2:06 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೆಪಿಎಸ್ ಸಿ ಮರುಪರೀಕ್ಷೆಯಲ್ಲೂ ಎಡವಟ್ಟು: ಕಾಂಗ್ರೆಸ್ ಸರಕಾರ ವಿರುದ್ದ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಟೀಕೆ

30/12/2024, 13:58

ಬೆಂಗಳೂರು(reporterkarnataka.com):ಆಗಸ್ಟ್ ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡು ಬಂದ ನಂತರ ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದು ನಿನ್ನೆ ನಡೆಸಲಾದ ಮರುಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಎಡವಟ್ಟುಗಳ ಮೇಲೆ ಎಡವಟ್ಟುಗಳು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್. ಆಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಭಾಷಾಂತರದಲ್ಲಿ ಲೋಪ ದೋಷ, OMR ಶೀಟ್ ಮತ್ತು ನೋಂದಣಿ ಸಂಖ್ಯೆ ಅದಲು ಬದಲು, ಕೆಲವೆಡೆಗಳಲ್ಲಿ 45 ನಿಮಿಷ ತಡವಾಗಿ ಪರೀಕ್ಷೆ ಆರಂಭ ಹೀಗೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿದ್ದ ಭಾನುವಾರದ ಮರುಪರೀಕ್ಷೆ ಮತ್ತೊಮ್ಮೆ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಆರ್. ಆಶೋಕ್ ಅವರು ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮರುಪರೀಕ್ಷೆಗೆ ನೋಂದಣಿ ಮಾಡಿಕೊಂಡ್ಡ 2.109 ಲಕ್ಷ ಅಭ್ಯರ್ಥಿಗಳ ಪೈಕಿ ಕೇವಲ 1.005 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದು, ಆಗಸ್ಟ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಶೇ.62.52% ರಷ್ಟಿದ್ದ ಹಾಜರಾತಿ, ಮರು ಪರೀಕ್ಷೆಯಲ್ಲಿ ಶೇ.47.7%ಕ್ಕೆ ಕುಸಿದಿರುವುದು ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಮೇಲೆ, ಕೆಪಿಎಸ್ ಸಿ ಮೇಲೆ ನಂಬಿಕೆ ಕಳೆದುಕೊಂಡಿರುವುದಕ್ಕೆ ಸಾಕ್ಷಿಯಾಗಿದೆಯಾಗಿದೆ ಎಂದು ಅವರು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ, ತಮ್ಮ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ಸ್ವಜನಪಕ್ಷಪಾತವೇ ಕೆಪಿಎಸ್ ಸಿ ಪರೀಕ್ಷೆಗಳಲ್ಲಿನ ಪದೇ ಪದೇ ಎಡವಟ್ಟಿಗೆ ಕಾರಣ. ಆಗಸ್ಟ್ ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಗೆ 13.40 ಕೋಟಿ ರೂಪಾಯಿ ವೆಚ್ಚವಾಗಿತ್ತು. ಮರುಪರೀಕ್ಷೆಗೂ ಅಷ್ಟೇ ಮೊತ್ತ ಅಥವಾ ಅದಕ್ಕಿಂತ ಹೆಚ್ಚು ಖರ್ಚಾಗಿರುತ್ತದೆ. ಅದರಲ್ಲಿ ಸುಮಾರು 5.3 ಕೋಟಿ ರೂಪಾಯಿ ಪರೀಕ್ಷಾ ಗೋಪ್ಯತೆ ಕಾಪಾಡುವುದಕ್ಕೆ ವೆಚ್ಚ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇಷ್ಟಾದರೂ ಈ ಪರಿ ಎಡವಟ್ಟುಗಳು ಮರುಕಳಿಸಿದೆ ಎಂದರೆ ಇದಕ್ಕೆ ಯಾರು ಹೊಣೆ? ಸಾರ್ವಜನಿಕರ ತೆರಿಗೆ ಹಣವನ್ನ ಹೀಗೆ ಪೋಲು ಮಾಡುವುದು ಯಾವ ನ್ಯಾಯ? ಒಂದಲ್ಲ, ಹತ್ತು ಬಾರಿ ಮರುಪರೀಕ್ಷೆ ನಡೆಸಿದರೂ ಈ ಎಡವಟ್ಟು ಕಾಂಗ್ರೆಸ್ ಸರ್ಕಾರಕ್ಕೆ ಸರಿಯಾಗಿ ಪರೀಕ್ಷೆ ನಡೆಸಲು ಯೋಗ್ಯತೆ ಇಲ್ಲ ಎನ್ನುವ ಅಭಿಪ್ರಾಯ ಅಭ್ಯರ್ಥಿಗಳಲ್ಲಿ ಈಗಾಗಲೇ ಮೂಡಿದೆ. ಆದ್ದರಿಂದಲೇ ಹಾಜರಾತಿ ಗಣನೀಯವಾಗಿ ಕುಸಿದಿದೆ ಎಂದಿದ್ದಾರೆ.
