4:25 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ ಕೋಟಿ ಎಲ್ಲಿಂದ ತರುತ್ತಾರೆ?: ಪ್ರತಿಪಕ್ಷ ನಾಯಕ ಆರ್‌.ಅಶೋಕ್

27/10/2025, 22:34

ಬೆಂಗಳೂರು(reporterkarnataka.com): ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್‌ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಪ್ರಶ್ನೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು ಹನ್ನೆರಡು ಜನರು ಸತ್ತಿದ್ದು, ಇದು ಮೃತ್ಯುಕೂಪವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ನಗರ ಪ್ರದಕ್ಷಿಣೆ ಮಾಡಿದರೆ ರಸ್ತೆಗುಂಡಿ ಕಾಣುವುದಿಲ್ಲ. ತೆರಿಗೆ ಪಾವತಿಸಲ್ಲ, ರಸ್ತೆಗುಂಡಿ ನಾವೇ ಮುಚ್ಚುತ್ತೇವೆ ಎಂದು ಜನರು ಹೇಳುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇಡೀ ರಾಜ್ಯದ ರಸ್ತೆಗಳಲ್ಲಿ ಎಷ್ಟು ಗುಂಡಿ ಇದೆ ಎಂದು ಸರ್ಕಾರ ತಿಳಿಸಿದರೆ, ಗಿನ್ನೆಸ್‌ ದಾಖಲೆಗೆ ಕಳುಹಿಸಬಹುದು ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿ, ಒಂದು ಲೇಯರ್‌ ಡಾಂಬರೀಕರಣ ಮಾಡಿ ಎಂದು ಸೂಚನೆ ನೀಡಿದ್ದಾರೆ. ಇದಕ್ಕೆ 4-5 ಸಾವಿರ ಕೋಟಿ ರೂ. ಬೇಕಾಗುತ್ತದೆ. ಗ್ರಂಥಪಾಲಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಸಂಬಳವೇ ಇಲ್ಲ. ಇನ್ನು ಇಷ್ಟೊಂದು ಹಣ ಎಲ್ಲಿದೆ? ಬಿಬಿಎಂಪಿ ಅಸ್ತಿತ್ವದಲ್ಲಿಲ್ಲದೆ ರಸ್ತೆ ಡಾಂಬರೀಕರಣಕ್ಕೆ ಟೆಂಡರ್‌ ಆಗುತ್ತಿಲ್ಲ. ಆದ್ದರಿಂದ ಬೆಂಗಳೂರು ಗ್ರೇಟರ್‌ ಪ್ರಾಧಿಕಾರವನ್ನು ಮುಂದೆ ನಾವು ರದ್ದು ಮಾಡುತ್ತೇವೆ ಎಂದರು.

*ಸುರಂಗ ರಸ್ತೆ ಅಸಾಧ್ಯ:*
ನಗರದ ಶ್ವಾಸಕೋಶದಂತಿರುವ ಲಾಲ್‌ಬಾಗ್‌ನಲ್ಲಿ ಐದಾರು ಎಕರೆ ಪಡೆದು ಸುರಂಗ ರಸ್ತೆ ನಿರ್ಮಿಸಲಾಗುತ್ತದೆ. ನಗರಕ್ಕೆ ಹಸಿರು ನೀಡುವ ಇಂತಹ ಉದ್ಯಾನದಲ್ಲಿ ಸುರಂಗ ಕೊರೆಯಬಾರದು. ಈ ಯೋಜನೆಯಿಂದ ಅಂತರ್ಜಲಕ್ಕೆ ಧಕ್ಕೆಯಾಗುತ್ತದೆ. ಕೆಂಪೇಗೌಡ ಗೋಪುರ ಲಾಲ್‌ಬಾಗ್‌ನಲ್ಲಿದ್ದು, ಅದನ್ನೂ ಸರ್ಕಾರ ಒಡೆದುಹಾಕಬಹುದು. ವಿಜ್ಞಾನಿಗಳು, ಪರಿಸರವಾದಿಗಳು ಏನು ಹೇಳಿದ್ದಾರೆ ಎಂದು ಸರ್ಕಾರ ನೋಡಬೇಕಿದೆ. ಎತ್ತಿನಹೊಳೆ ಯೋಜನೆಯೇ ಇನ್ನೂ ಅನುಷ್ಠಾನವಾಗಿಲ್ಲ. ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ. ಇದರ ವಿರುದ್ಧ ಬಿಜೆಪಿ ಶಾಸಕರೊಂದಿಗೆ ಹೋರಾಟ ಮಾಡಲಾಗುವುದು ಎಂದರು.
ಮಳೆಯಿಂದಾಗಿ ಬೆಳೆ ಹಾನಿ ಪರಿಹಾರವನ್ನು ಇನ್ನೂ ಕೊಟ್ಟಿಲ್ಲ. ಜೊತೆಗೆ ಸೋಯಾ, ಸೂರ್ಯಕಾಂತಿ, ಉದ್ದು, ಹೆಸರು ಮೊದಲಾದ ಬೆಳೆಗಳನ್ನು ಸರ್ಕಾರ ಖರೀದಿಸಬೇಕಿತ್ತು. ಈ ಕುರಿತು ಕೂಡಲೇ ಸರ್ಕಾರ ಕ್ರಮ ವಹಿಸಬೇಕು. ಬೆಲೆ ಕುಸಿದಿರುವ ಈರುಳ್ಳಿಯನ್ನು ಕೂಡಲೇ ಖರೀದಿ ಮಾಡಬೇಕು ಎಂದು ಆಗ್ರಹಿಸಿದರು.
2025-26 ನೇ ಆರ್ಥಿಕ ಸಾಲಿನಲ್ಲಿ 6 ತಿಂಗಳು ಕಳೆದು ಹೋದರೂ ಶೇ.30% ಮಾತ್ರ ಅನುದಾನ ಬಳಕೆಯಾಗಿದೆ. ಆರ್‌ಎಸ್‌ಎಸ್‌ ಬಗ್ಗೆ ಟೀಕೆ ಮಾಡುವ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಇಲಾಖೆಗಳ ಪ್ರದರ್ಶನ ಅತ್ಯಂತ ಕಳಪೆಯಾಗಿದ್ದು, ಆರ್‌ಡಿಪಿಆರ್ ಇಲಾಖೆಯಲ್ಲಿ ಕೇವಲ ಶೇ.11.02% ಐಟಿ-ಬಿಟಿ ಇಲಾಖೆಯಲ್ಲಿ ಕೇವಲ ಶೇ.10.86% ಅನುದಾನ ಬಳಕೆಯಾಗಿದೆ. ಕಂದಾಯ ಇಲಾಖೆಯಲ್ಲಿ ಶೇ.46, ಪಶುಸಂಗೋಪನೆಯಲ್ಲಿ ಶೇ.44, ಗ್ರಾಮೀಣಾಭಿವೃದ್ಧಿಯಲ್ಲಿ ಶೇ.11 ಹೀಗೆ ಎಲ್ಲ ಇಲಾಖೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ ಎಂದು ಟೀಕಿಸಿದರು.
ಈಗಾಗಲೇ ನಿವೇಶನ ಪಡೆದವರಿಗೆ ಎ ಖಾತಾಗೆ ವರ್ಗಾವಣೆ ಮಾಡಿಸಲು ಹಣ ಪಾವತಿಸಬೇಕು. ಇದನ್ನು ಕ್ರಾಂತಿ ಎನ್ನುತ್ತಿದ್ದಾರೆ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರಬೇಕು. ಇದು ಹಣ ವಸೂಲಿ ಮಾಡುವ ಸ್ಕೀಮ್‌ ಎಂದು ನುಡಿದರು.
ನವೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂದು ನಾನು ಹೇಳಿದ್ದಾಗ ಟೀಕೆ ಮಾಡಿದ್ದರು. ಈಗ ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಸಿಎಂ ಬದಲಾವಣೆ ಖಚಿತ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು