ಇತ್ತೀಚಿನ ಸುದ್ದಿ
ಕಾಟಿಪಳ್ಳ ಕೊಲೆ ಪ್ರಕರಣ: ಕಮಿಷನರೇಟ್ ವ್ಯಾಪ್ತಿಯ 4 ಪೊಲೀಸ್ ಠಾಣೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ
25/12/2022, 11:54

ಮಂಗಳೂರು(reporter Karnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ಡಿ. 27, ಬೆಳಿಗ್ಗೆ 6 ಗಂಟೆಯವರಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಈ ವಿಷಯ ತಿಳಿಸಿದ್ದಾರೆ.
ಸುರತ್ಕಲ್ನ ಕಾಟಿಪಳ್ಳ 4 ನೇ ಬ್ಲಾಕ್ನಲ್ಲಿ ಶನಿವಾರ
ದುಷ್ಕರ್ಮಿಗಳು ಜಲೀಲ್(43) ಎಂಬವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. ಹಿನ್ನೆಲೆಯಲ್ಲಿ ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಶಶಿಕುಮಾರ್
ತಿಳಿಸಿದ್ದಾರೆ.
ಐದು ಮಂದಿ ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆ, ಸಾರ್ವಜನಿಕ ಸಭೆಗಳನ್ನು ನಡೆಸುವುದು, ಜಾಥಾ, ಮೆರವಣಿಗೆಗಳು ಮತ್ತು ಬಂದೂಕು, ಸ್ಫೋಟಕ, ಪಟಾಕಿಗಳನ್ನು ಸಾಗಿಸುವುದಕ್ಕೆ ಈ ಅವಧಿಯಲ್ಲಿ ನಿಷೇಧ ಹೇರಲಾಗಿದೆ. ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದು ಮತ್ತು ಜನರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ನಡೆಸುವಂತೆ ಇಲ್ಲ ಎಂದು ತಿಳಿಸಿದ್ದಾರೆ.
ಉದ್ವಿಗ್ನ ಪರಿಸ್ಥಿತಿಯನ್ನು ಕಿಡಿಗೇಡಿಗಳು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಕಾರ್ಖಾನೆಗಳು ಮತ್ತು ಸಂಸ್ಥೆಗಳು ಭಾನುವಾರ, ಸೋಮವಾರ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಸಿಬ್ಬಂದಿಗಳ ಕೆಲಸದ ಸಮಯವನ್ನು ಬದಲಾಯಿಸಿಕೊಳ್ಳಬೇಕು. ಈ ಪ್ರದೇಶಗಳಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಯಾವುದೇ ಕಾರ್ಮಿಕರು ರಸ್ತೆಗಳಲ್ಲಿ ಸಂಚರಿಸದಂತೆ ಕ್ರಮ ವಹಿಸಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ಆದೇಶಿಸಿದ್ದಾರೆ
ಮದ್ಯ ಮಾರಾಟ ನಿಷೇಧ: ಡಿ. 27 ರ ಬೆಳಿಗ್ಗೆ 10 ಗಂಟೆಯವರಿಗೆ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹಾಕಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್ಆರ್ಪಿ ತುಕಡಿಗಳು, ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.