ಇತ್ತೀಚಿನ ಸುದ್ದಿ
Mangaluru | ಪಾದುವ ಪದವಿಪೂರ್ವ ಕಾಲೇಜಿನಲ್ಲಿ ವೈಭವದ ‘ಆಟಿದ ಗಮ್ಮತ್’: ತುಳು ಸಂಸ್ಕೃತಿಯ ಅನಾವರಣ
18/08/2026, 14:38
ಮಂಗಳೂರು(reporterkarnataka.com): ನಗರದ ನಂತೂರು ಸಮೀಪದ ಪಾದುವ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ತುಳುನಾಡಿನ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ, ಆಚರಣೆ ಹಾಗೂ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ‘ಆಟಿದ ಗಮ್ಮತ್’ ಕಾರ್ಯಕ್ರಮವನ್ನು ಕಾಲೇಜಿನ ಮುಕ್ತ ಸಭಾಂಗಣದಲ್ಲಿ ಸಂಭ್ರಮದಿಂದ ಆಯೋಜಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಪಾದುವ ಪದವಿಪೂರ್ವ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ವಂ. ಸ್ವಾಮಿ ಅರುಣ್ ವಿಲ್ಸನ್ ಲೋಬೋ ಅವರು ಸಾಂಪ್ರದಾಯಿಕವಾಗಿ ಪಿಂಗಾರ ಹೊಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಮ್ಮ ನಾಡಿನ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರೀತಿಸಿ, ಗೌರವಿಸಿ, ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉಳಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿ. ಜೆ. ಮಧುರಾಜ್ ಗುರುಪುರ ಮಾತನಾಡಿ, ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಆಚರಣೆಗಳು ಹಾಗೂ ಜೀವನ ಪದ್ಧತಿಯನ್ನು ಯುವ ಪೀಳಿಗೆ ಅರಿತು ಗೌರವಿಸಬೇಕು. ಆಧುನಿಕ ಜೀವನಶೈಲಿಯ ನಡುವೆಯೂ ನಮ್ಮ ಮೂಲ ಸಂಸ್ಕೃತಿ ಮತ್ತು ಪರಂಪರೆಯನ್ನು ಮರೆಯದೆ, ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಯುವಜನರ ಮೇಲಿದೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರೋಷನ್ ವಿನ್ಸಿ ಸಂತುಮಯೋರ್ ಅವರು ಮಾತನಾಡಿ, “ಆಟಿದ ಗಮ್ಮತ್” ಕೇವಲ ಮನರಂಜನಾ ಕಾರ್ಯಕ್ರಮವಾಗಿರದೆ, ವಿದ್ಯಾರ್ಥಿಗಳಿಗೆ ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜೀವನ ಮೌಲ್ಯಗಳನ್ನು ಪರಿಚಯಿಸುವ ಅರ್ಥಪೂರ್ಣ ವೇದಿಕೆಯಾಗಿದೆ. ಕಾರ್ಯಕ್ರಮದ ಮೂಲಕ ತಿಳಿದುಕೊಂಡ ಉತ್ತಮ ವಿಚಾರಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಎನ್ನೆಸ್ಸೆಸ್ ನಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಸಸಿ ವಿತರಿಸುವ ಮೂಲಕ ಸನ್ಮಾನ ಮಾಡಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸುವುದರ ಜೊತೆಗೆ, ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಹಮ್ಮಿಕೊಂಡ ಈ ಕಾರ್ಯಕ್ರಮ ವಿಶೇಷ ಗಮನ ಸೆಳೆಯಿತು. ಈ ಕಾರ್ಯಕ್ರಮವನ್ನು ಎನ್ನೆಸ್ಸೆಸ್ ಯೋಜನಾಧಿಕಾರಿ ಯತಿರಾಜ್ ಅವರು ನಡೆಸಿಕೊಟ್ಟರು.
ಎನ್ನೆಸ್ಸೆಸ್ ಸಹಯೋಜನಾಧಿಕಾರಿ ಅನಿಲ್ ಡಿ’ಮೆಲ್ಲೋ ಅವರು ಸ್ವಾಗತಿಸಿದರು. ಎನ್ನೆಸ್ಸೆಸ್ ಸ್ವಯಂಸೇವಕಿ ತನಿಷಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಎನ್ನೆಸ್ಸೆಸ್ ಸಹಯೋಜನಾಧಿಕಾರಿ ಲೊರೆಟ್ಟಾ ಆಂಥೋನಿ ಅವರು ವಂದಿದರು.
ತುಳುನಾಡಿನ ಸಾಂಪ್ರದಾಯಿಕ ಕಲೆ, ಸಂಸ್ಕೃತಿ, ಆಹಾರ ಪದ್ಧತಿ ಹಾಗೂ ಆಚರಣೆಗಳ ಸೊಗಡನ್ನು ಪರಿಚಯಿಸಿದ “ಆಟಿದ ಗಮ್ಮತ್” ಕಾರ್ಯಕ್ರಮವು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಗಮನ ಸೆಳೆಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ತಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಅರಿವು, ಅಭಿಮಾನ ಹಾಗೂ ಗೌರವವನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು.












