6:50 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

Mangaluru | ದ.ಕ. ಜಿಲ್ಲೆ: ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

11/06/2025, 12:19

ಮಂಗಳೂರು (reporterkarnataka.com): ದ.ಕ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭೂಕುಸಿತ, ನೀರು ಮುಳುಗಡೆ, ಸೇರಿದಂತೆ ತೀವ್ರ ಮಳೆಯಿಂದಾಗಿ ದುರಂತ ಘಟನೆಗಳು ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು ಮೊದಲೇ ಗುರುತಿಸಬೇಕು. ರೆಡ್ ಅಲರ್ಟ್ ಅವಧಿಯಲ್ಲಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅಪಾಯಗಳ ಬಗ್ಗೆ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ ತಿಳಿಸಬೇಕು. ಸಂಭಾವ್ಯ ಭೂಕುಸಿತ ಅನಾಹುತ ಸ್ಥಳಗಳನ್ನು ಗುರುತಿಸದೆ ಅನಾಹುತ ಸಂಭವಿಸಿದರೆ ಆಯಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
ಸ್ಥಳೀಯ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಯೋಜನೆ ರಚಿಸಬೇಕು. ಸಂಬಂಧಪಟ್ಟ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಪರಿಶೀಲಿಸಬೇಕು ಎಂದು ಅವರು ತಿಳಿಸಿದರು.
ಪ್ರಾಕೃತಿಕ ದುರಂತದಲ್ಲಿ ನಡೆಯುವ ಜೀವಹಾನಿ ತಪ್ಪಿಸುವುದೇ ಮೊದಲ ಆದ್ಯತೆಯಾಗಿದೆ. ಪ್ರಮುಖವಾಗಿ ಜನವಸತಿ ಪ್ರದೇಶ ಮತ್ತು ಮನೆಗಳಲ್ಲಿ ವಾಸಿಸುವ ಸಾರ್ವಜನಿಕರ ರಕ್ಷಣೆ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಪ್ರತಿಯೊಂದು ಪ್ರದೇಶಕ್ಕೆ ಭೇಟಿ ನೀಡಿ ಸ್ಥೂಲವಾಗಿ ಪರಿಶೀಲಿಸಬೇಕು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ನಗರ ಪಟ್ಟಣ ಪಂಚಾಯತ್‍ನ ಪ್ರತಿ ವಾರ್ಡು ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿ ವಿಪತ್ತು ನಿರ್ವಹಣೆ ಯೋಜನೆ ತಯಾರಿಸಬೇಕು ಎಂದು ಅವರು ಹೇಳಿದರು.
ಗುಡ್ಡ ಕಡಿದು ಮನೆ ನಿರ್ಮಿಸುವುದು ಅಪಾಯಕಾರಿಯಾಗಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಪ್ರಾಕೃತಿಕ ನೀರಿನ ಹರಿವನ್ನು ತಿರುಗಿಸುವುದು ಕೂಡ ಪ್ರಾಕೃತಿಕ ದುರಂತಗಳಿಗೆ ಕಾರಣವಾಗಬಲ್ಲದು ಎಂದು ಜಿಲ್ಲಾಧಿಕಾರಿ ಹೇಳಿದರು.
ಪ್ರತಿ ಶಾಲಾ ಕಟ್ಟಡಗಳು ಸುಸ್ಥಿತಿಯಲ್ಲಿರುವ ಬಗ್ಗೆ ಸಂಬಂಧಪಟ್ಟ ಮುಖ್ಯೋಪಾಧ್ಯಾಯರಿಂದ ವರದಿ ಪಡೆಯಬೇಕು. ಅಂಗನವಾಡಿ ಕಟ್ಟಡಗಳ ಕ್ಷಮತೆಯನ್ನು ಪರಿಶೀಲಿಸಬೇಕು ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಕೆತ್ತಿಕಲ್‍ನಲ್ಲಿ ಭೂಕುಸಿತ ತಡೆಯುವ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ಸಿಕ್ಕಿದ್ದು ಶೀಘ್ರವೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತ ಇರುವ ಜನವಸತಿ ಪ್ರದೇಶಗಳಿಗೆ ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗಿ ಸಮಸ್ಯೆಯಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಒಂದು ವರ್ಷ ಮೊದಲೇ ತಿಳಿಸಲಾಗಿದ್ದರೂ, ಕ್ರಮಕೈಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ನಾಳೆ ಮಧ್ಯಾಹ್ನದೊಳಗೆ ವರದಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ಮುಂದಿನ ಯೋಜನೆಗಳ ಬಗ್ಗೆ ವರದಿ ನೀಡಬೇಕು. ತಪ್ಪಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ತೀವ್ರ ಗಾಳಿ ಮಳೆಗಳ ಸಂದರ್ಭದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿಗಳು ಎನ್.ಎಂ.ಪಿ.ಟಿ ಬಂದರು ಪ್ರವೇಶಿಸುವ ಕುರಿತು ಎನ್.ಎಂ.ಪಿ.ಎ ಮತ್ತು ಮೀನುಗಾರಿಕೆ ಇಲಾಖೆ ಜಂಟಿಯಾಗಿ ಸೂಕ್ತ ಕಾರ್ಯವಿಧಾನ ರೂಪಿಸುವಂತೆ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ ಮಾತನಾಡಿ ಪ್ರಾಕೃತಿಕ ದುರಂತಗಳ ನಂತರ ಸಂತ್ರಸ್ತರನ್ನು ಸ್ಥಳಾಂತರಿಸುವ ಬದಲು, ರೆಡ್ ಅಲರ್ಟ್ ಸಮಯದಲ್ಲಿಯೇ ಸಂಭಾವ್ಯ ಅನಾಹುತಗಳ ಪ್ರದೇಶದಲ್ಲಿ ನಾಗರೀಕರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಅಂತಹ ಸ್ಥಳಗಳ ಮನೆಗಳಿಗೆ ನೋಟಿಸ್ ಕೊಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ , ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು