ಇತ್ತೀಚಿನ ಸುದ್ದಿ
ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣ: ಹೈಕೋರ್ಟ್ ನಿಂದ ಸರ್ಕಲ್ ಇನ್ಸ್ ಪೆಕ್ಟರ್ ಗಂಗಿರೆಡ್ಡಿ ದೋಷಮುಕ್ತಿ
18/11/2022, 11:39

ಮಂಗಳೂರು(reporterkarnataka.com): ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಪೊಲೀಸ್ ವೃತ್ತ ನಿರೀಕ್ಷಕ ಗಂಗಿರೆಡ್ಡಿ ಅವರನ್ನು ರಾಜ್ಯ ಹೈಕೋರ್ಟ್ ದೋಷಮುಕ್ತಗೊಳಿಸಿದೆ.
ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಗಂಗಿ ರೆಡ್ಡಿ ಅವರು ಲಾಯಿಲದಲ್ಲಿ ಹೊಂದಿದ್ದ ಮನೆಗೆ 2009 ರ ಆ.27 ರಂದು ಆಗಿನ ಲೋಕಾಯುಕ್ತ ಡಿವೈಎಸ್ಪಿ ಸದಾನಂದ ವರ್ಣೇಕರ್ ಮತ್ತು ಅವರ ತಂಡ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ವೇತನ ಆದಾಯ ಹೊರತುಪಡಿಸಿ 19 ಲಕ್ಷ ರೂ. ಹೆಚ್ಚಿನ ಆಸ್ತಿ ಪತ್ತೆಯಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿತ್ತು. ತನಿಖೆ ಪೂರ್ಣಗೊಳಿಸಿದ್ದ ಲೋಕಾಯುಕ್ತ ಡಿವೈಎಸ್ಪಿ ಎಂ. ವಿಟ್ಟಲ್ದಾಸ್ ಪೈ ಅವರು ಗಂಗಿ ರೆಡ್ಡಿ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಗಂಗಿ ರೆಡ್ಡಿ ಅವರಿಗೆ 4 ವರ್ಷ ಸಾದಾ ಸಜೆ ಮತ್ತು 5 ಲಕ್ಷ ರೂ. ದಂಡ ವಿಧಿಸಿ 2020 ಆ.27ರಲ್ಲಿ ತೀರ್ಪು ನೀಡಿತ್ತು.
ತೀರ್ಪಿನ ವಿರುದ್ಧ ಗಂಗಿ ರೆಡ್ಡಿ ಅವರು ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಕೃಷಿ ಆದಾಯ, ಊರಿನಲ್ಲಿರುವ ಕಟ್ಟಡಗಳ ಬಾಡಿಗೆ, ಕುಟುಂಬದ ಆದಾಯದಲ್ಲಿ ದೊರೆತ ಚಿನ್ನ ಮಾರಾಟದ ಹಣದ ಲೆಕ್ಕಾಚಾರವನ್ನು ಲೋಕಾಯುಕ್ತ ನ್ಯಾಯಾಲಯ ತನಿಖೆ ವೇಳೆ ಪರಿಗಣಿಸಿರಲಿಲ್ಲ ಎಂಬ ಅಂಶವನ್ನು ಮುಂದಿಟ್ಟಿದ್ದರು. ಇದನ್ನು ಪರಿಗಣಿಸಿ ಹೈಕೋರ್ಟ್ ಗಂಗಿ ರೆಡ್ಡಿ ಅವರ ಶಿಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದೆ.