ಇತ್ತೀಚಿನ ಸುದ್ದಿ
ಕಾವೇರಿ ನೀರು ಹಂಚಿಕೆ ವಿವಾದ: ಆಗಸ್ಟ್ 13 ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ
31/07/2026, 20:23
ಬೆಂಗಳೂರು(reporterkarnataka.com): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಆಕ್ರೋಶ ಮುಗಿಲುಮುಟ್ಟಿದ್ದು, ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬೃಹತ್ ಹೋರಾಟಕ್ಕೆ ಕರೆ ನೀಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರ ಸಭೆ ನಡೆದಿದೆ. ಈ ಸಭೆಯಲ್ಲಿ ಕಾವೇರಿ ಜಲವಿವಾದದ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದ್ದು, ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಆಗಸ್ಟ್ 13ರಂದು ‘ಕರ್ನಾಟಕ ಬಂದ್’ ನಡೆಸಲು ಅಧಿಕೃತವಾಗಿ ನಿರ್ಧಾರ ಕೈಗೊಳ್ಳಲಾಗಿದೆ.
ಈಗಾಗಲೇ ಕಾವೇರಿ ಹೋರಾಟದ ಕಾವು ಇಡೀ ರಾಜ್ಯಾದ್ಯಂತ ವ್ಯಾಪಿಸಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೀದಿಗಿಳಿದು ಧರಣಿ ನಡೆಸುತ್ತಿವೆ. ಒಂದೆಡೆ ಮಂಡ್ಯದ ಕೆಆರ್ಎಸ್ (KRS) ಜಲಾಶಯದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪ್ರಮುಖ ಪ್ರತಿಪಕ್ಷ ನಾಯಕರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ರೈತರು ಮತ್ತು ಸಾರ್ವಜನಿಕರು ಕಾವೇರಿ ನೀರು ತಮಿಳುನಾಡಿಗೆ ಹರಿಯುವುದನ್ನು ತಕ್ಷಣವೇ ತಡೆಯಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ, ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ಸಭೆಯು ಕಾವೇರಿ ಹೋರಾಟಕ್ಕೆ ಮತ್ತಷ್ಟು ಕಾವು ನೀಡಿದೆ. ಆಗಸ್ಟ್ 13 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ಗೆ ರಾಜ್ಯದ ಎಲ್ಲಾ ವ್ಯಾಪಾರಸ್ಥರು, ಸಾರಿಗೆ ಸಂಸ್ಥೆಗಳು, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಸಂಪೂರ್ಣ ಬೆಂಬಲ ನೀಡಬೇಕೆಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಕಾವೇರಿ ಕಾವಲು ಪಡೆ ಮತ್ತು ಕನ್ನಡಪರ ಒಕ್ಕೂಟಗಳು ಮುಂಬರುವ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಿವೆ.












