ಇತ್ತೀಚಿನ ಸುದ್ದಿ
Mangaluru | ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್; ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
26/10/2025, 20:18
ಮಂಗಳೂರು(reporterkarnataka.com): ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯಲಿರುವ ಅಂತಾರಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ “ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2025” ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 27ರಂದು ಸಂಜೆ ನಗರದ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಅಧ್ಯಕ್ಷತೆಯಲ್ಲಿ ಕ್ರೀಡಾಕೂಟದ ಪೂರ್ವ ಸಿದ್ಧತಾ ಸಭೆ ನಡೆಯಿತು.
ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂತಾರಾರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಏರ್ಪಡಿಸಬೇಕು. ಜಿಲ್ಲೆಯ ಕ್ರೀಡಾ ಮೂಲಸೌಲಭ್ಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ಹೇಳಿದರು.
ಈ ಕ್ರೀಡಾಕೂಟದಲ್ಲಿ ದೇಶ-ವಿದೇಶಗಳಿಂದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅವರಿಗೆ ಕ್ರೀಡಾ ಸೌಲಭ್ಯಗಳು, ವಸತಿ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಒದಗಿಸಬೇಕು. ಕ್ರೀಡಾಂಗಣದ ಒಳಗೆ ಎಲ್ಲಾ ತಾಂತ್ರಿಕ ಅಂಶಗಳನ್ನು ಅಚ್ಚುಕಟ್ಟುಗೊಳಿಸಬೇಕು. ಕ್ರೀಡಾಪಟುಗಳು ಮತ್ತು ತೀರ್ಪುಗಾರರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಕ್ರೀಡಾಕೂಟಕ್ಕೆ ಬರುವ ವಾಹನಗಳಿಗೆ ಉರ್ವಾ ಮಾರ್ಕೆಟ್ ಕ್ರೀಡಾಂಗಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣಕ್ಕೆ ಹೋಗಿ ಬರುವ ರಸ್ತೆ ಲೇಡಿಹಿಲ್ನಿಂದ ಉರ್ವಾಮಾರ್ಕೆಟ್ವರೆಗೆ ಸೌಂದರ್ಯೀಕರಣಗೊಳಿಸಬೇಕು. ತ್ಯಾಜ್ಯ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ಮಾಡಬೇಕು ಎಂದು ಮಹಾನಗರಪಾಲಿಕೆಗೆ ಸೂಚಿಸಿದರು.
ಕ್ರೀಡಾಕೂಟದಲ್ಲಿ ಸಂಸ್ಕøತಿ ಮತ್ತು ಪ್ರವಾಸೋದ್ಯಮ ಬಿಂಬಿಸುವ ಪ್ರದರ್ಶನ ಹಾಗೂ ಮಾಹಿತಿ ಕೇಂದ್ರ ಸಿದ್ಧಗೊಳಿಸಬೇಕು. ಕ್ರೀಡಾಪಟುಗಳು ಪ್ರವಾಸಿ ತಾಣಗಳಿಗೆ ಹೋಗಲಿಚ್ಛಿಸಿದ್ದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆಗೆ ಸೂಚಿಸಿದರು.
ಕ್ರೀಡಾಪಟುಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಆರೋಗ್ಯ ಕೇಂದ್ರವನ್ನು ಕ್ರೀಡಾಂಗಣದಲ್ಲಿ ಸಜ್ಜುಗೊಳಿಸಬೇಕು. ಕ್ರೀಡಾ ವೈದ್ಯಕೀಯ ತಜ್ಞರನ್ನು ನಿಯೋಜಿಸುವಂತೆ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಹಾಗೂ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್, ಸ್ಮಾರ್ಟ್ಸಿಟಿ ಎಂಡಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.













