2:18 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪೌರ ಕಾರ್ಮಿಕರಿಗೆ 5 ಲಕ್ಷದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ

29/11/2024, 23:10

ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಈಗಾಗಲೇ ನೀಡಿರುವ ಆರೋಗ್ಯ ವಿಮೆ ಕವರೇಜನ್ನು 5 ಲಕ್ಷ ರೂ.ಗೆ ಏರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಫಾಯಿ ಕರ್ಮಚಾರಿ/ಮ್ಯಾನುವೆಲ್ ಸ್ಕ್ಯಾವೆಂಜರ್ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮಹಾನಗರಪಾಲಿಕೆಯ ನಿಧಿಯಿಂದ 708 ಮಂದಿ ಪೌರಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಖಾಸಗಿ ವಿಮಾ ಕಂಪೆನಿ ಮೂಲಕ ರೂ. 3 ಲಕ್ಷದ ಆರೋಗ್ಯ ವಿಮೆ ನೀಡಲಾಗಿದೆ. ಈ ವಿಮಾ ಮೊತ್ತವು ಕಡಿಮೆಯಾಗಿದ್ದು, ಗಂಭೀರ ಖಾಯಿಲೆ ಚಿಕಿತ್ಸೆಗಳಿಗೆ ಸಾಕಾಗುವುದಿಲ್ಲ ಎಂದು ಪೌರಕಾರ್ಮಿಕರಿಂದ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಮುಂದಿನ ಸಾಲಿನಿಂದ ಆರೋಗ್ಯ ವಿಮಾ ಮೊತ್ತವನ್ನು ರೂ. 5 ಲಕ್ಷಕ್ಕೆ ಏರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಪೌರ ಕಾರ್ಮಿಕರ ಪಟ್ಟಿಯಲ್ಲಿ ನಕಲಿ ವ್ಯಕ್ತಿಗಳು ಸೇರ್ಪಡೆಯಾಗಿರುವ ದೂರಿನ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಅವರು ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಸೂಚಿಸಿದರು. ಸರಕಾರ ನಿಗದಿಪಡಿಸಿದ ಕರ್ತವ್ಯಗಳ ಬದಲಾಗಿ ಇತರೆ ಅನ್ಯ ಕೆಲಸಗಳಿಗೆ ಪೌರಕಾರ್ಮಿಕರನ್ನು ನಿಯೋಜಿಸಬಾರದು ಎಂದು ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದರು.
ಸಂಜೀವಿನಿ ಒಕ್ಕೂಟದಲ್ಲಿ ದುಡಿಯುತ್ತಿರುವ ಸಿಬ್ಬಂಧಿಗಳಿಗೆ ಗುತ್ತಿಗೆದಾರರ ಬದಲು ಗ್ರಾಮ ಪಂಚಾಯತ್‍ಗಳ ನೇರ ಅಧೀನದಲ್ಲಿ ವೇತನ ಪಾವತಿಸುವ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಪೌರಕಾರ್ಮಿಕರ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲು ಈಗಾಗಲೇ ಪೌರಾಡಳಿತ ನಿರ್ದೇಶನಾಲಯದ ಮಾರ್ಗದರ್ಶನ ಕೋರಲಾಗಿದೆ ಎಂದು ಅವರು ತಿಳಿಸಿದರು.
*ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ*
ಇದೇ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಆಯಾ ಉಪವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತೀ ತಿಂಗಳು ಕುಂದುಕೊರತೆ ಸಭೆ ನಡೆಸಬೇಕು ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಕ್ರೀಡಾಪಟುಗಳಿಗೆ ಸೌಲಭ್ಯಗಳನ್ನು ಆಯಾ ಸ್ಥಳೀಯ ಸಂಸ್ಥೆಗಳು ತಮ್ಮ ಮೀಸಲು ನಿಧಿಯಲ್ಲಿ ಮಂಜೂರು ಮಾಡಬಹುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ ಅವರು, ಪ್ರಸಕ್ತ ಸಾಲಿನಲ್ಲಿ ಜನವರಿಯಿಂದ ನವೆಂಬರ್ 20ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 36 ಪ್ರಕರಣಗಳಲ್ಲಿ ರೂ. 34 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ವಿವಿಧ ಇಲಾಖೆ ಅಧಿಕಾರಿಗಳು, ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಪೌರಕಾರ್ಮಿಕರ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು