೆಯೇ ಎಂದು ಖಂಡ್ರೆ ಪ್ರಶ್ನಿಸಿದ್ದಾರೆ.
ಕೇಂದ್ರ ಉಕ್ಕು ಸಚಿವಾಲಯದಡಿ ಬರುವ ಎನ್.ಎಂ.ಡಿ.ಸಿ.ಗೆ ಉಕ್ಕು ಕಾರ್ಖಾನೆ ಸ್ಥಾಪಿಸಲು 2014ರಲ್ಲಿಯೇ ಬಳ್ಳಾರಿ ಬಳಿ ವೇಣಿವೀರಾಪುರದಲ್ಲಿ 2857.54 ಎಕರೆ ಜಮೀನು ನೀಡಲಾಗಿದೆ. ಉಕ್ಕು ಕಾರ್ಖಾನೆ ಆರಂಭಿಸಿದರೆ 50 ಸಾವಿರ ಜನರಿಗೆ ಉದ್ಯೋಗ ಲಭಿಸುತ್ತದೆ. ಕೆಐಓಸಿಎಲ್ ಮುಚ್ಚಿದರೆ 300 ಕಾರ್ಮಿಕರಿಗೆ ತೊಂದರೆ ಆಗುತ್ತದೆ ಎನ್ನುತ್ತಿದ್ದ ಕುಮಾರಸ್ವಾಮಿ ಈಗ 1000 ಕಾರ್ಮಿಕರು ಎನ್ನುತ್ತಿದ್ದಾರೆ, ವೇಣಿಪುರದಲ್ಲಿ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ನೀಡಬಹುದು. ಏಕೆ ಆರಂಭ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಎಚ್.ಎಂ.ಟಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ಕೊಡಬೇಕೆ?
ಎಚ್.ಎಂ.ಟಿ. ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಅರಣ್ಯ ಜಮೀನು ಮಂಜೂರಾತಿಯ ಬಗ್ಗೆಯೇ ಅನುಮಾನವಿದೆ. ಎಚ್.ಎಂ.ಟಿ. ತನಗೆ ಮಂಜೂರಾಗಿದೆ ಎಂದು ಒದಗಿಸಿರುವ ದಾಖಲೆಯಲ್ಲಿ ಸರ್ವೆ ನಂಬರ್ ಮತ್ತು ಮಂಜೂರಾದ ದಿನಾಂಕವೂ ಇಲ್ಲ. 443 ಎಕರೆ ಭೂಮಿ ಮಂಜೂರಾತಿ ಬಗ್ಗೆ ಅಥವಾ ಅರಣ್ಯೇತರ ಉದ್ದೇಶಕ್ಕೆ ಸರ್ಕಾರಿ ಆದೇಶ ಆಗಿರುವ ಯಾವುದೇ ಗೆಜೆಟ್ ಅಧಿಸೂಚನೆ ಇಲ್ಲ. ಹೀಗಿದ್ದೂ ಪ್ರಸ್ತುತ ಮುಚ್ಚಿಹೋಗಿರುವ ಎಚ್.ಎಂ.ಟಿ. ಅರಣ್ಯ ಜಮೀನನ್ನು ಖಾಸಗಿ ಬಿಲ್ಡರ್ ಗಳು ಸೇರಿದಂತೆ ಹಲವು ಕಂಪನಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದೆ. ಎಚ್.ಎಂ.ಟಿ.ಗೆ ರಿಯಲ್ ಎಸ್ಟೇಟ್ ದಂಧೆ ನಡೆಸಲು ಸರ್ಕಾರ ಅವಕಾಶ ಕೊಡಬೇಕೇ ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯ Once a Forest is Always a Forest – Environment is more important than civil rights ಎಂದು ಪದೇ ಪದೇ ಹೇಳಿದೆ. ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಡಿನೋಟಿಫೈ ಆಗಿಲ್ಲ. ಹೀಗಾಗಿ ಅದನ್ನು ಪರಭಾರೆ, ದಾನ ಮಾಡಲು ಅವಕಾಶವೇ ಇಲ್ಲ. ಅರಣ್ಯ ಭೂಮಿ ಮರಳಿ ಪಡೆಯುವುದರಲ್ಲಿ ತಪ್ಪೇನು? ಜೊತೆಗೆ ಕೆಲವೇ ಕೆಲವು ಅಧಿಕಾರಿಗಳು ಸಚಿವ ಸಂಪುಟದ ಗಮನಕ್ಕೂ ತಾರದೆ, ತಾವೇ ಸ್ವಯಂ ನಿರ್ಧಾರ ಕೈಗೊಂಡು ಸುಪ್ರೀಂಕೋರ್ಟ್ ಗೆ ಮಧ್ಯಂತರ ಅರ್ಜಿ (IA) ಹಾಕಿದ್ದರು, ಈ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಸಹ ನೀಡಲಾಗಿದೆ. ಸರ್ಕಾರದ ಸಮ್ಮತಿ ಇಲ್ಲದ ಐಎ ಹಿಂಪಡೆಯಲು ನಿರ್ಧರಿಸಲಾಗಿತ್ತು, ಇದಕ್ಕೆ ಸಚಿವ ಸಂಪುಟವೂ ಘಟನೋತ್ತರ ಅನುಮೋದನೆ ನೀಡಿದೆ. ಇದರಲ್ಲಿ ಅಭಿವೃದ್ಧಿಗೆ ಅಡ್ಡಿ ಪಡಿಸುವ ಯಾವುದೇ ರಾಜಕೀಯ ಇಲ್ಲ. ಬದಲಾಗಿ ರಾಜ್ಯದ ಹಿತವಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬಂದಾಗಲೆಲ್ಲಾ ಎಚ್.ಎಂ.ಟಿ, ಮತ್ತು ಕೆ.ಐ.ಓ.ಸಿ.ಎಲ್. ವಿಚಾರದಲ್ಲಿ ಆರೋಪ ಮಾಡುವುದನ್ನು ಬಿಟ್ಟು, ರಾಜ್ಯದ ಹಿತದ ಬಗ್ಗೆಯೂ ಚಿಂತಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು