ಇತ್ತೀಚಿನ ಸುದ್ದಿ
ಸಿಎಂ-ಡಿಸಿಎಂ ಜಗಳದಿಂದ ಅಭಿವೃದ್ಧಿ ಕುಂಟಿತ; ಉಪ ಚುನಾವಣೆಯಲ್ಲಿ ಬಿಜೆಪಿ ಗೆಲವು ಖಚಿತ: ಮಾಜಿ ಸಚಿವ ಶ್ರೀರಾಮುಲು
28/03/2026, 18:30
ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು
info.reporterkarnataka@gmail.com
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವಿನ ಕುರ್ಚಿ ಜಗಳದಿಂದ ಅಭಿವೃದ್ಧಿ ಕುಂಟಿತಗೊಂಡಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.
ಪಟ್ಟಣದ ಮಲ್ಲಿಕಾರ್ಜುನ ನೆಕ್ಕುಂಟಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ದುರ್ಬಲ ಆಡಳಿತ ಹಾಗೂ ಜನಸಾಮಾನ್ಯರ ಮೇಲೆ ತೆರಿಗೆ ಭಾರ ಹೆಚ್ಚಿಸಿರುವುದರಿಂದ ಜನರು ಬೇಸತ್ತು ಹೋಗಿದ್ದಾರೆ.
ಇದರ ಪರಿಣಾಮವಾಗಿ ಉಪ ಚುನಾವಣೆಯಲ್ಲಿ ಬಿಜೆಪಿ ಪರ ಮತದಾನ ಹೆಚ್ಚಾಗಲಿದೆ ಎಂದು ಹೇಳಿದರು.
ತುಂಗಭದ್ರಾ ಎಡದಂಡೆ ಕಾಲುವೆ ವಿಚಾರದಲ್ಲಿಯೂ ಸರ್ಕಾರ ಈ ಭಾಗದ ರೈತರೊಂದಿಗೆ ಚೆಲಾಟವಾಡುತ್ತಿದೆ ಎಂದು ಆರೋಪಿಸಿದ ಅವರು, ಯಾವುದೇ ಮುನ್ಸೂಚನೆ ನೀಡದೆ ಕಾಲುವೆಗೆ ನೀರು ಬಿಡಲಾಗಿದ್ದು, ಪರಿಣಾಮವಾಗಿ ಕಾಲುವೆ ಹಾನಿಗೊಳಗೊಂಡಿದೆ ಎಂದು ನುಡಿದರು.
ಕೂಡಲೇ ಕಾಲುವೆಯನ್ನು ದುರಸ್ತಿ ಮಾಡಿ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿ ವರಿಷ್ಠರು ತಮ್ಮ ಮೇಲೆ ಹಾಕಿರುವುದಾಗಿ ತಿಳಿಸಿದ ಅವರು, 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾಗದಲ್ಲಿ ವ್ಯಾಪಕ ಪ್ರವಾಸ ಕೈಗೊಂಡು ಸಂಘಟನೆ ಬಲಪಡಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ನೆಕ್ಕುಂಟಿ, ಆರ್.ಕೆ. ನಾಯಕ, ಶರಣು ಹಾಗೂ ಬಸವರಾಜ ಹಾಲ್ದವರ್ ಉಪಸ್ಥಿತರಿದ್ದರು.
ಮಸ್ಕಿ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ. ಟಿಕೆಟ್ ಹಂಚಿಕೆ ವಿಷಯವನ್ನು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದೇನೆ. ನನಗೆ ಸಂಘಟನೆ ಜವಾಬ್ದಾರಿ ನೀಡಲಾಗಿದೆ. 2028ರಲ್ಲಿ ಬಿಜೆಪಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಬೇಕು ಎಂಬುದೇ ನನ್ನ ಗುರಿ ಎಂದರು.













