ಇತ್ತೀಚಿನ ಸುದ್ದಿ
ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್, ಪವಿತ್ರಾ ಗೌಡ ಸಹಿತ 4 ಮಂದಿ ಆರೋಪಿಗಳ ಬಂಧನ
14/08/2025, 17:22

ಬೆಂಗಳೂರು(reporterkarnataka.com): ಕನ್ನಡ ಚಲನಚಿತ್ರ ನಟ ಹಾಗೂ ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಯಾಗಿರುವ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ನಡುವೆ ಇನ್ನೊರ್ವ ಪ್ರಮುಖ ಆರೋಪಿ ಪವಿತ್ರಾ ಗೌಡ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ ಗೌಡ ಅವರನ್ನು ಆರ್. ಆರ್. ನಗರದ ಅವರ ನಿವಾಸದಿಂದ ಬಂಧಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು
ಸುಪ್ರೀಂಕೋರ್ಟ್ ಇಂದು ರದ್ದು ಮಾಡಿತ್ತು. ಇವತ್ತು ಬೆಳಗ್ಗೆ 10.45ಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜಾಮೀನು ಅರ್ಜಿಯ ತೀರ್ಪು ಹೊರಬಂದಿದೆ. ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ.
ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.