ಇತ್ತೀಚಿನ ಸುದ್ದಿ
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ ಆಫರ್ ಬಹಿರಂಗ
06/08/2026, 19:49
ಬೆಂಗಳೂರು(reporterkarnataka.com): ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಕೊನೆಗೂ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಘೋಷಣೆಯ ಜೊತೆಗೆ ಸಚಿವ ಲಕ್ಷ್ಮಣ ಸವದಿ ಮಾಡಿದ್ದ ಅಚ್ಚರಿಯ ಆಫರ್ನ್ನೂ ಬಹಿರಂಗಪಡಿಸಿದ್ದಾರೆ. ಇಂಡಿಯಲ್ಲಿ ಪಕ್ಷದ ಮುಖಂಡರು, ಬೆಂಬಲಿಗರು ಹಾಗೂ ಆಪ್ತರ ಸಭೆ ನಡೆಸಿದ ಬಳಿಕ ಮಾತನಾಡಿದ ಯಶವಂತರಾಯಗೌಡ ಪಾಟೀಲ್, ಸಚಿವ ಲಕ್ಷ್ಮಣ ಸವದಿ ಖುದ್ದಾಗಿ ಭೇಟಿಯಾಗಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು ಎಂದು ತಿಳಿಸಿದ್ದಾರೆ.
‘ಬೇಕಿದ್ದರೆ ಲಿಂಗಾಯತ ಕೋಟಾದಡಿಯಲ್ಲಿ ನನಗೆ ಸಿಕ್ಕಿರುವ ಸಚಿವ ಸ್ಥಾನವನ್ನೇ ನಿಮಗಾಗಿ ಬಿಟ್ಟುಕೊಡುತ್ತೇನೆ’ ಎಂದು ಲಕ್ಷ್ಮಣ ಸವದಿ ಹೇಳಿದ್ದರು. ಆದರೆ, “ನನಗೆ ಅಷ್ಟೊಂದು ಸಹಾನುಭೂತಿ ಬೇಡ” ಎಂದು ನಾನು ಅವರ ಪ್ರಸ್ತಾವವನ್ನು ಗೌರವಪೂರ್ವಕವಾಗಿ ತಿರಸ್ಕರಿಸಿದ್ದೇನೆ ಎಂದು ಯಶವಂತರಾಯಗೌಡ ಪಾಟೀಲ್ ತಿಳಿಸಿದ್ದಾರೆ.ತಮ್ಮ ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿದ ಬಳಿಕವೇ ರಾಜೀನಾಮೆ ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದು, ಈ ವಿಚಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಹೋಗಿದೆ ಎಂದರು.
“ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಇದೆ. ನನ್ನ ಕುಟುಂಬವೇ ಕಾಂಗ್ರೆಸ್ ಕುಟುಂಬ. ನಾನು ಪಕ್ಷದೊಳಗೂ, ಪಕ್ಷದ ಹೊರಗೂ ಚುನಾವಣೆ ಎದುರಿಸಿ ಗೆದ್ದಿದ್ದೇನೆ” ಎಂದು ಪಕ್ಷದ ಮೇಲಿನ ತಮ್ಮ ನಿಷ್ಠೆಯನ್ನು ಪುನರುಚ್ಚರಿಸಿದರು.












