ಇತ್ತೀಚಿನ ಸುದ್ದಿ
‘ನಾ ನಾಯಕಿ’ ಸಮಾವೇಶ: ಜ.16ರಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ: ದ.ಕ. ಜಿಲ್ಲೆಯಿಂದ ನೂರಾರು ಕಾರ್ಯಕರ್ತರು
14/01/2023, 11:58

ಬೆಂಗಳೂರು(reporterkarnataka.com): ರಾಜ್ಯ ಮಹಿಳಾ ಕಾಂಗ್ರೆಸ್ ನಿಂದ
ಬೆಂಗಳೂರಿನ ಅರಮನೆ ಮೈದಾನದಲ್ಲಿ “ನಾ ನಾಯಕಿ” ಸಮಾವೇಶವನ್ನು ಜನವರಿ 16ರಂದು ಹಮ್ಮಿಕೊಳ್ಳಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾವೇಶದಲ್ಲಿ ದ.ಕ. ಜಿಲ್ಲೆಯಿಂದ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಭಾಗವಹಿಸಲಿರುವರು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ತಿಳಿಸಿದ್ದಾರೆ.
ಮಹಿಳೆಯರಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಬೇಕು ಎಂದು ಪಕ್ಷದ ಮಹಿಳಾ ಘಟಕದ ವತಿಯಿಂದ ಪ್ರಿಯಾಂಕ ಗಾಂಧಿಯವರಿಗೆ ಒಕ್ಕೊರಲಿನ ಒತ್ತಾಯ ಮಾಡಲಾಗುವುದು. ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಹಿಳಾ ಕಲ್ಯಾಣಕ್ಕಾಗಿ ಈ ಬಾರಿ ಕಾಂಗ್ರೆಸ್ ನಿಂದ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಅವಕಾಶ ಸಿಗುವಂತಾಗಲು ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸದೃಢ ವ್ಯವಸ್ಥೆ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದೆ. ಈ ಬಗ್ಗೆ ಮಹಿಳೆಯರಿಂದಲೇ ಸಲಹೆ, ಅಭಿಪ್ರಾಯ ಪಡೆಯಲಾಗುತ್ತಿದೆ.
ಈ ಸಮಾವೇಶಕ್ಕೆ ದ.ಕ.ಜಿಲ್ಲೆಯ ಮಾಜಿ ಶಾಸಕಿ, ಟಿಕೆಟ್ ಆಕಾಂಕ್ಷಿಗಳು, ಪದಾಧಿಕಾರಿಗಳು ಸೇರಿದಂತೆ ಪಂಚಾಯಿತಿ ಹಾಗೂ ವಾರ್ಡ್ ನಾಯಕಿಯರು, ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲೆಟ್ ಪಿಂಟೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.