7:48 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ

12/11/2025, 21:56

*ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ: ಸಿಎಂ ಸಿದ್ದರಾಮಯ್ಯ*

*ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿ.ಎಂ*

*ಕುರುಬ ಸಮಾಜಕ್ಕೆ ಏನೂ ಮಾಡಿಲ್ಲ ಎನ್ನುವ ಆರೋಪಕ್ಕೆ ಒಂದೊಂದೇ ಘಟನೆಗಳನ್ನು ಉಲ್ಲೇಖಿಸಿ ಸ್ಪಷ್ಟ ಉತ್ತರ ಕೊಟ್ಟ ಸಿದ್ದರಾಮಯ್ಯ*

ಬೆಂಗಳೂರು(reporterkarnataka.com): ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.
ನಾನು ಮೊದಲಿಂದಲೂ ಸನಾತನವಾದಿ ಆರೆಸ್ಸೆಸ್ ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.


ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ ಆರೆಸ್ಸೆಸ್ ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.
ಈದ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದರು.
ಹಳೆ ಕಟ್ಟಡದಲ್ಲಿದ್ದ ಹಾಸ್ಟೆಲ್ ನಲ್ಲಿ ಓದಿದವರು ಒಳ್ಳೊಳ್ಳೆ ಅಧಿಕಾರಿಗಳಾಗಿದ್ದಾರೆ. ಜಡ್ಜ್ ಗಳೂ ಆಗಿದ್ದಾರೆ. ನಾನು 1983 ರಲ್ಲಿ ಶಾಸಕನಾಗಿ 1984 ರಲ್ಲಿ ಮಂತ್ರಿ ಆದೆ. ನಾನು ಸಾರಿಗೆ ಮಂತ್ರಿ ಆಗಿದ್ದಾಗ 1988 ರಲ್ಲೇ ಕನಕದಾಸರ 500ನೇ ಜಯಂತ್ಸೋವವನ್ನು ಆಚರಣೆ ಮಾಡಿಸಿದೆ. ಇದೇ ಸಂದರ್ಭದಲ್ಲಿ ಸಮಾಜಕ್ಕೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದೆ. ಆಗ ಸಂಘದ ಕಟ್ಟಡದ ಮೇಲೆ 3 ಕೋಟಿ ರೂಪಾಯಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಿದ್ದು ನಾವು. ಇದು ಇತಿಹಾಸ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.
ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ರಾಜಕೀಯಕ್ಕೆ ಬಂದೆ.
ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.
ಸರ್ಕಾರದಿಂದ 600 ಕುರುಬ ಸಮುದಾಯ ಭವನಗಳನ್ನು ಮಾಡಲು ಮುಂದಾಗಿದ್ದು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ದಾವಣಗೆರೆ ಸೇರಿ ರಾಜ್ಯದ ಹತ್ತು ಹಲವು ಕಡೆಗಳಲ್ಲಿ ಸಂಘಕ್ಕೆ ಜಾಗ-ಕಟ್ಟಡ ಉಳಿಸಿಕೊಟ್ಟಿದ್ದೇನೆ. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮಾಡಿದ್ದು ನಾನೇ, ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾನೇ. ಈಗ ನನಗೂ ಮುಕುಡಪ್ಪನಿಗೂ ಆಗುವುದಿಲ್ಲ. ಆದರೆ ಕುರುಬ ಸಮಾಜಕ್ಕೆ ಆಸ್ತಿ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಮುಕುಡಪ್ಪ ಸೇರಿ ಶಿವಣ್ಣ, ಮಾಸ್ತಿ, ಸಿದ್ದಲಿಂಗಯ್ಯ, ನಾಗಣ್ಣ ರೀತಿಯ ಹಲವರು ಜೊತೆಗೆ ನಿಂತು ಸಹಕಾರ ಮಾಡಿದರು.
ಈ ಇತಿಹಾಸ ಗೊತ್ತಿದ್ದವರು ಬಹಿರಂಗವಾಗಿ ಮಾತಾಡಬೇಕಿತ್ತು. ಅವರ್ಯಾರೂ ಮಾತಾಡದ ಕಾರಣಕ್ಕೆ, ನಾನು ಮಾತಾಡಬಾರದು ಅಂದುಕೊಂಡಿದ್ದವನು ಎಲ್ಲವನ್ನೂ ಮಾತಾಡಬೇಕಾಗಿ ಬಂತು ಎಂದರು.
ಯಾರು ಮಾತಾಡಲಿ, ಬಿಡಲಿ ಇದು ಸತ್ಯ. ಇದು ಇತಿಹಾಸ. ಒಟ್ಟಿನಲ್ಲಿ ಸಮಾಜದ ಸಂಘಟನೆಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

