3:16 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮಹಿಳಾ ಮತ್ತು ಮಕ್ಕಳ ಇಲಾಖೆಯ ವಿವಿಧ ಯೋಜನೆಗಳ ತ್ರೈಮಾಸಿಕ ಸಭೆ: ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳಿಗೆ ಪುನರ್ವಸತಿ

13/11/2024, 10:54

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸರ್ಕಾರಿ ದತ್ತು ಸಂಸ್ಥೆಯು 0-6 ವರ್ಷದೊಳಗಿನ ಕುಟುಂಬದ ಪ್ರೀತಿ ವಂಚಿತ, ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳ ಪುನರ್ವಸತಿಗೆ ನೆರವಾಗುವ ಒಂದು ಸೂಕ್ತ ಸಂಸ್ಥೆಯಾಗಿದೆಯೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಿಷನ್ ವಾತ್ಸಲ್ಯ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ವತಿಯಿಂದ ಹಮ್ಮಿಕೊಂಡಿದ್ದ, ಇಲಾಖೆಯ ವಿವಿಧ ಯೋಜನೆಗಳ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಇಂತಹ ಮಕ್ಕಳಿಗೆ ಶಾಶ್ವತ ಕುಟುಂಬದ ವ್ಯವಸ್ಥೆಯನ್ನು ಕಾನೂನು ಬದ್ಧವಾಗಿ ಕಲ್ಪಿಸಲು ದತ್ತು ಸಂಸ್ಥೆಯು ನೆರವಾಗುತ್ತದೆ. ವೀಕ್ಷಣಾಲಯ ಕಾನೂನಿನೊಂದಿಗೆ ಸಂಘರ್ಷಕ್ಕೊಳಪಟ್ಟ 18 ವರ್ಷದೊಳಗಿನ ಮಕ್ಕಳ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ಬಾಕಿ ಇರುವ ಅವಧಿಯಲ್ಲಿ ತಾತ್ಕಾಲಿಕವಾಗಿ ಅಭಿರಕ್ಷಣೆ ಒದಗಿಸುವ ಸಂಸ್ಥೆಯಾಗಿದೆ ಎಂದರು.


ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಂದ ಮಕ್ಕಳ ಪ್ರಕರಣ ವಿಚಾರಣೆ ವೇಳೆಯಲ್ಲಿ ರಕ್ಷಣೆ ಮತ್ತು ಘೋಷಣೆ ಅಗತ್ಯವಿರುವ ಮಕ್ಕಳ ಪಾಲನೆ ಮತ್ತು ರಕ್ಷಣೆಗಾಗಿ ಹಾಗೂ ದೀರ್ಘಾವಧಿ ಪುನರ್ವಸತಿಗಾಗಿ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಬಾಲ ಮಂದಿರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಒಟ್ಟು 42 ಮಕ್ಕಳು ದಾಖಲಾಗಿರುತ್ತಾರೆ ಎಂದರು. ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಕೋವಿಡ್-19 ರಿಂದ ಇಬ್ಬರು ಪೋಷಕರನ್ನು ಕಳೆದುಕೊಂಡ 8 ಮಕ್ಕಳಿಗೆ ಮಾಸಿಕ ರೂ.3,500/ಗಳ ಆರ್ಥಿಕ ಧನ ಸಹಾಯವನ್ನು ಆ‌ರ್.ಟಿ.ಜಿ.ಎಸ್ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುತ್ತಿದೆ. ಪಿ.ಎಂ ಕೇರ್ ಫಾರ್ ಚಿಲ್ಡನ್ ಯೋಜನೆಯಡಿ ಮಕ್ಕಳ ಮಾಹಿತಿಯನ್ನು ಪಿ.ಎಂ. ಕೇರ್ ಪೋರ್ಟಲ್‌ನಲ್ಲಿ ಅಳವಡಿಸಲಾಗಿದ್ದು, ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ನುಡಿದರು.
ರಾಷ್ಟ್ರ ವ್ಯಾಪ್ತಿಯಲ್ಲಿ ಚಾಲ್ತಿಯಲ್ಲಿರುವ ಮಕ್ಕಳ ಸಹಾಯವಾಣಿ ಯಾವುದೇ ರೀತಿಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ರಕ್ಷಣೆ ಮತ್ತು ಪೋಷಣೆ ಅವಶ್ಯಕತೆ ಇರುವ ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸಲು ಮಕ್ಕಳ ಸಹಾಯವಾಣಿ- 1098 ನ್ನು ಇ.ಆರ್.ಎಸ್.ಎಸ್-112 ನೊಂದಿಗೆ ವಿಲೀನಗೊಳಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಅನುಸ್ಥಾನಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
6 ವರ್ಷ ವಯಸ್ಸಿನ ಮೇಲ್ಪಟ್ಟ ಬಾಲಕ-ಬಾಲಕಿಯರನ್ನು ಸ್ಥಳೀಯ ಮೂರಾರ್ಜಿ ದೇಸಾಯಿ ಶಾಲೆಗಳಲ್ಲಿ ದಾಖಲು ಮಾಡಲು ಕ್ರಮಕೈಗೊಳ್ಳಿ ಎಂದು ಸೂಚಿಸಿದ ಅವರು ಈಗಾಗಲೇ 1108 ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಇದ್ದು, ಉಳಿದ ಅಂಗನವಾಡಿ ಕೇಂದ್ರಗಳಿಗೆ ನಿವೇಷನ ಒದಗಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಉಪಕಾರ ಯೋಜನೆ, ಪ್ರಾಯೋಜಕತ್ವ ಯೋಜನೆ, ಪೋಕ್ಸೋ ಕಾಯ್ದೆಯಡಿ ಪರಿಹಾರ ಯೋಜನೆ, ಬಾಲನ್ಯಾಯ ಯೋಜನೆ, ಬಾಲ್ಯವಿವಾಹ ತಡೆ ಯೋಜನೆ, ಭಿಕ್ಷಟನಾ ನಿರ್ಮೂಲನಾ ಯೋಜನೆ, ಬಾಲ ಕಾರ್ಮಿಕರ ಕಾಯ್ದೆ, ಮಕ್ಕಳ ಸಹಾಯವಾಣಿ ಪ್ರಕರಣಗಳು, ಕುಟುಂಬ ದೌರ್ಜನ್ಯ ತಡೆ ಯೋಜನೆ, ಬಾಲಕಿಯರ ವಸತಿ ನಿಲಯಗಳ ನಿರ್ವಹಣೆ, ಸಖಿ ವನ್ ಸ್ಟಾಪ್ ಯೋಜನೆ, ಸ್ವಾದರಗೃಹ ಯೋಜನೆ, ಪೋಷಣೆ ಅಭಿಯಾನ, ಮಿಷನ್ ಶಕ್ತಿ ಯೋಜನೆ, ಮಾತೃವಂದನ ಮತ್ತು ಗೃಹಲಕ್ಷ್ಮಿ ಯೋಜನೆಗಳು ಸೇರಿದಂತೆ ಹಲವಾರು ಯೋಜನೆಗಳ ಕುರಿತು ಪ್ರಗತಿ ಪರಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ ಎಸ್.ಹೊಸಮನಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಕೆಜಿಎಫ್ ಡಿಎಸ್‌ಪಿ ಪಾಂಡುರಂಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು