ಇತ್ತೀಚಿನ ಸುದ್ದಿ
ಶೈಕ್ಷಣಿಕ-ಆರೋಗ್ಯ ಸೇವೆಯಲ್ಲಿ ಕೆಎಲ್ಇ ಅಮೋಘ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶಂಸೆ
03/06/2025, 23:30

* ಕಾಹೆರ ಘಟಿಕೋತ್ಸವದಲ್ಲಿ ಸ್ವರ್ಣ ವಿದ್ಯಾರ್ಥಿಗಳಿಗೆ ಅಭಿನಂದನೆ*
ಬೆಳಗಾವಿ(reporterkarnataka.com): ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ) ಸ್ವಾಯತ್ತ ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವದಲ್ಲಿ ಸ್ವರ್ಣ ವಿಜೇತ ವಿದ್ಯಾರ್ಥಿಗಳನ್ನು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅಭಿನಂದಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಗ್ರಾಮೀಣ ಜನರ ಆರೋಗ್ಯ ಸೇವೆ ಮತ್ತು ಮಹತ್ತರ ಶೈಕ್ಷಣಿಕ ಕಾರ್ಯ ನಿರ್ವಹಿಸುತ್ತಿರುವ ಕಾಹೆರ ಘಟಿಕೋತ್ಸವದಲ್ಲಿ ಸಚಿವರು, ಸ್ವರ್ಣ ಪದಕ ಪಡೆದ 35 ವಿದ್ಯಾರ್ಥಿಗಳಿಗೆ ಹಾಗೂ ಪದವಿ ಪಡೆದ 1,844 ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.
ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ) ರಾಜ್ಯದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಯಾಗಿದ್ದು, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಉನ್ನತ ಶಿಕ್ಷಣ, ಸಂಶೋಧನೆ ಮತ್ತು ಗುಣಮಟ್ಟದ ವೃತ್ತಿಪರ ಶಿಕ್ಷಣ ಒದಗಿಸುವ ಗುರಿಯೊಂದಿಗೆ ಅತ್ಯದ್ಭುತ ಕಾರ್ಯ ನಿರ್ವಹಿಸುತ್ತಿದೆ ಎಂದು ಬಣ್ಣಿಸಿದರು.
ವೈದ್ಯಕೀಯ, ದಂತ ವೈದ್ಯಕೀಯ, ಫಾರ್ಮಸಿ, ಆಯುರ್ವೇದ, ಫಿಜಿಯೋಥೆರಪಿ, ನರ್ಸಿಂಗ್, ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ಗಳ ಮುಖೇನ ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಕೆಎಲ್ಇ ಸಂಸ್ಥೆ ಅತ್ಯಮೂಲ್ಯ ಸೇವೆ ಸಲ್ಲಿಸುತ್ತಿದೆ. ಕಾಹೆರ್ ಗುಣಮಟ್ಟದ ಶಿಕ್ಷಣದ ಜತೆಗೆ ಆರೋಗ್ಯ ಸೇವೆ ಸಹ ಒದಗಿಸುತ್ತ ಸಮಾಜಕ್ಕೆ ಸಮರ್ಪಿಸಿಕೊಂಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಘಟಕೋತ್ಸವ ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಜೆಪಿ ನಡ್ಡಾ, ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಕುಲಪತಿ ಪ್ರೊ.ನಿತಿನ್ ಎಂ.ಗಂಗೆ, ಕುಲಸಚಿವ ಪ್ರೊ.ಎಂ.ಎಸ್.ಗಣಾಚಾರಿ ಮತ್ತಿತರ ಗಣ್ಯರು ಹಾಗೂ ಅಧ್ಯಪಾಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.