8:58 PM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಎಐಸಿಸಿ ಒಬಿಸಿ ವಿಭಾಗದ ‘ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರಣೆ

25/07/2025, 20:50

*ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಲು ರಾಹುಲ್ ಗಾಂಧಿ ಬದ್ಧರಾಗಿದ್ದಾರೆ*

*ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯ*

*ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ*

ನವದೆಹಲಿ(reporterkarnataka.com): ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಪ್ರತಿಯೊಬ್ಬ ಪ್ರಜೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವುದು ಅತ್ಯಗತ್ಯ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯವನ್ನು ಬೆಂಬಲಿಸುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸಮಾನತೆಯೆಂಬುದು ದೇಶದಲ್ಲಿ ಸ್ಥಾಪಿತವಾಗಿದೆಯೇ ಎಂಬ ಬಗ್ಗೆ ತಿಳಿದುಕೊಳ್ಳಲು ಇಂತಹ ಸಮೀಕ್ಷೆ ನಡೆಸಲೇಬೇಕಾಗುತ್ತದೆ. ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಬೇಕೆಂಬುದು ರಾಹುಲ್ ಗಾಂಧಿಯವರು ಬದ್ಧರಾಗಿದ್ದಾರೆ. ಕೇವಲ ಜಾತಿಗಣತಿ ಮಾಡುವ ಜೊತೆಗೆ ಆರ್ಥಿಕ ಸಾಮಾಜಿಕ ಸಮೀಕ್ಷೆ ನಡೆಸಿದಾಗ ಮಾತ್ರ, ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ. ಇದು ಭಾಗೀಧಾರಿ ನ್ಯಾಯ ಸಮ್ಮೇಳನದ ಮೂಲ ಉದ್ದೇಶ ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ದೇಶದೆಲ್ಲೆಡೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

*ಸಮೀಕ್ಷೆ ಕೇವಲ ಒಬಿಸಿ ವರ್ಗಕ್ಕೆ ಸಂಬಂಧಿಸಿದ್ದಲ್ಲ:*
ಎಐಸಿಸಿನ ಒಬಿಸಿ ಸಲಹಾ ಮಂಡಳಿಯಲ್ಲಿ ನಾನು ಓರ್ವ ಸದಸ್ಯನಾಗಿದ್ದು, ಜುಲೈ 15 ಹಾಗೂ 16ರಂದು ಬೆಂಗಳೂರಿನಲ್ಲಿ ಮಂಡಳಿಯ ಪ್ರಥಮ ಸಭೆ ನಡೆದಿತ್ತು. ಎಐಸಿಸಿಯ ಹಿಂದುಳಿದ ವರ್ಗಗಳ ವಿಭಾಗಕ್ಕೆ ಡಾ.ಅನಿಲ್ ಜೈಹಿಂದ್ ಅವರು ಮುಖ್ಯಸ್ಥರಾಗಿದ್ದಾರೆ. ಆ ಸಭೆಯಲ್ಲಿ ಬೆಂಗಳೂರು ಘೋಷಣೆ ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. 2015 ರಲ್ಲಿ ಸಾಮಾಜಿಕ ಆರ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸಿದ ರಾಜ್ಯ ಕರ್ನಾಟಕ. 2018ರಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ಜಾತಿಗಣತಿ ವರದಿಯನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಹತ್ತು ವರ್ಷಗಳ ಹಳೆಯ ಅಂಕಿಅಂಶಗಳಾದ್ದರಿಂದ ಕಾನೂನಿನನ್ವಯ ಮರುಗಣತಿ ಮಾಡುವ ಅಗತ್ಯವಿದ್ದುದ್ದರಿಂದ, ಸರ್ಕಾರ ಕರ್ನಾಟಕದಲ್ಲಿ ಮರುಗಣತಿ ಮಾಡಲು ಕ್ರಮ ಕೈಗೊಳ್ಳುತ್ತಿದೆ. ಇದೇ ರೀತಿ ಎಲ್ಲ ರಾಜ್ಯಗಳಲ್ಲಿಯೂ ತೆಲಂಗಾಣ ಮಾದರಿಯಲ್ಲಿ ಜಾತಿಗಣತಿಯನ್ನು ಮಾಡಬೇಕೆಂದು ನಿರ್ಣಯಿಸಲಾಯಿತು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಹಿಂದುಳಿದ ವರ್ಗದ ಏಳಿಗೆಯ ವಿಷಯವನ್ನು ಮುಂಚೂಣಿಗೆ ತಂದ ನಂತರವಷ್ಟೇ, ಕೇಂದ್ರ ಸರ್ಕಾರ ಜಾತಿಗಣತಿಯನ್ನು ತಾನು ಮಾಡುವುದಾಗಿ ಹೇಳಿದೆ. 1931ನೇ ಇಸವಿಯ ನಂತರ ದೇಶದಲ್ಲಿ ಜಾತಿಗಣತಿ ನಡೆದಿಲ್ಲ.ಈ ಸಮೀಕ್ಷೆ ಕೇವಲ ಓಬಿಸಿ ವರ್ಗಕ್ಕೆ ಸಂಬಂಧಿಸಿದ್ದಲ್ಲ. ಕರ್ನಾಟಕ ಎಲ್ಲ ಏಳು ಕೋಟಿ ಜನರ ಸಮೀಕ್ಷೆ ನಡೆಯುತ್ತದೆ ಎಂದರು.

*ಮತಗಳವು; ಸದನದಲ್ಲಿ ರಾಹುಲ್ ಗಾಂಧಿ ಪ್ರಶ್ನೆ:*
ಕರ್ನಾಟಕದಲ್ಲಿ ಮತಗಳವು ಆಗಿದೆ ಎಂಬ ರಾಹುಲ್ ಗಾಂಧಿಯವರು ಪ್ರತಿಪಾದಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿತ್ತು ಮತ್ತು ಚುನಾವಣಾ ಕ್ಷೇತ್ರಕ್ಕೆ ಸಂಬಂಧಪಡದ ಹೊಸ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಈ ರೀತಿ ಇಡೀ ದೇಶದಲ್ಲಿ ನಡೆದಿರುವ ಸಾಧ್ಯತೆಯಿದೆ.ಆದ್ದರಿಂದ ರಾಹುಲ್ ಗಾಂಧಿಯವರು ಈ ಗಂಭೀರ ವಿಚಾರವನ್ನು ಸದನದ ಒಳಗೆ ಹಾಗೂ ಹೊರಗೆ ಪ್ರಸ್ತಾಪಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಎಲ್ಲ ಕ್ಷೇತ್ರದಲ್ಲಿ ಮತಎಣಿಕೆಯಲ್ಲಿ ಕಾಂಗ್ರೆಸ್ ಮುಂದಿದ್ದರೂ, ಮಹದೇವಪುರ ಕ್ಷೇತ್ರದಿಂದಾಗಿ ಕಾಂಗ್ರೆಸ್ ಸೋಲುವಂತಾಯಿತು. ಈ ರೀತಿ ಆಗಿರುವುದನ್ನು ಪ್ರಶ್ನಿಸಿದ ರಾಹುಲ್ ಗಾಂಧಿಯವರು, ಈ ಬಗ್ಗೆ ಸಾಕ್ಷ್ಯಾಧಾರಗಳು ಇವೆ ಎಂದು ತಿಳಿಸಿರುವುದಾಗಿ ಎಂದರು.

*ಮತಗಳವು; ಕರ್ನಾಟಕದ ಆಯ್ದ ಕ್ಷೇತ್ರಗಳಲ್ಲಿ ನಡೆದಿರಬಹುದು:*
ಮತಗಳವು ಆಗಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದಿತ್ತು, ಆದರೆ ಕಾಂಗ್ರೆಸ್ ನವರು ಚುನಾವಣಾ ಆಯೋಗಕ್ಕೆ ದೂರು ನೀಡಿಲ್ಲ ಎಂದು ಚುನಾವಣಾ ಆಯೋಗ ಹೇಳಿರುವ ಬಗ್ಗೆ ಉತ್ತರಿಸಿ, ಚುನಾವಣೆಗೆ ಸಂಬಂಧಿಸಿದ ಪ್ರಕರಣಗಳು ಇತ್ಯರ್ಥವಾಗುವುದರೊಳಗೆ ಸರ್ಕಾರದ ಅವಧಿಯೇ ಮುಗಿದಿರುತ್ತದೆ. ಹಲವು ಪ್ರಕರಣಗಳಲ್ಲಿ ಮತಪಟ್ಟಿ ವಿಚಾರದಲ್ಲಿ ಚುನಾವಣಾ ಆಯೋಗ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆಲವು ಆಯ್ದ ಮತಕ್ಷೇತ್ರಗಳಲ್ಲಿ ಮಾತ್ರ ಮತಗಳವು ಆಗಿದೆ ಎಂದರು.ಬಿಹಾರದ ರೀತಿಯಲ್ಲಿ ದೇಶದ ಉಳಿದೆಡೆಗಳಲ್ಲೂ ಮತಪಟ್ಟಿ ಪರಿಷ್ಕರಣೆ ಮಾಡುವುದಾಗಿ ಚುನಾವಣಾ ಆಯೋಗ ತಿಳಿಸಿರುವ ಬಗ್ಗೆ ಉತ್ತರಿಸಿ, ಚುನಾವಣೆಯ ದಿನ ಬೇರೆಯೇ ಮತದಾರರ ಪಟ್ಟಿ ಬರುವಂತೆ ಮಾಡುತ್ತಾರೆ ಎಂದರು.

*ಅಧಿಕಾರಿಗಳೊಂದಿಗೆ ಸಭೆ ನಡೆಸಿಲ್ಲ:*
ಕಾಂಗ್ರೆಸ್ ನ ರಣದೀಪ್ ಸುರ್ಜೆವಾಲಾ ಅವರು ರಾಜ್ಯದ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದಂತೆ,ಉತ್ತರಭಾರತೀಯ ಹಿರಿಯ ಅಧಿಕಾರಿಗಳೊಂದಿಗೂ ಸಭೆ ನಡೆಸಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಅಧಿಕಾರಿಗಳೊಂದಿಗೆ ಯಾವುದೇ ಸಭೆ ನಡೆಸಿಲ್ಲ ಎಂದರು.

*ಮಹದಾಯಿ ಯೋಜನೆ-ಗೋವಾ ಸಿಎಂ ನಡೆ ಸರಿಯಿಲ್ಲ:*
ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಮಾತನಾಡುತ್ತಾ, ಮಹದಾಯಿ ವಿಚಾರ ನ್ಯಾಯಮಂಡಳಿಯಲ್ಲಿ ಈಗಾಗಲೇ ಇತ್ಯರ್ಥವಾಗಿದ್ದರೂ, ಗೋವಾ ಸಿಎಂ ನ ಹೇಳಿಕೆ ಸರಿಯಾದುದಲ್ಲ. ಮಹದಾಯಿ ಯೋಜನೆಗೆ ಪರಿಸರ ಒಪ್ಪಿಗೆ ಸಿಗಬೇಕಾಗಿದೆಯೇ ಹೊರತು, ಉಚ್ಛ ನ್ಯಾಯಾಲಯದಲ್ಲಿಯೂ ಈ ವಿಚಾರ ಇತ್ಯರ್ಥವಾಗಿದೆ.

*ಗೋವಾ ಸಿಎಂ ಗೆ ನ್ಯಾಯಾಲಯದ ಮೊರೆ ಹೋಗಲು ಲೋಕಸ್ ಸ್ಟ್ಯಾಂಡಿ ಇಲ್ಲ:*
ಅವರು ನ್ಯಾಯಾಲಯದ ಮೊರೆ ಹೋಗಲು ನಮ್ಮ ಅಭ್ಯಂತರವಿಲ್ಲ. ನ್ಯಾಯಮಂಡಳಿ ಈಗಾಗಲೇ ನಿರ್ಧಾರ ಮಾಡಿದ್ದು, ಸುಪ್ರೀಂ ಕೋರ್ಟ್ ಸಹ ಎಲ್ಲಾ ವಿವಾದಗಳನ್ನು ಬಗೆಹರಿಸಿದೆ. ಗೋವಾ ಮುಖ್ಯಮಂತ್ರಿಗಳು ಹೇಳಿರುವ ವಿಚಾರವನ್ನು ಕೇಂದ್ರ ಸರ್ಕಾರದ ಗಮನಕ್ಕೆ ಏಕೆ ತರಬೇಕೆಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಗೋವಾ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದ ಮೊರೆ ಹೋಗಲು ಯಾವ ಹಕ್ಕೂ ಇಲ್ಲ(ಲೋಕಸ್ ಸ್ಯಾಂಡಿ) ಎಂದರು.
ಅರಣ್ಯ ಹಾಗೂ ಪರಿಸರ ಇಲಾಖೆಯು ಕೇಂದ್ರ ಸರ್ಕಾರದಡಿಯಲ್ಲಿದ್ದು, ಕೇಂದ್ರ ಸರ್ಕಾರವು ಈ ಬಗ್ಗೆ ತೀರುವಳಿ ನೀಡಬೇಕಿದೆ ಎಂದರು.

*ಬಿಜೆಪಿಯವರು ಸಂವಿಧಾನವನ್ನು ಯಾವಾಗ ಗೌರವಿಸಿದ್ದಾರೆ:?*
ಇಂದಿನ ಎಐಸಿಸಿ ಒಬಿಸಿ ಸಭೆ ಸಭೆಯ ಬಗ್ಗೆ ಬಿಜೆಪಿ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿ ಎಂದೂ ಇರಲಿಲ್ಲ. ಮಂಡಲ್ ಆಯೋಗದ ವರದಿಯನ್ನು ಬಿಜೆಪಿ ವಿರೋಧಿಸಿತ್ತು. ಮಂಡಲ್ ಗೆ ಪ್ರತಿಯಾಗಿ ಕಮಂಡಲ ಯಾತ್ರೆ ಶುರು ಮಾಡಿದ್ದು ಯಾರು? ಆ ಸಂದರ್ಭದಲ್ಲಿ 200 ಆತ್ಮಹತ್ಯೆಗಳಿಗೆ ಪ್ರಚೋದನೆ ಕೊಟ್ಟವರು ಯಾರು?1993 ನಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದ್ದು ಯಾರು? 74ನೇ ತಿದ್ದುಪಡಿಯನ್ನು ವಿರೋಧಿಸಿದವರು ಯಾರು? ಬಿಜೆಪಿಯವರು ಸಂವಿಧಾನವನ್ನು ಯಾವಾಗ ಗೌರವಿಸಿದ್ದಾರೆ? ಸಂವಿಧಾನ ಜಾರಿಗೆ ಬಂದಾಗ ಆರ್ಗನೈಸರ್ ಪತ್ರಿಕೆಯಲ್ಲಿ ಸಾವರ್ಕರ್ , ಗೋಲ್ವಾಲ್ಕರ್ ಅವರ ಹೇಳಿಕೆಗಳನ್ನು ಗಮನಿಸಬೇಕು. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ನವರು ಸೋಲಿಸಿದರು ಎಂದು ಬಿಜೆಪಿಯವರು ಕೇವಲ ಸುಳ್ಳನ್ನೇ ಹೇಳುವುದು. ಅಂಬೇಡ್ಕರ್ ಅವರು ತಮ್ಮ ಸ್ನೇಹಿತರಿಗೆ ಬರೆದ ಪತ್ರದಲ್ಲಿ ನನ್ನನ್ನು ಸೋಲಿಸಿದವರು ಹಿಂದೂ ಮಹಾಸಭಾದ ಅಧ್ಯಕ್ಷ ಸಾವರ್ಕರ್ ಹಾಗೂ ಕಮ್ಯುನಿಸ್ಟ್ ಪಕ್ಷದ ರಂಗ ಎಂದು ಬರೆದಿದ್ದಾರೆ ಎಂದರು.

*ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಪಕ್ಷದ ವರಿಷ್ಠರಿಂದ ಅಂತಿಮ ನಿರ್ಧಾರ:*
ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರೊಂದಿಗೆ ನೆನ್ನೆ ನಡೆದ ಸಭೆಯಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ತಯಾರಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯವನ್ನು ನೀಡಿದ್ದೇವೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು.

*ಶೀಘ್ರದಲ್ಲಿ ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ:*
ವಿಧಾನ ಪರಿಷತ್ತಿಗೆ ನಾಮನಿರ್ದೇಶನ ವಿಧಾನ ಮಂಡಲದ ಅಧಿವೇಶನಕ್ಕೆ ಮುನ್ನವೇ ಆಗಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಆಗಬಹುದು ಎಂದು ಸಕಾರಾತ್ಮಕವಾಗಿ ಮುಖ್ಯಮಂತ್ರಿಗಳು ಉತ್ತರಿಸಿದರು.

*ಕಾಂಗ್ರೆಸ್ ಎಂದಿಗೂ ಎಸ್ ಡಿ.ಪಿ.ಐ ನ್ನು ಬೆಂಬಲಿಸಿಲ್ಲ,:*
ಎಸ್ ಡಿ. ಪಿ.ಐ ಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಆರೋಪವನ್ನು ತಳ್ಳಿಹಾಕುತ್ತಾ ಕಾಂಗ್ರೆಸ್ ಎಂದಿಗೂ ಎಸ್ ಡಿ.ಪಿ.ಐ ನ್ನು ಬೆಂಬಲಿಸಿಲ್ಲ ಎಂದರು.

*ರಸಗೊಬ್ಬರ ಪೂರೈಸಲು ನಡ್ಡಾ ಅವರಿಗೆ ಪತ್ರ:*
ಭಾರತ ಸರ್ಕಾರವು ಯೂರಿಯಾ ಮತ್ತಿತರ ರಸಗೊಬ್ಬರಗಳನ್ನು ಎಲ್ಲಾ ರಾಜ್ಯಗಳಿಗೆ ಸರಬರಾಜು ಮಾಡಬೇಕು. ಈ ವರ್ಷ ಭಾರತ ಸರ್ಕಾರವು ಸರಬರಾಜು ಮಾಡಿರುವ ರಸಗೊಬ್ಬರವು ಸಾಕಾಗುತ್ತಿಲ್ಲ. ಏಕೆಂದರೆ ರಾಜ್ಯದಲ್ಲಿ ಮುಂಗಾರು ಅವಧಿಗೂ ಮುನ್ನವೇ ಪ್ರಾರಂಭವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಿತ್ತನೆ ಈ ವರ್ಷ ಹೆಚ್ಚಾಗಿದೆ. ಜಲಾನಯನ ಪ್ರದೇಶಕ್ಕೆ ನೀರನ್ನು ಈಗಾಗಲೇ ಹಾಯಿಸಲಾಗಿದೆ. ಹಾಗಾಗಿ ರೈತರು ಹೆಚ್ಚು ರಸಗೊಬ್ಬರವನ್ನು ಬಳಸುತ್ತಿದ್ದಾರೆ. ಹಾಗೆಂದು ನಮ್ಮ ಬಳಿ ರಸಗೊಬ್ಬರವಿಲ್ಲ ಎಂದನೇನಲ್ಲ. ಆದರೆ ರಾಜ್ಯಕ್ಕೆ ಹೆಚ್ಚಿನ ರಸಗೊಬ್ಬರದ ಅಗತ್ಯವಿದೆ. ಸರ್ಕಾರದ ಬಳಿ ರಸಗೊಬ್ಬರವಿಲ್ಲ ಎಂಬ ತಪ್ಪು ಕಲ್ಪನೆ ರೈತರಲ್ಲಿ ಮೂಡಿದ್ದು, ಚಳವಳಿ ಪ್ರಾರಂಭಿಸಿದ್ದಾರೆ. ಯೂರಿಯಾ ಮತ್ತಿತರ ರಾಸಾಯನಿಕ ರಸಗೊಬ್ಬರ ಲಭ್ಯವಿದ್ದು, ಹೆಚ್ಚಿನ ಗೊಬ್ಬರದ ಅವಶ್ಯಕತೆ ಇದೆ ಎಂದು ಜಿ. ಪಿ.ನಡ್ಡಾ ಅವರಿಗೆ ಮುಖ್ಯಮಂತ್ರಿಗಳು ಪತ್ರ ಬರೆದಿರುವುದಾಗಿ ವಿವರಿಸಿದರು.

