ಇತ್ತೀಚಿನ ಸುದ್ದಿ
ಕೊಡಗು: ಜೂ.25 ರವರೆಗೆ ಎಲ್ಲ ವಿಧದ ವಾಹನಗಳ ಸಂಚಾರಕ್ಕೆ ಅವಕಾಶ
16/06/2026, 20:51
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದಲ್ಲಿ ನೆಲದಲ್ಲಿ ತೇವಾಂಶ ಅಧಿಕವಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31 ಮತ್ತು ಇತರೆ ಸಂಬಂಧಿತ ಕಾಯ್ದೆಗಳಡಿ ದತ್ತವಾದ ಅಧಿಕಾರದಂತೆ ಕೊಡಗು ಜಿಲ್ಲೆಯಾದ್ಯಂತ ಜೂನ್, 10ರಿಂದ ಜುಲೈ 9 ರವರೆಗೆ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು.
ಆದರೆ, ಪ್ರಸ್ತುತ ಕೋರಿಕೆಯಂತೆ ಹಾಗೂ ಹಾಲಿ ಜಿಲ್ಲೆಯಲ್ಲಿನ ಹವಾಮಾನ ಪರಿಸ್ಥಿತಿಯನ್ನು ಅವಲೋಕಿಸಿ, ಭಾಗಶಃ ಮಾರ್ಪಡಿಸಿ ಎಲ್ಲಾ ವಿಧದ ವಾಹನಗಳ ಸಂಚಾರಕ್ಕೆ ಜೂನ್, 25 ರವರೆಗೆ ಅವಕಾಶ ನೀಡಿದೆ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.