*ಎಲ್ಲ ಸಮಾಜಕ್ಕೂ ಮಾಡಿದ್ದೇನೆ:*
ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು‌.
ಅದಕ್ಕೇ ರಾಜ್ಯದ ಎಲ್ಲಾ ಜಾತಿಯ, ಎಲ್ಲಾ ವರ್ಗದ, ಎಲ್ಲಾ ಧರ್ಮದ ಜನರೂ ನನ್ನನ್ನು ಪ್ರೀತಿಸ್ತಾರೆ. ಹೀಗಾಗಿ ನಾನು‌ ನಮ್ಮ ಜಾತಿ ಸೇರಿ ಸಮಾಜದ ಎಲ್ಲಾ ಜಾತಿ, ಧರ್ಮದವರ ಆಶೀರ್ವಾದಕ್ಕಾಗಿ ನಾನು ಋಣಿ ಎಂದು ಕೃತಜ್ಞತೆ ಸಲ್ಲಿಸಿದರು.

((((*Box*)))

*ಜೀವಬೆದರಿಕೆಯಿಂದ ಸಂಘದ ಚುನಾವಣೆವರೆಗೂ: ಸಿಎಂ ಸ್ಮರಣೆ*

ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು. ನಾನು ಹೆದರಲಿಲ್ಲ. ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಇತ್ತು. ಆದರೂ ನಾನು ಹೆದರದೆ ಗ್ರಾಮೀಣ ಭಾಗದ ಸಂಘದ ನಿರ್ದೇಶಕರ ಬೆಂಬಲದಲ್ಲಿ ದಾವಣಗೆರೆಯ ಮಲ್ಲಪ್ಪ ಅವರನ್ನು ರೌಡಿ ಪುಟ್ಟಸ್ವಾಮಿ ವಿರುದ್ಧ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಿಲ್ಲಿಸಿದೆ. ಪುಟ್ಟಸ್ವಾಮಿ ನ್ಯಾಯಾಲಯಕ್ಕೆ ಹೋದರೂ ತೀರ್ಪು ನಮ್ಮ ಪರವಾಗಿ ಬಂತು. ಹೀಗೆ ಸಂಘವನ್ನು ನಾನು ಉಳಿಸಿದೆ.
ಬಳಿಕ ನನ್ನ ಹಳೇ ಕಾರಲ್ಲಿ ಇಡೀ ರಾಜ್ಯ ಸುತ್ತಿ ಸಮಾಜವನ್ನು ಸಂಘಟಿಸಿದೆ. ತಾರಾಕಾನಂದರನ್ನು ಪೀಠಾಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಿದ್ದು ನಾನೇ. ಮುಖ್ಯಮಂತ್ರಿ ಆಗಿದ್ದ ಬಂಗಾರಪ್ಪ ಅವರನ್ನು ಮತ್ತು ಕೇಂದ್ರ ಸಚಿವರಾಗಿದ್ದ ಶರದ್ ಪವಾರ್ ಅವರನ್ನು ಕರೆಸಿ ಪೀಠಕ್ಕೆ ಚಾಲನೆ ನೀಡಲಾಯಿತು. ಹೀಗೆ ಕುರುಬರ ಸಂಘ ಮತ್ತು ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು. ರಾಜ್ಯ ಸುತ್ತಿ ಸಮಾಜದ ಸಂಘಟಿಸಿದ್ದು ನಾನು, ಮುಕುಡಪ್ಪ, ಮಾಸ್ತಿ ಮತ್ತು ಇತರರು. ಆಮೇಲೆ ವಿಶ್ವನಾಥ್ ಅವರನ್ನು ಪೀಠದ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ್ದು ನಾನು. ಈಗ ವಿಶ್ವನಾಥ್ ಬಾಯಿಗೆ ಬಂದಂತೆ ಮಾತಾಡುತ್ತಾರೆ. ಆದ್ದರಿಂದ ಇಡೀ ಸಮಾಜ ಈ ಸತ್ಯವನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಸಮಾಜಕ್ಕೆ ಏನು ಮಾಡಿದ್ದೇನೆ ಎನ್ನುವ ಚರಿತ್ರೆಯನ್ನು ಮನದಟ್ಟು ಮಾಡಿಕೊಳ್ಳಬೇಕು. ಗುರುಪೀಠ ನಾನು ಮಾಡಿದ್ದು ಎಂದು ನಿರಂಜನಾನಂದಪುರಿ ಸ್ವಾಮೀಜಿಗೆ ಹೆದರಿಸುವವರು ಇತಿಹಾಸ ತಿರುಚುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು