ಇತ್ತೀಚಿನ ಸುದ್ದಿ
ಬಿಜೆಪಿ ತರಹ ಕೇವಲ 10% ಜನರ ಕೈಹಿಡಿದು ಶೇ. 90% ಜನರನ್ನು ಕೈಬಿಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
17/03/2025, 13:08

ಬೆಂಗಳೂರು(reporterkarnataka.com): 2024-25 ಕ್ಕೆ 52,0009 ಕೋಟಿ ಇಟ್ಟು, 41509 ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಖಜಾನೆ ಖಾಲಿ ಯಾಗಿದೆ ಎಂಬ ಮಾತು ಸತ್ಯಕ್ಕೆ ದೂರ ತಾನೇ ಎಂದು ಅಂಕಿ ಅಂಶಗಳನ್ನು ಮುಂದಿಟ್ಟು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
1.26 ಕೋಟಿ ಕುಟುಂಬಗಳಿಗೆ
ಯೋಜನೆಗಳು ತಲುಪುತ್ತಿದ್ದು, ಕೊಟ್ಟ ಮಾತಿನಂತೆ ನಡೆದಿದ್ದೇವೆ. ಯಾವ ಕಾರಣಕ್ಕೂ ಯಾವ ಕಾರ್ಯಕ್ರಮವನ್ನೂ ನಿಲ್ಲಿಸುವುದಿಲ್ಲ. ಸಾಲಮನ್ನಾ ಮಾಡಿ ಅಂದರೆ ಹಣ ಎಲ್ಲಿಂದ ತರುವುದು ಎಂದು ಹೇಳಿದ ಬಿಜೆಪಿ, ಅದಾನಿಯವರಿಗೆ 17 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದು ನ್ಯಾಯವೇ ಎಂದು ಪ್ರಶ್ನಿಸಿದರು.
ರಾಜಕೀಯ ದುರುದ್ದೇಶ ಬಿಟ್ಟು ಮಾತನಾಡಬೇಕೆಂದು ವಿರೋಧ ಪಕ್ಷದವರಿಗೆ ಮನವಿ ಮಾಡಿದ ಸಿಎಂ,
ದೇಶದ 100 ಕೋಟಿ ಜನರಿಗೆ ಕೊಳ್ಳುವ ಆಯ್ಕೆಗಳೇ ಇಲ್ಲ ಎಂದು ವರದಿ ಬಂದಿತ್ತು. 20.5 ಕೋಟಿ ಕುಟುಂಬಗಳು ಅಂದರೆ ನೂರು ಕೋಟಿ ಜನರ ವಾರ್ಷಿಕ ಆದಾಯ 87000 ರೂಪಾಯಿಗಿಂತ ಕಡಿಮೆ ಇದೆ ಎನ್ನುವ ವರದಿ ಬಂದಿದೆ. ಅಸಮಾನತೆ ಅಷ್ಟರ ಮಟ್ಟಿಗೆ ಇದೆ. ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇರುವವರೆಗೆ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುವುದಿಲ್ಲ . ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡುವ ಸಾರ್ವತ್ರಿಕ ಮೂಲ ಆದಾಯ ತತ್ವ ಅಗತ್ಯ. ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಜನರಲ್ಲಿ ತುಂಬಿದರೆ ಜನರ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯ. ನಾವು ಸಮಾಜದ 90% ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿದ್ದೇವೆ. ನೀವು ಸಮಾಜದ 10% ಜನರಿಗೆ ಶಕ್ತಿ ತುಂಬುತ್ತಿದ್ದೀರಿ.
94 ರಲ್ಲಿ 34% ಇದ್ದ ಶ್ರೀಮಂತರ ಸಂಖ್ಯೆ ಈಗ 57% ಗೆ ಹೆಚ್ಚಾಗಿದೆ. 50% ಜನರಿಗೆ ಇರುವ ಆರ್ಥಿಕ ಶಕ್ತಿ 15% ಗೆ ಕುಸಿದಿದೆ. ಇದು ಆತಂಕಕಾರಿ ಸಂಗತಿ ಅಲ್ಲವೇ? ಶ್ರೀಮಂತರು ಶ್ರೀಮಂತರಾದರೆ, ಬಡವರು ಬಡವರಾಗುತ್ತಿದ್ದಾರೆ. ಈ
ಅಸಮಾನತೆಯನ್ನು ತೊಡೆದು ಹಾಕಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳಿಂದ ಬಡವರಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲ, ಸ್ವಾಭಿಮಾನ ಹೆಚ್ಚುತ್ತಿದೆ. ಜನರು ಸಾಮಾಜಿಕವಾಗಿ ಆರ್ಥಿಕವಾಗಿ ನಿರ್ಭಯವಾಗಿ, ಅವರ ಬದುಕು ಸುಧಾರಣೆಯಾಗಿದೆ. ಸಮಾನತೆಯ ಭಾವ ಉಂಟಾಗುತ್ತಿದೆ ಎಂದರು.
ವೈರುಧ್ಯತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದು, ರಾಜಕೀಯ ಸ್ವಾತಂತ್ರ್ಯ ದೊರೆತರೆ ಸಾಲದು, ನಮಗೆ ಆರ್ಥಿಕ ಸಾಮಾಜಿಕ ಸ್ವಾತಂತ್ಯ ಸಿಕ್ಕಿಲ್ಲ. ಅದು ಸಿಗಬೇಕಾದರೆ ಕಟ್ಟ ಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ಕೊಂಡೊಯ್ಯುವ ಕೆಲಸವಾಗಬೇಕು ಎಂದು ಅಂಬೇಡ್ಕರ್ ಹೇಳಿದ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಬಿಜೆಪಿಯವರಂತೆ ನಾವು ಕೇವಲ 10% ಜನರ ಕೈಹಿಡಿದು ಶೇ90% ರಷ್ಟು ಜನರ ಕೈ ಬಿಟ್ಟಿಲ್ಲ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ನ ಆರ್ಥಿಕ ನೀತಿ, ನಿಲುವುಗಳು ಯಾರ ಪರವಾಗಿವೆ ಎನ್ನುವ ವ್ಯತ್ಯಾಸವನ್ನು ವಿವರಿಸಿದರು.