11:27 PM Thursday26 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಬೆಂಗಳೂರು ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಸಚಿವ ಈಶ್ವರ ಖಂಡ್ರೆ

26/02/2026, 23:09

ಬೆಂಗಳೂರು(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಇಂದು ಉನ್ನತಾಧಿಕಾರಿಗಳ ಸಭೆ ನಡೆಸಿದ ಸಚಿವರು, ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಸುರೇಶ್ ಕುಮಾರ್ ವಿಷಯ ಪ್ರಸ್ತಾಪಿಸಿ ಬೆಂಗಳೂರು ನಗರದಲ್ಲಿ ರಸ್ತೆಯಲ್ಲಿನ ಧೂಳಿನಿಂದಾಗಿ ವಾಯು ಗುಣಮಟ್ಟ ಕ್ಷೀಣಿಸುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ವೈದ್ಯರು ಬೆಂಗಳೂರು ಹೊರ ವಲಯಕ್ಕೆ ಹೋಗುವಂತೆ ಸಲಹೆ ನೀಡುತ್ತಿದ್ದಾರೆ. ವಾಯು ಗುಣಮಟ್ಟ ಕಾಪಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದರು.

*ಸ್ಥಳೀಯ ಸಂಸ್ಥೆಗೆ ನೋಟಿಸ್ ನೀಡಲು ಸೂಚನೆ:*
ಇದಕ್ಕೆ ಸ್ಪಂದಿಸಿದ ಪರಿಸರ ಸಚಿವರು, ಈಗಾಗಲೇ ಬೆಂಗಳೂರಿನ 11 ಸ್ಥಳಗಳಲ್ಲಿ ಸ್ಥಾಪಿತ ಮತ್ತು 13 ಸಂಚಾರಿ ಘಟಕಗಳ ಮೂಲಕ ವಾಯು ಗುಣಮಟ್ಟ ಸೂಚ್ಯಂಕದ ಮೌಲ್ಯಮಾಪನ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಿ. ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯವು 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸಿ ಎಂದು ಸೂಚನೆ ನೀಡಿದರು.

*ಉಪ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ:*
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅವರ ಅಧ್ಯಕ್ಷತೆಯಲ್ಲೇ ಬೆಂಗಳೂರು ನಗರದ ಎಲ್ಲ ಜನಪ್ರತಿನಿಧಿಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಕೆಲವೇ ದಶಕಗಳ ಹಿಂದೆ ನಿವೃತ್ತರ ಸ್ವರ್ಗ, ಹವಾನಿಯಂತ್ರಿತ ನಗರ ಎಂದು ಖ್ಯಾತಿ ಪಡೆದಿದ್ದು ಉದ್ಯಾನ ನಗರಿ ಬೆಂಗಳೂರಿನಲ್ಲೂ ಇಂದು ಬಿಸಿಲ ಬೇಗೆ ಹೆಚ್ಚುತ್ತಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಇದಕ್ಕೆ ಕಾರಣವಾಗಿದ್ದರೂ, ನಗರದ ಹಸಿರು ಹೊದಿಕೆ ಹೆಚ್ಚಿಸಿ ನಗರದ ವಾಯು ಗುಣಮಟ್ಟ ರಕ್ಷಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

*ಏಕ ಬಳಕೆ ಪ್ಲಾಸ್ಟಿಕ್: ಜನಜಾಗೃತಿಯೊಂದೇ ಮಾರ್ಗ:*
ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆ ಬೆಂಗಳೂರಿನಲ್ಲಿ ವಿಪರೀತವಾಗಿದ್ದು, ಇದರ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ಜಾಗೃತ ದಳ ರಚಿಸಿ ಕ್ರಮ ವಹಿಸಿ ಎಂದು ಸೂಚಿಸಿದರು.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎಷ್ಟು ತ್ಯಾಜ್ಯ ಶುದ್ಧೀಕರಣ ಘಟಕಗಳಿವೆ. ಅವುಗಳ ಪೈಕಿ ಎಷ್ಟು ಕಾರ್ಯನಿರ್ವಹಿಸುತ್ತಿದೆ. ಅವುಗಳ ಸ್ಥಾಪಿತ ಸಾಮರ್ಥ್ಯ ಎಷ್ಟು ಮತ್ತು ಪ್ರಸ್ತುತ ಎಷ್ಟು ಎಂ.ಎಲ್.ಡಿ. ದ್ರವ ತ್ಯಾಜ್ಯ ಸಂಸ್ಕರಣೆ ಆಗುತ್ತಿದೆ. ಎಷ್ಟು ಎಂ.ಎಲ್.ಡಿ. ನೀರು ಸಂಸ್ಕರಣೆ ಆಗದೆ ಜಲ ಮೂಲ ಸೇರುತ್ತಿದೆ ಎಂಬ ಬಗ್ಗೆ ಪರಿಸರಹ ಇಲಾಖೆಯಿಂದ ಖುದ್ದು ಪರಿಶೀಲನೆ ನಡೆಸಿ 1 ತಿಂಗಳೊಳಗೆ ವರದಿ ಸಲ್ಲಿಸುವಂತೆ ತಿಳಿಸಿದರು.
ಪರಿಸರ ಇಲಾಖೆಯಿಂದ ನಗರದಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಜಲ ಕಾಯಿದೆ, ವಾಯು ಕಾಯಿದೆ ಅಡಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಶಾಸಕ ಸುರೇಶ್ ಕುಮಾರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಮತ್ತಿತರರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು