9:45 PM Friday27 - June 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ… ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು;… Chikkamagaluru | ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ: ಸವಾರ… ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ…

ಇತ್ತೀಚಿನ ಸುದ್ದಿ

ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ

27/06/2025, 21:28

ಬೆಂಗಳೂರು(reporterkarnataka.com): ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ಬಾಬು ಜಗಜೀವನ ರಾಮ್ ಭವನದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

*ಕಾಂಗ್ರೆಸ್ ಸರ್ಕಾರದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಪ್ರಾರಂಭ:*
ಇಂದು ಸರ್ಕಾರದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ನಾಡಿನ ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು, 2017ರಲ್ಲಿ ನಮ್ಮ ಸರ್ಕಾರ ಪ್ರತಿ ವರ್ಷ ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ತೀರ್ಮಾನವನ್ನು ಕೈಗೊಂಡಿತು. ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಪ್ರಾರಂಭಿಸಲಾಯಿತು.ಮಾಗಡಿಯ ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿಯ ಅಭಿವೃದ್ಧಿ ಕಾರ್ಯವನ್ನು ಸರ್ಕಾರ ಕೈಗೆತ್ತಿಗೊಂಡಿದೆ ಎಂದರು.

*ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿದ ಕೀರ್ತಿ ಕಂಪೇಗೌಡರದ್ದು:*
ಬೆಂಗಳೂರು ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಲು ಕೆಂಪೇಗೌಡರೇ ಮೂಲ ಕಾರಣ.ವಿಶ್ವಮಟ್ಟದಲ್ಲಿ ಬೆಂಗಳೂರು ಅತಿವೇಗದಲ್ಲಿ ಬೆಳೆಯುತ್ತಿರುವ ನಗರ. ಎಲ್ಲ ಜನರನ್ನೊಳಗೊಂಡ ಅಭಿವೃದ್ಧಿಗೊಳಿಸುವ, ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಕೈಗೊಂಡಿದ್ದರು. ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣವೇ ನಮ್ಮ ಸಂವಿಧಾನದ ಆಶಯ. 500 ವರ್ಷಗಳ ಹಿಂದೆಯೇ ನಾಡಪ್ರಭು ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಿಸುವ ದೂರದೃಷ್ಟಿಯನ್ನು ಹೊಂದಿದ್ದ ಮುತ್ಸದ್ದಿ ನಾಯಕರಾಗಿದ್ದರು. ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿ, ಬೆಂಗಳೂರನ್ನು ವಾಣಿಜ್ಯ ಕೇಂದ್ರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ.

*ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರು ಕಾರಣ:*
ಹಂಪಿ ಬಹಳ ಪ್ರವರ್ಧಮಾನಕ್ಕೆ ಬಂದಿದ್ದ ಕಾಲದಲ್ಲಿ ಪ್ರೇರಣೆ ಪಡೆದು ಬೆಂಗಳೂರನ್ನು ಅಭಿವೃದ್ಧಿಪಡಿಸುವ ಉದ್ದೇಶ ಕೆಂಪೇಗೌಡರಿಗಿತ್ತು.ಹಾಗಾಗಿ ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ, ಸ್ಟಾರ್ಟ್ ಅಪ್ ರಾಜಧಾನಿ , ಶೈಕ್ಷಣಿಕ ಹಾಗೂ ಆರೋಗ್ಯ ಕೇಂದ್ರವಾಗಿದ್ದರೆ ಅದಕ್ಕೆ ಈ ನಗರದ ಅಡಿಪಾಯ ಹಾಕಿದ ಕೆಂಪೇಗೌಡರು ಕಾರಣ ಎಂದರು.

*ಬೆಂಗಳೂರಿನ ಅಭಿವೃದ್ಧಿ ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ:*
ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

*ಬಹುತೇಕ ಜಯಂತಿಗಳನ್ನು ಆಚರಣೆಗೆ ತಂದಿರುವುದು ಕಾಂಗ್ರೆಸ್ ಸರ್ಕಾರ:*
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದು ನಮ್ಮ ಸರ್ಕಾರ. ಸರ್ಕಾರದ ವತಿಯಿಂದ 33 ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಜಯಂತಿಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿರುವ ಬಗ್ಗೆ ಅಭಿಮಾನ, ಗೌರವವಿದೆ. ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಕೃಷ್ಣ ಜಯಂತಿ, ಮಹಾವೀರ ಜಯಂತಿ, ವಾಮನ ಜಯಂತಿ ಸೇರಿದಂತೆ ಮುಖ್ಯವಾದ ಜಯಂತಿಗಳ ಆಚರಣೆಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ.

*ಕೆಂಪೇಗೌಡರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ:*.
ಕೆಂಪೇಗೌಡರ ಆಡಳಿತ ಜನಪರವಾಗಿದ್ದು, ಅವರನ್ನು ನೆನೆದು ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಕೆಂಪೇಗೌಡರ ಬಗ್ಗೆ ಅಗಾಧ ಗೌರವವನ್ನು ಇಟ್ಟುಕೊಂಡಿದ್ದು, ಅವರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ. ಎಲಾ ಜಾತಿಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದರು.

*ಪ್ರಶಸ್ತಿಗೆ ಭಾಜನವಾಗಿದೆ ಸಂಸ್ಥೆಗಳಿಗೆ ಅಭಿನಂದನೆ:*
ಐಐಎಸ್ಸಿ ,ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ,ಮೈಸೂರು ಸೋಪ್ಸ್ ಅಂಡ್ ಡಿಟಜೆಂಟ್ಸ್ ಸಂಸ್ಥೆ ಪ್ರಶಸ್ತಿಗೆ ಭಾಜನವಾಗಿದೆ. ಈ ಸಂಸ್ಥೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಮುಖ್ಯಮಂತ್ರಿಗಳು ಅಭಿನಂದಿಸಿದರು.

*ಕೆಂಪೇಗೌಡ ಭವನಕ್ಕೆ ಶಂಕುಸ್ಥಾಪನೆ:*
ಕಳೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಸುಮನಹಳ್ಳಿ ವೃತ್ತದಲ್ಲಿ ಕೆಂಪೇಗೌಡ ಭವನವನ್ನು ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಆದಷ್ಟೂ ಶೀಘ್ರವಾಗಿ ಕಟ್ಟಡವನ್ನು ನಿರ್ಮಾಣ ಮಾಡಿ ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು