ಇತ್ತೀಚಿನ ಸುದ್ದಿ
ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಭಕ್ತರ ಜಯ ಘೋಷದ ನಡುವೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ
17/10/2025, 15:27

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ತಲಕಾವೇರಿ ದೇವಾಲಯದಲ್ಲಿ ಮಧ್ಯಾಹ್ನ 1.45 ನಿಮಿಷಕ್ಕೆ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಡೆಯಿತು. ಭಕ್ತರ ಜೈ ಜೈ ಮಾತಾ ಕಾವೇರಿ ಮಾತಾ ಘೋಷ ವಾಕ್ಯದ ನಡುವೆ, ಅರ್ಚಕ ವೃಂದದವರ ವೇದ ಪಟ್ಟಣ, ಮಂಗಳಾರತಿ ನಡೆಯುತ್ತಿದ್ದಂತೆ ತೀರ್ಥರೂಪಿಣಿಯಾದ ಮಾತೆ ಕಾವೇರಿ ಜಲ ರೂಪದಲ್ಲಿ ಭಕ್ತರಿಗೆ ದರ್ಶನವನ್ನು ನೀಡಿದಳು.
ಅಸಂಖ್ಯಾ ಭಕ್ತಾದಿಗಳು ಭಾವುಕರಾಗಿ ಈ ಅವಿಸ್ಮರಣೀಯ ಕ್ಷಣವನ್ನು ಕಣ್ತುಂಬಿಸಿಕೊಂಡರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಚ್.ಅರುಣ್ ಮಾಚಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್, ಕೊಡವ ಅರೆ ಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಸೇರಿದಂತೆ ಇತರ ಗಣ್ಯರು ಪಾಲ್ಗೊಂಡಿದ್ದರು.
ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ.ಯು. ಮೋಟಯ್ಯ ಇತರರು ಈ ಸಂದರ್ಭ ಉಪಸ್ಥಿತರಿದ್ದರು. ಭಕ್ತಾದಿಗಳ ನೂಕು ನುಗ್ಗಲನ್ನು ತಡೆಗಟ್ಟಲು ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿಕೂಲ ವಾತಾವರಣದಿಂದ ಹೆಲಿಕಾಪ್ಟರ್ ಟೇಕ್ ಆಫ್ ಆಗಲು ಅಡ್ಡಿ ಯಾದ ಕಾರಣ ಡಿಸಿಎಂ ಡಿ. ಕೆ ಶಿವಕುಮಾರ್ ಗೈರಾಗಿದ್ದರು.
ಕೊಡಗು ಏಕೀಕರಣ ರಂಗದ ವತಿಯಿಂದ ಬೆಳಗಿಂದಲೇ ಆಹಾರ ವ್ಯವಸ್ಥೆ ಸಜ್ಜುಗೊಳಿಸಲಾಗಿತ್ತು. ಈ ಬಾರಿ ಮಧ್ಯಾಹ್ನದ ವೇಳೆ ತೀರ್ಥೋದ್ಭವಾದರಿಂದ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಭಕ್ತಾದಿಗಳು ಮಾತೆ ಕಾವೇರಿ ದರ್ಶನವನ್ನು ಪಡೆದರು. ಭಾಗಮಂಡಲದಿಂದ ಅಸಂಖ್ಯ ಕೊಡವರು ತಮ್ಮ ಸಾಂಪ್ರದಾಯಿಕ ಉಡುಗೆಯೊಂದಿಗೆ ಪಾದಯಾತ್ರೆಯ ಮೂಲಕ 9 ಕಿ.ಮೀ ನಷ್ಟು ಕ್ರಮಿಸಿ ತಲಕಾವೇರಿಗೆ ಆಗಮಿಸಿದ್ದರು. ಶಾಸಕ ಕೆಎಸ್ ಪೊನ್ನಣ್ಣ ಅವರೊಂದಿಗೆ ಹೆಜ್ಜೆ ಹಾಕಿದರು. ಸಂಸದ ಒಡೆಯರ್ ರವರು ಭಕ್ತಾದಿಗಳೊಂದಿಗೆ ಬರಿ ಕಾಲಿನಲ್ಲಿ ಪಾದಯಾತ್ರೆ ಮೂಲಕ ತಲಕಾವೇರಿಗೆ ಆಗಮಿಸಿದರು.
ಬೆಳಗಿನಿಂದಲೇ, ಬಾಳೆಲೆಯ ವತ್ಸಲ ನಾರಾಯಣರವರ ಕಾವೇರಿ ಕಲಾತಂಡದಿಂದ ಸುಗಮ ಸಂಗೀತ ಹಾಗೂ ಭಕ್ತಿಗೀತೆಗಳ ಕಾರ್ಯಕ್ರಮ, ಕೊಡವ ಸಾಹಿತ್ಯ ಅಕಾಡೆಮಿ, ಅರಭಾಷೆ ಸಾಹಿತ್ಯ ಅಕಾಡೆಮಿ, ನಿರ್ಮಲ ಬೊಪಣ್ಣ ತಂಡದ ವತಿಯಿಂದ ಭಕ್ತಿ ಗೀತೆಗಳ ಕಾರ್ಯಕ್ರಮ ಜರಗಿತು. ಈ ಬಾರಿ ಪ್ಲಾಸ್ಟಿಕ್ ಬಾಟಲ್ ಹಾಗೂ ಬಿಂದಿಗೆಯಲ್ಲಿ ಭಕ್ತಾದಿಗಳಿಗೆ ತೀರ್ಥವನ್ನು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿಲ್ಲ. ಸ್ಟೀಲ್ ಹಾಗೂ ತಾಮ್ರದ ಬಿಂದಿಗೆಯಲ್ಲಿ ತೀರ್ಥವನ್ನು ತುಂಬಿಸಿಕೊಂಡು ಹೋಗುವ ದೃಶ್ಯ ಕಂಡು ಬಂತು.