*ಮಾಹಿತಿ ಇಲ್ಲ:*
ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸರ್ಕಾರದ ನಿರ್ಧಾರದ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪವಾಗಿದ್ದು, ನಿರ್ಧಾರವನ್ನು ಪರಿಪರಿಶೀಲಿಸಬೇಕೆಂದು ಜಿ.ಪಿ . ನಡ್ಡಾ ಅವರ ಕಚೇರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಮಾಹಿತಿ ಇಲ್ಲ ಎಂದರು.

*ನ್ಯಾ.ಕುನ್ಹಾ ಅವರ ವರದಿಯನುಸಾರ ಶಿಸ್ತಿನ ಕ್ರಮವನ್ನು ಜರುಗಿಸಿದೆ:*
ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದ ಪ್ರಕರಣದ ನ್ಯಾಯಮೂರ್ತಿ ಕುನ್ಹಾ ಅವರ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ನ್ಯಾ.ಮೈಕಲ್ ಕುನ್ಹಾ ಅವರ ವರದಿಯನ್ನು ಸರ್ಕಾರ ಅಂಗೀಕರಿಸಿದೆ. ಕೆ.ಎಸ್.ಸಿ.ಎ ಹಾಗೂ ಡಿಎನ್ಎ, ಆರ್.ಸಿ.ಬಿ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗಿದೆ. ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರು, ಎಸ್. ಪಿ ಹಾಗೂ ಎಸಿಪಿ ಹಾಗು ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದೆ. ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ನ್ಯಾ.ಮೈಕಲ್ ಕುನ್ಹಾ ಅವರ ವರದಿಯನುಸಾರ ಸರ್ಕಾರವು ಶಿಸ್ತಿನ ಕ್ರಮವನ್ನು ಜರುಗಿಸಿದೆ ಎಂದರು.

*ಅಧಿಕಾರಿಗಳ ಜಟಾಪಟಿ ಕುರಿತು ಪರಿಶೀಲನೆ:*
ಕರ್ನಾಟಕ ಭವನದಲ್ಲಿ ಅಧಿಕಾರಿಗಳು ಜಟಾಪಟಿ ಮಾಡಿಕೊಂಡು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.

*ಆಗಸ್ಟ್ ನಲ್ಲಿ ರಾಹುಲ್ ಗಾಂಧಿ ಜೊತೆ ಭೇಟಿ:*
ಆಗಸ್ಟ್ 1 ಮತ್ತು 2 ರಂದು ಎಐಸಿಸಿ ಕಾನೂನು ಕೋಶದ ವಿಚಾರ ಸಂಕಿರಣ ನಡೆಯಲಿದ್ದು, ಆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು