ಇತ್ತೀಚಿನ ಸುದ್ದಿ
ಕೇರಳದಲ್ಲಿ ಭಾರೀ ಭೂಕುಸಿತ: ಕನಿಷ್ಠ 4 ಮಂದಿ ಸಾವು; ಹಲವರಿಗೆ ಗಾಯ
01/08/2026, 20:17
ಇಡುಕಿ(reporterlarnataka.com): ಕೇರಳದಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ದೇವಭೂಮಿ ಜಲಾವೃತಗೊಂಡಿದೆ. ಇದೇ ವೇಳೆ ಇಡುಕಿಯಲ್ಲಿ ನಡೆದ ಭೂಕುಸಿತದಿಂದಾಗಿ ಕನಿಷ್ಠ ನಾಲ್ಕು ಮಂದಿ ಸಾವನ್ನಪ್ಪಿದ್ದು, ಹಲವು ಭೂಮಿಯ ಒಳಗೆ ಸಿಲುಕಿರುವ ಆತಂಕ ವ್ಯಕ್ತವಾಗಿದೆ.





ಪರಿಹಾರ ಮತ್ತು ಪತ್ತೆ ಕಾರ್ಯ ಭರದಿಂದ ಸಾಗಿದ್ದು, ರಕ್ಷಣಾ ಪಡೆಗಳು ನಾಪತ್ತೆಯಾದವರ ಹುಡುಕಾಟದಲ್ಲಿ ನಿರತವಾಗಿದೆ.
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದೆ. ವಿಶೇಷವಾಗಿ ಅಲಪ್ಪುಳ, ಎರ್ನಾಕುಲಂ, ಇಡುಕ್ಕಿ, ಕೊಟ್ಟಾಯಂ ಹಾಗೂ ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಮಳೆಯ ಆರ್ಭಟದಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಟ್ಟಗುಡ್ಡಗಳಿಂದ ಆವೃತವಾಗಿರುವ ಇಡುಕ್ಕಿ ಮತ್ತು ಪತ್ತನಂತಿಟ್ಟ ಭಾಗಗಳಲ್ಲಿ ಭೂಸಸಿತ ಹಾಗೂ ಗುಡ್ಡಸರಿತದ ಭೀತಿ ಎದುರಾಗಿದ್ದು, ಮಲೆನಾಡು ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಡಳಿತ ಸೂಚಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಅಲಪ್ಪುಳ ಹಾಗೂ ಕೊಟ್ಟಾಯಂ ಭಾಗಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಕಾವಲು ಪಡೆ ಮತ್ತು ದುರಂತ ನಿರ್ವಹಣಾ ತಂಡಗಳನ್ನು (NDRF/SDRF) ಮುನ್ನೆಚ್ಚರಿಕೆ ಕ್ರಮವಾಗಿ ನಿಯೋಜಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ರಕ್ಷಿಸಲು ಆಯಾ ಜಿಲ್ಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಅಪಾಯಕಾರಿ ರಸ್ತೆಗಳು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಪ್ರಯಾಣಿಸದಂತೆ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಹವಾಮಾನ ಇಲಾಖೆ ಹಾಗೂ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.












