2:09 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಇನ್ನಿಲ್ಲ

10/12/2024, 08:41

ಬೆಂಗಳೂರು(reporterkarnataka.com): ಹಿರಿಯ ರಾಜಕಾರಣಿ,ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾದರು.
92ರ ಹರೆಯದ ಮಾಜಿ ವಿದೇಶಾಂಗ ಸಚಿವರೂ ಆಗಿರುವ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ಕೃಷ್ಣ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದರು. ಅವರ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್​ನಿಂದಲೂ ಪದವಿ ಪಡೆದಿದ್ದರು.
*ವಿವಾಹ:* ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್​ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
*ಸ್ವತಂತ್ರ ಅಭ್ಯರ್ಥಿ:* ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸಿದ ಅವರು
1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಗೆಲುವು ಸಾಧಿಸಿದರು.
ಬಳಿಕ ಅವರು ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಸೇರಿದ್ದರು. ಆದರೆ 1967ರ ಚುನಾವಣೆಯಲ್ಲಿ ಮದ್ದೂರಿನಿಂದ ಕಾಂಗ್ರೆಸ್‌ನ ಎಂ.ಎಂ. ಗೌಡ ವಿರುದ್ಧ ಸೋಲನುಭವಿಸಿದ್ದರು. 1968 ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಕಾಲಿಟ್ಟರು. ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸುವಲ್ಲಿ ಎಸ್​​ಎಂ ಕೃಷ್ಣ ಪಾತ್ರ ಪ್ರಮುಖವಾದದ್ದಾಗಿತ್ತು.
*ಪಾಂಚಜನ್ಯ ಯಾತ್ರೆ:* 1999ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರು ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದರು. ಆ ಸಂದರ್ಭದಲ್ಲಿ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್​​ಗೆ ಶಕ್ತಿ ತುಂಬಿತ್ತು.
2004ರ ಡಿಸೆಂಬರ್​​​ನಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಕೃಷ್ಣ 2008 ರ ಮಾರ್ಚ್​ 5 ರಂದು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ರಾಜ್ಯಸಭೆಗೆ ಆಯ್ಕೆಯಾದ ಅವರು 2009 ರ ಮೇ 22ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾದರು.
*ಇಳಿವಯಸ್ಸಿನಲ್ಲಿ ಬಿಜೆಪಿ ಸೇರ್ಪಡೆ:*
ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್​​ನಲ್ಲೇ ಪ್ರಬಲ ನಾಯಕರಾಗಿದ್ದ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ಗೆ
ರಾಜೀನಾಮೆ ನೀಡಿದರು. 2017 ರ ಮಾರ್ಚ್​ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು