ಇತ್ತೀಚಿನ ಸುದ್ದಿ
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್
01/04/2026, 21:33
ದಾವಣಗೆರೆ(reporterkarnataka.com): ನಗರದ ಹಳೆಪೇಟೆಯ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಅವರ ಪುತ್ರ, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ವೇಳೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಪುತ್ರ ಸಮರ್ಥ್ ಶಾಮನೂರು, ಪುತ್ರಿ ಶ್ರೇಷ್ಠ ಅವರು ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಹಾಗೂ ಅಗ್ನಿ ಕುಂಡೋತ್ಸವದಲ್ಲಿ ಕೆಂಡ ತುಳಿದು ಭಕ್ತಿ ಸಮರ್ಪಿಸಿದರು.


‘ಅಜ್ಜನವರ (ಶಾಮನೂರು ಶಿವಶಂಕರಪ್ಪ) ಕಾಲದಿಂದಲೂ ನಾವೆಲ್ಲ ಪ್ರತಿ ವರ್ಷ ಕೆಂಡ ತುಳಿದು ಭಕ್ತಿ ಸಮರ್ಪಿಸುತ್ತಿದ್ದೇವೆ. ಇದೊಂದು ಸಂಪ್ರದಾಯವಾಗಿದೆ’ ಎಂದು ಸಮರ್ಥ್ ಶಾಮನೂರು ಹೇಳಿದರು.
‘ಗುರುವಾರ ವೀರಭದ್ರೇಶ್ವರ ದೇವರ ರಥೋತ್ಸವ ನಡೆಯಲಿದೆ. ರಾಜ್ಯದಲ್ಲಿ ಉತ್ತಮ ಮಳೆ- ಬೆಳೆ ಆಗಲಿ ಎಂದು ಪ್ರಾರ್ಥಿಸಿದ್ದೇವೆ. ಮತದಾರರು ಪುತ್ರ ಸಮರ್ಥ್ನನ್ನು ಗೆಲ್ಲಿಸಬೇಕು. ಈ ಭಾಗದ ಮನೆ ಮಗನಾಗಿ ಅಭಿವೃದ್ಧಿ ಕೆಲಸ ಮಾಡಲಿದ್ದಾನೆ’ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಕಾಂಗ್ರೆಸ್ನ ಹಿರಿಯ ಮುಖಂಡರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯ ಭಕ್ತರು ಕೆಂಡ ತುಳಿದು ಭಕ್ತಿ ಸಮರ್ಪಿಸಿದರು.
*ಗೆಲುವಿಗಾಗಿ ಪ್ರಾರ್ಥನೆ:*
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯು ರಂಗೇರಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು, ಪಕ್ಷಗಳ ಮುಖಂಡರು ಚುನಾವಣಾ ಅಖಾಡಕ್ಕಿಳಿದು ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಚಾರದ ಭರಾಟೆಯ ಮಧ್ಯೆ ಶಾಮನೂರು ಕುಟುಂಬದವರು ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಹಾಗೂ ಅಗ್ನಿಕುಂಡೋತ್ಸವದಲ್ಲಿ ಕೆಂಡ ತುಳಿದು ಭಕ್ತಿ ಸಮರ್ಪಿಸಿದರು.
ಪುತ್ರ ಸಮರ್ಥ್ ಶಾಮನೂರು ಅವರ ಗೆಲುವಿಗಾಗಿ ತಂದೆ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ್ ಅವರು ವಿಶೇಷ ಪೂಜೆ ಸಲ್ಲಿಸಿದರು ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.