ಆಗಸ್ಟ್ ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಯ ಎಡವಟ್ಟುಗಳಿಗೆ, ಲೋಪ ದೋಷಗಳಿಗೆ ಕಾರಣರಾದ ಪರೀಕ್ಷಾ ನಿಯಂತ್ರಕರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಅದೇ ಹುದ್ದೆಯಲ್ಲಿ ಮುಂದುವರೆಸಿದ್ದೀರಿ. ಕಾರ್ಯದರ್ಶಿಗಳನ್ನು ಮಾತ್ರ ಎತ್ತಂಗಡಿ ಮಾಡಿದ್ದೀರಿ. ತಮ್ಮ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಸ್ವಜನಪಕ್ಷಪಾತ, ಭ್ರಷ್ಟಾಚಾರವೇ ಪದೇ ಪದೇ ಈ ಎಡವಟ್ಟುಗಳು ಮರುಕಳಿಸುತ್ತಿರುವುದಕ್ಕೆ ಮೂಲ ಕಾರಣ.
ಕೆಪಿಎಸ್ಸಿ ಸಂಸ್ಥೆ ಈ ರೀತಿ ನಂಬಿಕೆ ಕಳೆದುಕೊಂಡು, ಹೆಸರು ಕೆಡಸಿಕೊಂಡರೆ ಉತ್ತಮ ಅಭ್ಯರ್ಥಿಗಳನ್ನ, ಪ್ರತಿಭಾವಂತ ಯುವಕರನ್ನ ಸರ್ಕಾರಿ ಸೇವೆಯತ್ತ ಆಕರ್ಷಿಸುವುದು ಹೇಗೆ ಸಾಧ್ಯ? ಆಡಳಿತಕ್ಕೆ ಹೊಸ ರಕ್ತ ಬರದಿದ್ದರೆ ಆಡಳಿತವನ್ನು ಚುರುಕುಗೊಳಿಸುವುದು ಹೇಗೆ? ಯುವ ಜನಾಂಗ ಸಾರ್ವಜನಿಕ ಸೇವೆಗೆ ಬರದಿದ್ದರೆ ಆಡಳಿತಕ್ಕೆ ಹೊಸ ಚೈತನ್ಯ ತುಂಬಲು ಹೇಗೆ ಸಾಧ್ಯ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ, 16 ಸದಸ್ಯರನ್ನು ಒಳಗೊಂಡ ಕೆಪಿಎಸ್ ಸಿ ದೇಶದಲ್ಲೇ ದೊಡ್ಡ ಆಯೋಗವಾಗಿದೆ. ಅವರ ಸಂಬಳ ಸಾರಿಗೆಗೆಂದು ಸರ್ಕಾರ ಕೋಟ್ಯಂತರ ರೂಪಾಯಿ ತೆರಿಗೆ ಹಣ ವ್ಯಯ ಮಾಡುತ್ತದೆ. ಇಷ್ಟಾದರೂ ಒಂದು ಗೊಂದಲಮುಕ್ತ ಪೂರ್ವಭಾವಿ ಪರೀಕ್ಷೆ ನಡೆಸಲು ವಿಫವಾಗುತ್ತದೆ ಎಂದರೆ ಇದನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲೆಬೇಕು. ಲಕ್ಷಾಂತರ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಾಕಷ್ಟು ಹಣ, ಸಮಯ ಸಮರ್ಪಿಸುತ್ತಾರೆ. ಅನೇಕರು ತಮ್ಮ ಭವಿಷ್ಯವನ್ನೇ ಪಣಕ್ಕಿಟ್ಟು ತಯಾರಿ ನಡೆಸುತ್ತಾರೆ. ಅನೇಕ ಬಡ ಅಭ್ಯರ್ಥಿಗಳು ಸಾಲ-ಸೋಲ ಮಾಡಿ ಕೋಚಿಂಗ್ ಪಡೆಯುತ್ತಾರೆ. ಇಷ್ಟೆಲ್ಲಾ ತನು-ಮನ-ಧನ ಧಾರೆ ಎರೆದು ಪರೀಕ್ಷೆಗೆ ಕುಳಿತುಕೊಳ್ಳುವ ಅಭ್ಯರ್ಥಿಗಳಿಗೆ ಪದೇ ಪದೇ ಈ ರೀತಿ ಗೊಂದಲವಾಗುತ್ತಿದ್ದರೆ ಸರ್ಕಾರ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿತ್ತದೆ.
ಅಭ್ಯರ್ಥಿಗಳ ಹಿತದೃಷ್ಟಿಯಿಂದ, ಆಡಳಿತದ ಹಿತದೃಷ್ಟಿಯಿಂದ ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿ, ಕೆಪಿಎಸ್ಸಿಯಲ್ಲಿ ಆಮೂಲಗ್ರ ಬದಲಾವಣೆ ತರುವ ಮೂಲಕ ಇಡೀ ನೇಮಕಾತಿ ವ್ಯವಸ್ಥೆಗೆ ಹೊಸ ಕಾಯಕಲ್ಪ ನೀಡಲಿ ಎಂದು ಅಭ್ಯರ್ಥಿಗಳ ಪರವಾಗಿ ಅಗ್ರಹಿಸುತ್ತೇನೆ‌ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು