2:45 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

New Delhi | 327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಸರಕಾರ ಅಸ್ತು

14/05/2025, 21:34

* 10.575 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಕೇಂದ್ರದಿಂದ ಅನುಮೋದನೆ

* ಕಾಮಗಾರಿಗೆ ಶೀಘ್ರ ಟೆಂಡರ್‌ ಪ್ರತಿಕ್ರಿಯೆ: ಸಚಿವ ಪ್ರಲ್ಹಾದ ಜೋಶಿ

ನವದೆಹಲಿ(reporterkarnataka.com): ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್‌ ರಸ್ತೆ ₹327 ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ರಾಜ್ಯ ಸರ್ಕಾರ ಟೆಂಡರ್ ಕರೆದು ಕಾರ್ಯಾರಂಭ ಮಾಡುವ ಹಂತ ತಲುಪಿದೆ ಎಂದು ತಿಳಿಸಿದ್ದಾರೆ.
ಈ ಬೈಪಾಸ್‌ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ (alignment) ಮತ್ತು DPR (ವಿವರವಾದ ಯೋಜನಾ ವರದಿ) ಅನ್ನು ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ (Alignment Approval Committee (AAC) ಅನುಮೋದನೆ ನೀಡಿದೆ. ನವಲಗುಂದ ಪಟ್ಟಣಕ್ಕೆ 10.575 ಕಿ.ಮೀ. ವಿಸ್ತೀರ್ಣದ ಬೈಪಾಸ್‌ ರಸ್ತೆ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
ಬೆಣ್ಣೆಹಳ್ಳ ಮತ್ತು ಅದನ್ನು ಸೇರುವ ಸಣ್ಣ ನಾಲಾಗಳು ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಪರಿಸ್ಥಿತಿ ಎದುರಾಗುತ್ತಿತ್ತು. ಇದರಿಂದ ಅಪಾರ ಕೃಷಿ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸುತ್ತಿತ್ತು ಮತ್ತು ಅನೇಕ ಕಡೆ ಸಂಪರ್ಕ ಕಡಿತಗೊಳ್ಳುತ್ತಿತ್ತು. ಇದನ್ನೆಲ್ಲ ಗಮನಿಸಿ ಶಾಶ್ವತ ಪರಿಹಾರ ಎನ್ನುವಂತೆ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಸಿದ ಪ್ರಯತ್ನಕ್ಕೆ ಇದೀಗ ಫಲ ಸಿಕ್ಕಿದೆ. ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ ಅನುಮತಿ ನೀಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.



ಹೆದ್ದಾರಿಯು ನವಲಗುಂದ ಪಟ್ಟಣದ ಮಧ್ಯ ಭಾಗದಿಂದ ಹಾದು ಹೋಗುವ ಕಾರಣ ಟ್ರಾಫಿಕ್ ಸಮಸ್ಯೆಗಳಿಂದಾಗಿ ಪಟ್ಟಣಿಗರು ರೋಸಿ ಹೋಗಿದ್ದರು. ಹೀಗಾಗಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬಹು ವರ್ಷಗಳಿಂದಲೂ ಇದ್ದ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಹೆದ್ದಾರಿ ಸಚಿವ ನಿತಿನ ಗಡ್ಕರಿ ಅವರು ಸ್ಪಂದಿಸಿದ್ದಾರೆ. ಈ ಮೂಲಕ ಜನರ ಆಶಯ ಸಾಕಾರಗೊಂಡಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.
ಉತ್ತರ ಕರ್ನಾಟಕದ ಆರಾಧ್ಯ ದೈವ ಸವದತ್ತಿ ಯಲ್ಲಮ್ಮ ದೇವಸ್ಥಾನ ಸೇರಿದಂತೆ ವಿವಿಧ ಐತಿಹಾಸಿಕ, ಧಾರ್ಮಿಕ ನಗರಗಳಿಗೆ ಸಂಪರ್ಕ ಜೋಡಿಸುತ್ತದೆ ನವಲಗುಂದ ಪಟ್ಟಣ. ಹೀಗಾಗಿ ಈ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರುತ್ತದೆ. ಬೈಪಾಸ್ ರಸ್ತೆ ನಿರ್ಮಾಣದಿಂದ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳಿಗೂ ಅನುಕೂಲವಾಗಲಿದೆ ಎಂದಿದ್ದಾರೆ.
ಕಳೆದ 10 ವರ್ಷಗಳ ಅವಧಿಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಸಂಪೂರ್ಣ ಚಿತ್ರಣವೇ ಬದಲಾಗಿದೆ. ಆ ಮಟ್ಟದ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಹೆದ್ದಾರಿಗಳ ಅಭಿವೃದ್ಧಿಗೆ ಸದಾ ಅಗತ್ಯ ನೆರವು ನೀಡುತ್ತಿದ್ದಾರೆಂದು ಈರ್ವರಿಗೂ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ.

*ಶೀಘ್ರ ಕಾಮಗಾರಿಗೆ ಒತ್ತಾಯ:* ನವಲಗುಂದ ಬೈಪಾಸ್‌ ನಿರ್ಮಾಣ ಸಂಬಂಧ ಈಗಾಗಲೇ ಡಿಪಿಆ‌ರ್ ಸಿದ್ಧಗೊಂಡಿದ್ದು, ರಾಜ್ಯ ಸರ್ಕಾರ ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳಿಗೆ ತ್ವರಿತ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

*ಹುಬ್ಬಳ್ಳಿ-ಕುಷ್ಟಗಿ ನೂತನ ಎಕ್ಸ್‌ಪ್ರೆಸ್‌ ರೈಲ್ವೆಗೆ ಅನುಮೋದನೆ:* ಹುಬ್ಬಳ್ಳಿ-ಕುಷ್ಟಗಿ ಮಧ್ಯೆ ನೂತನ ಎಕ್ಸ್‌ಪ್ರೆಸ್‌ ರೈಲ್ವೆ ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಲ್ಲಿ ಮನವಿ ಮಾಡಿದ್ದೆ. ಇದೀಗ ಸ್ಪಂದಿಸಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ನಾಳೆ(ಮೇ 15) ಬೆಳಗ್ಗೆ 10.30ಕ್ಕೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಕುಷ್ಟಗಿಯಿಂದ‌ ಹುಬ್ಬಳ್ಳಿಗೆ ಸಂಚರಿಸುವ ನೂತನ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ-ಕುಷ್ಟಗಿ ಎಕ್ಸ್‌ಪ್ರೆಸ್‌ ರೈಲು ಪ್ರತಿನಿತ್ಯ ಸಂಚರಿಸಲಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು