ಇತ್ತೀಚಿನ ಸುದ್ದಿ
ಕರಾವಳಿ ಜಿಲ್ಲೆಗಳ ಮಳೆಹಾನಿ ಕುರಿತು ಸಿಎಂ, ಸಚಿವರ ಜತೆ ಚರ್ಚೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ
21/05/2025, 23:34

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗಿದ್ದು ಬಿಟ್ಟರೆ ದೊಡ್ಡದಾದ ಅನಾಹುತಗಳು ನಡೆದ ವರದಿಯಾಗಿರುವುದಿಲ್ಲ. ಹೀಗಾಗಿ ಮಳೆಹಾನಿ ಪ್ರದೇಶಗಳಲ್ಲಿ ಈಗಾಗಲೇ ಸಮೀಕ್ಷೆಯನ್ನು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಸಮಾಲೋಚನೆಯನ್ನು ನಡೆಸಿದ್ದು ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ, ಗಾಳಿಯಿಂದ ಹೆಚ್ಚಿನ ಅಪಾಯ ಮತ್ತು ಹಾನಿಯುಂಟಾಗುವುದನ್ನು ತಡೆಯಲು ವಿಪತ್ತು ನಿರ್ವಹಣಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವಂತೆ ನಿರ್ದೇಶನವನ್ನು ನೀಡಿದ್ದೇನೆ. ಮುಖ್ಯಮಂತ್ರಿಗಳು ಹಾಗೂ ಸಚಿವರ ಬಗ್ಗೆ ಈ ಕುರಿತು ಮಾತಾಡಿ ಜಿಲ್ಲೆಯಲ್ಲಿ ಮಳೆಯಿಂದ ಆಗುವ ತೊಂದರೆಗಳ ಬಗ್ಗೆ ಗಮನ ಸೆಳೆಯಲಾಗಿದೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.