ಇತ್ತೀಚಿನ ಸುದ್ದಿ
ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಹೊಣೆ: ಶಾಸಕ ವೇದವ್ಯಾಸ ಕಾಮತ್ ಆರೋಪ
06/06/2025, 22:40

ಮಂಗಳೂರು(reporterkarnataka.com): ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರವಾದ ಹೊಣೆ ಮತ್ತು ಜವಾಬ್ದಾರಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಪಿವಿಎಸ್ ವೃತ್ತದ ಬಳಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಪ್ರಕರಣದಲ್ಲಿ ಸಿಎಂ, ಡಿಸಿಎಂ, ಗೃಹ ಸಚಿವರನ್ನು ಕ್ರಮವಾಗಿ ಎ1 ಎ2, ಎ3 ಆರೋಪಿಗಳನ್ನಾಗಿ ಎಫ್ಐಆರ್ ದಾಖಲಿಸಬೇಕು. ಅವರು ರಾಜೀನಾಮೆ ನೀಡಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.
ವಿಜಯೋತ್ಸವ ಕಾರ್ಯಕ್ರಮಕ್ಕೆ ಬನ್ನಿ, ಭಾಗವಹಿಸಿ ಎಂದು ಸಿದ್ದರಾಮಯ್ಯ ಅವರೇ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದರು. ರಾಜಕೀಯ ಕಾರಣಕ್ಕಾಗಿ ವಿಜಯೋತ್ಸವ ಏರ್ಪಡಿಸಿದ್ದರು.
ಜನರನ್ನು ಬನ್ನಿ ಎಂದು ಕರೆದು ಲಾಠಿಚಾರ್ಜ್ ಮಾಡಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸ್ ಅಧಿಕಾರಿಗಳ ಮೇಲೆ ದೋಷಾರೋಪಣೆ ಮಾಡಿ ಅಮಾನತು ಮಾಡಿದ್ದಾರೆ. ಪಹಲ್ಗಾಮ್ ಘಟನೆಗೆ ಪ್ರಧಾನ ಮಂತ್ರಿ ರಾಜೀನಾಮೆ ಕೇಳಿದ ಸಿದ್ದರಾಮಯ್ಯ ಅವರು ಬೆಂಗಳೂರು ಕಾಲ್ತುಳಿತ ಪ್ರಕರಣದ ಹೊಣೆ ಹೊತ್ತು ರಾಜೀನಾಮೆ ನೀಡಲೇಬೇಕು ಎಂದರು.
ವಿಜಯೋತ್ಸವಕ್ಕೆ ಯಾವುದೇ ಪೂರ್ವ ಸಿದ್ದತೆ ನಡೆಸಿರಲಿಲ್ಲ. ಮೊದಲ ಪಾಸ್ ನೀಡುತ್ತೇವೆ ಎಂದು ಹೇಳಿದ್ದರು. ಬಳಿಕ ಉಚಿತ ಪ್ರವೇಶ ಎಂದಿದ್ದರು. ಗೊಂದಲದಿಂದ ಕಾಲ್ತುಳಿತ ಉಂಟಾಗಿದೆ. ೬೫ ಕೋಟಿ ಜನರು ಭಾಗವಹಿಸಿದ್ದ ಕುಂಭಮೇಳದ ವಿರುದ್ಧ ಮಾತನಾಡಿದ್ದ ಸಿದ್ದರಾಮಯ್ಯ ಅವರ ಸರಕಾರಕ್ಕೆ ಒಂದು ಲಕ್ಷ ಜನರನ್ನು ಸುಧಾರಿಸಲು ಸಾಧ್ಯವಾಗಲಿಲ್ಲ. ಸರಕಾರದ ತೆವಲಿಗೆ ಅಮಾಯಕರು ಬಲಿಯಾಗಬೇಕಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡದಲ್ಲಿ ಸಾಮಾಜಿಕ ಕಾರ್ಯಕರ್ತರಾದ ೮೦ ವರ್ಷದ ಹಿರಿಯರ ಮನೆಗೆ ರಾತ್ರಿ ವೇಳೆ ತೆರಳಿ ಪೊಲೀಸ್ ಇಲಾಖೆ ಕಿರುಕುಳ ನೀಡುತ್ತಿದೆ. ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗ ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಲಿ ಎಂದು ಕಾಮತ್ ಹೇಳಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದಕ್ಕೆ ಬೆಂಗಳೂರು ಕಾಲ್ತುಳಿತ ಪ್ರಕರಣ ಸಾಕ್ಷಿಯಾಗಿದೆ. ಸಿದ್ದರಾಮಯ್ಯ, ಡಿಕೆಶಿ ಅವರು ಆತುರದ ನಿರ್ಧಾರ ಕೈಗೊಂಡು ಅಮಾಯಕರನ್ನು ಬಲಿ ಪಡೆದಿದ್ದಾರೆ. ಕಾರ್ಯಕ್ರಮ ನಡೆಸಲು ಸಾಧ್ಯ ವಿಲ್ಲ ಎಂದು ಪೊಲೀಸ್ ಇಲಾಖೆ ಹೇಳಿದ್ದರೂ, ಸಿಎಂ, ಡಿಸಿಎಂ, ಗೃಹ ಸಚಿವರ ಕುಟುಂಬಸ್ಥರು ಆರ್ಸಿಬಿ ಆಟಗಾರರ ಜತೆ ಸೆಲ್ಫಿ ತೆಗೆದುಕೊಳ್ಳಲು ತರಾತುರಿಯಲ್ಲಿ ವಿಜಯೋತ್ಸವ ನಡೆಸಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಪೊಲೀಸರು ಅಮಾಯಕರ ಮನೆಗಳಿಗೆ ರಾತ್ರಿ ವೇಳೆ ತೆರಳಿ ಪೋಟೋ ತೆಗೆಯುತ್ತಿದ್ದಾರೆ. ಮುಂದಕ್ಕೆ ದಕ್ಷಿಣ ಕನ್ನಡ ಪೊಲೀಸರನ್ನೂ ಕಾಂಗ್ರೆಸ್ ಸರಕಾರ ಕೈಹಿಡಿಯದು ಎಂಬುದನ್ನು ಪೊಲೀಸರು ಅರ್ಥ ಮಾಡಿಕೊಳ್ಳಬೇಕು ಎಂದು ಸತೀಶ್ ಕುಂಪಲ ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಮಂಡಲ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ರಾಜೇಶ್ ಕೊಟ್ಟಾರಿ, ಜಗದೀಶ್ ಆಳ್ವ ಕುವೆತ್ತಬೈಲ್, ಪ್ರಮುಖರಾದ ನಿತಿನ್ಕುಮಾರ್, ರವಿಶಂಕರ ಮಿಜಾರ್, ಸುಧೀರ್ ಶೆಟ್ಟಿಕಣ್ಣೂರು, ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂತೋಷ್ಕುಮಾರ್ ರೈ ಬೋಳಿಯಾರ್, ಭಾಸ್ಕರ ಚಂದ್ರ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ರಾಮ ಅಮೀನ್ ಪಚ್ಚನಾಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್ ಭಾಗವಹಿಸಿದ್ದರು.
ಈ ವೇಳೆ ಸಿಎಂ, ಡಿಸಿಎಂ, ಗೃಹ ಸಚಿವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.