ಇತ್ತೀಚಿನ ಸುದ್ದಿ
ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ 5 ಪ್ರಮುಖ ನಿರ್ಣಯ ಅಂಗೀಕಾರ
08/06/2026, 21:13
ನವದೆಹಲಿ(reporterkarnataka.com): ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆದ ಮೈತ್ರಿಕೂಟದ ಸಭೆಯಲ್ಲಿ 5 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಟಿಎಂಸಿ ಅಧ್ಯಕ್ಷ ಮಮತಾ ಬ್ಯಾನರ್ಜಿ, ಶರದ್ ಯಾದವ್, ಅಖಿಲೇಶ್ ಯಾದವ್ ಸೇರಿದಂತೆ 25 ಮಿತ್ರಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಡಿಎಂಕೆ, ಆಪ್ ಹಾಗೂ ಟಿವಿಕೆ ಪಕ್ಷಗಳು ಭಾಗಹಿಸಿರಲಿಲ್ಲ.
ಸಭೆಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಎಸ್ ಐಆರ್ ನಲ್ಲಿ ಮತದಾರರ ಹೆಸರನ್ನು ಡಿಲಿಟ್ ಮಾಡಿ ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡುವ ಮೂಲಕ ಮತಗಳ್ಳತನದ ಪ್ರಯತ್ನ ನಡೆದಿದೆ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗೆ ದೂರು ಸಲ್ಲಿಸಲು ತೀರ್ಮಾನಿಸಲಾಗಿದೆ.
ಇತ್ತೀಚೆಗೆ ನಡೆದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕೇಂದ್ರದ ಮೇಲೆ ಒತ್ತಡ ಹೇರಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ವಿದೇಶಾಂಗ ನೀತಿ ಎಡವಟ್ಟಿನಿಂದ ದೇಶದ ಆರ್ಥಿಕ ಸ್ಥಿತಿ ದುರ್ಬಲಗೊಂಡಿರುವ ಬಗ್ಗೆ ಸರ್ವಪಕ್ಷ ಸಭೆ ಕರೆಯಲು ಕೇಂದ್ರಕ್ಕೆ ಆಗ್ರಹಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಮಿತ್ರ ಪಕ್ಷಗಳು ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ಸೇರಿ ಚರ್ಚಿಸಿ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳುವುದು ಹಾಗೂ ಆಗಸ್ಟ್ ನಲ್ಲಿ ಹೈದರಾಬಾದ್ ನಲ್ಲಿ ಮುಂದಿನ ಸಭೆ ನಡೆಸುವುದು ಅಲ್ಲದೇ ಸಂಸತ್ ಅಧಿವೇಶನದ ವೇಳೆ ಪ್ರತಿಪಕ್ಷಗಳು ಜಂಟಿಯಾಗಿ ಹೋರಾಟ ನಡೆಸಿ ಒಗ್ಗಟ್ಟು ಪ್ರದರ್ಶಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.













