8:55 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಕ್ಯಾ. ಚೌಟ ಮನವಿ

23/10/2024, 19:57

*ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಕೋರಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್‌ಗೆ ಪತ್ರ*

ಮಂಗಳೂರು(reporterkarnataka.com):
ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ವಿಭಾಗದ 2024-25ನೇ ಸಾಲಿನ ಪ್ರವೇಶ ಶುಲ್ಕವನ್ನು 22,410 ರೂ. ಏರಿಸುವ ಮೂಲಕ ತುಳು ಭಾಷೆ ಅಧ್ಯಯನ ಮಾಡಬಯಸುವವರಿಗೆ ಆರ್ಥಿಕ ಹೊರೆಯುಂಟು ಮಾಡಲಾಗಿದೆ. ಆರಂಭದಲ್ಲಿ ತುಳು ಎಂಎ ಕೋರ್ಸ್‌ಗೆ 15 ಸಾವಿರ ರೂ. ಪ್ರವೇಶ ಶುಲ್ಕ ಇತ್ತು. ಆದರೆ, ಇದೀಗ ಮೂರು ವರ್ಷದ ಬಳಿಕ 22,410 ರೂ.ಗೆ ಶುಲ್ಕ ಏರಿಕೆ ಮಾಡಿರುವುದರಿಂದ ತುಳು ಎಂಎ ಅಧ್ಯಯನಕ್ಕೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ತುಳು ಭಾಷೆಗೆ ಅಧಿಕೃತ ಭಾಷೆ ಮಾನ್ಯತೆ ಪಡೆಯುವುದಕ್ಕೆ ಪ್ರಯತ್ನಗಳು ನಡೆಯುತ್ತಿರಬೇಕಾದರೆ, ರಾಜ್ಯ ಸರ್ಕಾರವು ತುಳು ಭಾಷೆ ಉತ್ತೇಜನಕ್ಕೆ ಸಹಕಾರಿಯಾಗಿರುವ ಎಂಎ ಅಧ್ಯಯನ ಕೋರ್ಸ್‌ನ ಪ್ರವೇಶ ಶುಲ್ಕ ಹೆಚ್ಚಿಸಿರುವುದು ಸರಿಯಲ್ಲ. ಸ್ಥಳೀಯ ಭಾಷೆಗೆ ನೆರವು ನೀಡುವ ನಿಟ್ಟಿನಲ್ಲಿ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡಬೇಕೆಂಬ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ 2020-21ನೇ ಸಾಲಿನಿಂದ 4 ಸಾವಿರ ರೂ. ಕಡಿತಗೊಳಿಸಲಾಗಿತ್ತು. ಆದರೆ, 3 ವರ್ಷದ ಬಳಿಕ ವಿವಿಯು ಪ್ರವೇಶ ಶುಲ್ಕ ಹೆಚ್ಚಿಸುವ ಮೂಲಕ ತುಳು ಭಾಷೆ ಅಧ್ಯಯನಾಸಕ್ತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ. ಹೀಗಾಗಿ, ಕೂಡಲೇ ಶುಲ್ಕ ರಿಯಾಯಿತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕ್ಯಾ. ಚೌಟ ಮನವಿ ಮಾಡಿದ್ದಾರೆ.
ತುಳು ಎಂಎ ವಿಭಾಗಕ್ಕೆ ಕನಿಷ್ಠ 15 ವಿದ್ಯಾರ್ಥಿಗಳು ಪ್ರವೇಶ ಪಡೆದರೆ ಮಾತ್ರ ವಿವಿಯು ತುಳು ಸ್ನಾತಕೋತ್ತರ ವಿಭಾಗವನ್ನು ಮುಂದುವರಿಸುವುದಕ್ಕೆ ಸಾಧ್ಯ. ಇಂಥಹ ಪರಿಸ್ಥಿತಿಯಲ್ಲಿ ಶುಲ್ಕವನ್ನು ಏಕಾಏಕಿ ಹೆಚ್ಚಳ ಮಾಡಿದರೆ ತುಳು ಎಂಎ ಅಧ್ಯಯನಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯೂ ಕುಸಿಯುವ ಆತಂಕವಿದೆ. ಹೀಗಿರುವಾಗ, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ಪದವಿ ತರಗತಿಗಳು ಯಶಸ್ವಿಯಾಗಿ ಮುಂದುವರಿಯಬೇಕಾದರೆ, ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕವನ್ನು ಈ ಮೊದಲಿನಂತೆ ಕಡಿತಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಸಚಿವ ಡಾ.ಎಂ.ಸಿ ಸುಧಾಕರ್‌ ಅವರಿಗೆ ಬರೆದಿರುವ ಪತ್ರದಲ್ಲಿ ಕ್ಯಾ. ಚೌಟ ಅವರು ಒತ್ತಾಯಿಸಿದ್ದಾರೆ.
*ವಿವಿ ಕುಲಪತಿ ಪ್ರೊ. ಧರ್ಮ ಅವರಿಗೂ ಮನವಿ:*
ಮಂಗಳೂರು ವಿವಿ ಕುಲಪತಿಯಾಗಿರುವ ಪ್ರೊ. ಪಿ.ಎಲ್. ಧರ್ಮ ಅವರು ಕೂಡ ತುಳು ಎಂಎ ಅಧ್ಯಯನ ಕೋರ್ಸ್‌ನ ಪ್ರವೇಶ ಶುಲ್ಕವನ್ನು ಕಡಿತಗೊಳಿಸುವುದಕ್ಕೆ ಸಂಬಂಧಪಟ್ಟ ಇಲಾಖೆ ಮೂಲಕ ಸರ್ಕಾರದ ಮಟ್ಟದಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಬೇಕು. ಆ ಮೂಲಕ, ತುಳು ಭಾಷೆ ಕಲಿಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಜತೆಗೆ ತುಳು ಭಾಷೆಯ ಪ್ರೋತ್ಸಾಹಕ್ಕೆ ಕೈಜೋಡಿಸಬೇಕೆಂದು ಸಂಸದ ಕ್ಯಾ. ಚೌಟ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು